Site icon Vistara News

ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅವಕಾಶ ನೀಡಿ: ಸಿಎಂ ಸಿದ್ದರಾಮಯ್ಯಗೆ ಎನ್‌ಎಸ್‌ಯುಐ ಮನವಿ

CM Siddaramaiah

ನವ ದೆಹಲಿ: ಕರ್ನಾಟಕದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗೆ ಅವಕಾಶ ಒದಗಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ (NSUI) ಅಧ್ಯಕ್ಷ ಕೀರ್ತಿ ನೇತೃತ್ವದ ಪದಾಧಿಕಾರಿಗಳ ತಂಡ ಮನವಿ ಮಾಡಿದೆ.

ನವ ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನು ಎನ್‌ಎಸ್‌ಯುಐ ಪದಾಧಿಕಾರಿಗಳ ತಂಡ ಭೇಟಿಯಾಗಿ ಮನವಿ ಸಲ್ಲಿಸಿದೆ.

ಸೆ.22 ರಂದು ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಿರುವ NSUI ಅಭ್ಯರ್ಥಿಗಳ ಪರವಾಗಿ ಕರ್ನಾಟಕದ 50 ಮಂದಿ NSUI ಕಾರ್ಯಕರ್ತರು ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿರುವುದಾಗಿ ರಾಜ್ಯಾದ್ಯಕ್ಷ ಕೀರ್ತಿ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಈ ವೇಳೇ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಶಸ್ಸು ಸಿಗಲಿ ಎಂದು ಮುಖ್ಯಮಂತ್ರಿಗಳು ಕಾರ್ಯಕರ್ತರಿಗೆ ಹಾರೈಸಿದರು.

ಇದನ್ನೂ ಓದಿ | Women’ Reservation bill : ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್‌ ಏನಂತಾರೆ?

ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್‌ ಏನಂತಾರೆ?

ಬೆಂಗಳೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು (Women Reservation Bill) ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ವಾಗತಿಸಿದ್ದಾರೆ. ಅದೇ ವೇಳೆ ಇದು ಕೇವಲ ಉಳ್ಳವರ, ಶ್ರೀಮಂತರ, ಮೇಲ್ವರ್ಗದ ಮಹಿಳೆಯರ ಪರ ಮೀಸಲಾತಿಯಾಗಬಾರದು. ಹಿಂದುಳಿದ ಜಾತಿಯ ಮಹಿಳೆಯರಿಗೆ (other Backward Class Women) ಒಳಮೀಸಲಾತಿ (Internal Reservation) ನೀಡಬೇಕು ಎಂಬ ಬೇಡಿಕೆಯನ್ನು ಮಂಡಿಸಿದ್ದಾರೆ. ಒಂದು ವೇಳೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ ಎಂದು ಎಚ್ಚರಿಸಿದ್ದಾರೆ. ಅದರ ಜತೆಗೆ ಹಿಂದೆ ಮಹಿಳಾ ಮೀಸಲಾತಿಯನ್ನು ಖಂಡತುಂಡವಾಗಿ ವಿರೋಧಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adithyanath) ಈಗೇನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಹಿಂದುಳಿದ ಜಾತಿಗಳ ಮಹಿಳೆಯರಿಗೆ ಒಳ ಮೀಸಲಾತಿ ಅಗತ್ಯ

ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗಾಗಲೇ ರಾಜಕೀಯ ಮೀಸಲಾತಿ ಇರುವುದರಿಂದ ಆ ಸಮುದಾಯಗಳ ಮಹಿಳೆಯರಿಗೆ ಮೀಸಲಾತಿ ನೀಡುವುದು ಸಮಸ್ಯೆಯಾಗಲಾರದು ಎಂದಿದ್ದಾರೆ ಸಿದ್ದರಾಮಯ್ಯ.
ಬಿಜೆಪಿಯ ಮೀಸಲಾತಿಯಲ್ಲಿ ರಾಜಕೀಯ ನ್ಯಾಯಕ್ಕಿಂತ ಲಾಭದ ಆಸೆ ವಾಸನೆ

ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿಯ ಮಸೂದೆಯನ್ನು ವಿವರವಾಗಿ ಪರಿಶೀಲಿಸಿದರೆ ಮಹಿಳೆಯರಿಗೆ ರಾಜಕೀಯ ನ್ಯಾಯಕೊಡಿಸುವುದಕ್ಕಿಂತಲೂ ಹೆಚ್ಚಾಗಿ ರಾಜಕೀಯ ಲಾಭ ಪಡೆಯುವ ಸ್ವಾರ್ಥವೇ ಕಾಣುತ್ತಿದೆ. ಈಗಿನ ಮಸೂದೆಯನ್ನು ಇದೇ ರೂಪದಲ್ಲಿ ಜಾರಿಗೆ ತರಲು ಹೊರಟರೆ ಮಹಿಳೆಯರು ರಾಜಕೀಯ ಮೀಸಲಾತಿ ಪಡೆಯಲು ಇನ್ನೆರಡು ದಶಕಗಳ ಕಾಲ ಕಾಯಬೇಕಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

2010ರಲ್ಲೇ ಈ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು

ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕೆಂಬ ಪ್ರಾಮಾಣಿಕ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದರೆ 2010ರಲ್ಲಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದಿರುವ ಮಸೂದೆಯನ್ನೇ ಲೋಕಸಭೆಯಲ್ಲಿ ಮಂಡಿಸಬೇಕಾಗಿತ್ತು. 2010ರಲ್ಲಿ ಮಸೂದೆಗೆ ರಾಜ್ಯಸಭೆ ನೀಡಿರುವ ಅಂಗೀಕಾರ ಇನ್ನೂ ಚಾಲ್ತಿಯಲ್ಲಿರುವ ಕಾರಣ ಲೋಕಸಭೆಯಲ್ಲಿ ಅಂಗೀಕಾರ ಪಡೆದ ಕೂಡಲೇ ಮಸೂದೆ ಕಾಯ್ದೆಯಾಗಿ ರೂಪುಗೊಳ್ಳುವ ಪ್ರಕ್ರಿಯೆ ಪ್ರಾರಂಭವಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಉದ್ದೇಶಪೂರ್ವಕವಾಗಿ ಮಸೂದೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿರುವುದರಿಂದ ಅದನ್ನು ಮತ್ತೆ ರಾಜ್ಯಸಭೆಯಲ್ಲಿ ಮಂಡಿಸಬೇಕಾಗಿದೆ.

ಮುಂದಿನ ಜನಗಣತಿ, ಕ್ಷೇತ್ರ ಮರುವಿಂಗಡಣೆ ಅಂದರೆ 20 ವರ್ಷ ಬೇಕಾದೀತು!

ಮುಂದಿನ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡೆದ ನಂತರವಷ್ಟೇ ಮಹಿಳಾ ಮೀಸಲಾತಿ ಜಾರಿಗೆ ಬರಲಿದೆ ಎಂದು ಮಸೂದೆಯಲ್ಲಿಯೇ ಹೇಳಿರುವುದರಿಂದ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಕನಿಷ್ಠ 20 ವರ್ಷ ಬೇಕಾಗಬಹುದು. ಮುಂದಿನ ಜನಗಣತಿ 2026ರಲ್ಲಿ ಮತ್ತು ಕ್ಷೇತ್ರಮರುವಿಂಗಡಣೆ 2031ರಲ್ಲಿ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ ಸಿದ್ದರಾಮಯ್ಯ.

ಇದನ್ನೂ ಓದಿ | Cauvery Water : ಬೆಂಗಳೂರಿಗರಿಗೆ Shocking News; ನಗರಕ್ಕೆ ಕಾವೇರಿ ನೀರು ಪೂರೈಕೆ ಬಂದ್! ಯಾವಾಗ? ಯಾಕೆ?

ಸ್ಥಳೀಯ ಸಂಸ್ಥೆಗಳ ಮಹಿಳಾ ಮೀಸಲಾತಿ 1993ರಲ್ಲೇ ಅನುಷ್ಠಾನಗೊಂಡಿದೆ

ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆ ಮೂಲತ: ಕಾಂಗ್ರೆಸ್ ಪಕ್ಷದ ಕನಸಿನ ಕೂಸು. ಈ ಕನಸನ್ನು ನನಸು ಮಾಡಲು ಪ್ರಾಮಾಣಿಕವಾದ ಪ್ರಯತ್ನ ಮಾಡಿದವರು ನಮ್ಮ ಹೆಮ್ಮೆಯ ನಾಯಕರಾದ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಎನ್ನುವುದನ್ನು ನಾವೆಲ್ಲರೂ ನೆನಪು ಮಾಡಿಕೊಳ್ಳಬೇಕಾಗಿದೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಯನ್ನು ಮೊದಲ ಬಾರಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು 1989ರಲ್ಲಿಯೇ ಲೋಕಸಭೆಯಲ್ಲಿ ಮಂಡಿಸಿದ್ದರು. ಆದರೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಲು ಸಾಧ್ಯವಾಗಿರಲಿಲ್ಲ.

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಸ್ಥಾನಗಳಲ್ಲಿ ಶೇಕಡಾ 33ರಷ್ಟನ್ನು ಮಹಿಳೆಯರಿಗೆ ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ 1993ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಕಾಲದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅನುಮೋದನೆಗೊಂಡು ಅನುಷ್ಠಾನಗೊಂಡಿದೆ. ಈ ಕ್ರಾಂತಿಕಾರಿ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಕಾರಣ ಎನ್ನುವುದು ಕೂಡಾ ಇತಿಹಾಸದ ಪುಟದಲ್ಲಿ ದಾಖಲಾಗಿದೆ.

ಕಾಂಗ್ರೆಸ್‌ 2004ರಿಂದಲೇ ಪ್ರಯತ್ನಿಸಿದೆ, 2019ರ ಪ್ರಣಾಳಿಕೆಯಲ್ಲೂ ಇದೆ

2004ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳಲ್ಲಿ ಮಹಿಳಾ ಮೀಸಲಾತಿಯನ್ನೂ ಸೇರಿಸಿಕೊಂಡಿತ್ತು. 2010ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ್ದ ಕಾಂಗ್ರೆಸ್ ಸರ್ಕಾರ ಅದಕ್ಕೆ ಅಂಗೀಕಾರ ಪಡೆಯಲು ಯಶಸ್ವಿಯಾಗಿತ್ತು.
ಸಂಸತ್ ಮತ್ತು ವಿಧಾನಮಂಡಲಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾಯ್ದೆಯನ್ನು ಜಾರಿಗೆ ತರುವಂತೆ ಕಾಂಗ್ರೆಸ್ ಪಕ್ಷ ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಬಂದಿದೆ. ರಾಜಕೀಯ ಭಿನ್ನಮತಗಳನ್ನು ಮೀರಿ ಮಹಿಳಾ ಮೀಸಲಾತಿ ಮಸೂದೆ ಸಂಸತ್ ನಲ್ಲಿ ಅಂಗೀಕಾರವಾಗುವಂತೆ ಪ್ರಯತ್ನ ಮಾಡಿ ಎಂದು 2018ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಲೋಕಸಭೆಯಲ್ಲಿಯೇ ಮನವಿ ಮಾಡಿದ್ದರು. 2019ರ ಲೋಕಸಭಾ ಚುನಾವಣೆಯ ಕಾಲದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿಯೂ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಸೇರಿಸಲಾಗಿದ್ದು ಅದಕ್ಕೆ ನಾವು ಸದಾ ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | Caste Census Report : ಜಾತಿ ಗಣತಿ ವರದಿ ಸ್ವೀಕಾರಕ್ಕೆ ಡಿಸಿಎಂ ಡಿಕೆಶಿ ವಿರೋಧ; ಸಿಎಂಗೆ ಪತ್ರ

ಈಗ ಯೋಗಿ ಆದಿತ್ಯನಾಥ್‌ ಏನಂತಾರೆ?

ಮಹಿಳಾ ಮೀಸಲಾತಿ ವಿಧೇಯಕದ ವಿಚಾರದಲ್ಲಿ ಬಿಜೆಪಿ ಆಡಳಿತವಿರುವ, ದೇಶದ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‌ ಅವರ ಅಭಿಪ್ರಾಯವೇನಿತ್ತು ಎನ್ನುವುದು ಇಡೀ ದೇಶಕ್ಕೇ ಗೊತ್ತಿರುವ ವಿಚಾರವಾಗಿದೆ. ಸಂಸದರಾಗಿದ್ದ ವೇಳೆ ಆದಿತ್ಯನಾತ್‌ ಅವರು ಈ ವಿಚಾರವಾಗಿ ಅಭಿಪ್ರಾಯಭೇದ ವ್ಯಕ್ತಪಡಿಸಿದ್ದರು. ಮೊದಲು ಈ ವಿಷಯದಲ್ಲಿ ಪಕ್ಷದಲ್ಲಿ ಆಂತರಿಕವಾಗಿ ಚರ್ಚೆಯಾಗಿ ಸಹಮತ ಮೂಡಬೇಕು ಎಂದಿದ್ದರು. “ಕಾಂಗ್ರೆಸ್‌ ನ ಪಾಪವನ್ನು ನಾವೇಕೆ ತಲೆಯ ಮೇಲೆ ಹೊರಬೇಕು” ಎಂದು ಹೀಗಳೆದಿದ್ದರು. ಈಗಲೂ ಅವರ ಅಭಿಪ್ರಾಯ ಇದೇ ಇದೆಯೋ ಅಥವಾ ಬದಲಾಗಿದೆಯೋ ಎಂದು ಈ ವೇಳೆ ಕೇಳಬಯಸುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ.

Exit mobile version