Site icon Vistara News

PFI BAN | ನಿಷೇಧಿಸಿದ್ದು ಪಿಎಫ್‌ಐಯನ್ನು, ನೀವ್ಯಾಕೆ SDPIಗೆ ಸೇರಿದ ಕಚೇರಿ ಜಪ್ತಿ ಮಾಡಿದಿರಿ: ದ.ಕ. ಜಿಲ್ಲಾಡಳಿತಕ್ಕೆ ನೋಟಿಸ್‌

SDPI

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ನಿಷೇಧದ ಬೆನ್ನಲ್ಲೇ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಿ, ಪಕ್ಷಕ್ಕೆ ಸೇರಿದ ಆಸ್ತಿಗಳನ್ನು ಜಪ್ತಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ದಾವೆಗೆ ಸಂಬಂಧಿಸಿ ಹೈಕೋರ್ಟ್‌ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೋಟಿಸ್‌ ನೀಡಿದೆ. ವಶಪಡಿಸಿಕೊಂಡ ಕಚೇರಿಗಳನ್ನು ಮರಳಿ ಒಪ್ಪಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನಿರ್ದೇಶಿಸಲು ಕೋರಿ ಸಲ್ಲಿಸಿರುವ ಅರ್ಜಿ ಇದಾಗಿದೆ.

ಎಸ್‌ಡಿಪಿಐನ ದಕ್ಷಿಣ ಕನ್ನಡ ಪ್ರಧಾನ ಕಾರ್ಯದರ್ಶಿ ಅನ್ವರ್‌ ಸಾದತ್‌ ಅವರು ಈ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆಗೆ ಸ್ವೀಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ, ಪೊಲೀಸ್‌ ಆಯುಕ್ತರು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗೆ ನೋಟಿಸ್‌ ಜಾರಿ ಮಾಡಿದರು. ವಿಚಾರಣೆಯನ್ನು ಡಿಸೆಂಬರ್‌ 6ಕ್ಕೆ ಮುಂದೂಡಲಾಗಿದೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಅಡಿ ಎಸ್‌ಡಿಪಿಐ ನೋಂದಾಯಿತ ರಾಜಕೀಯ ಪಕ್ಷವಾಗಿದ್ದು, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿರುವುದರಿಂದ ವಿಭಜನಕಾರಿ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿದ್ದೇವೆ. ಇದರಿಂದ ಅರ್ಜಿದಾರರ ವಿರುದ್ಧ ಕೆಟ್ಟ ಅಭಿಪ್ರಾಯ ಮೂಡಿಸಲು ಸರ್ಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದ್ದು, ನಮ್ಮ ಕೆಲಸಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಎಸ್‌ಡಿಪಿಐ ಮನವಿಯಲ್ಲಿ ಆಕ್ಷೇಪಿಸಲಾಗಿತ್ತು. ಎಸ್‌ಡಿಪಿಐ ಒಂದು ಸ್ವತಂತ್ರ ಪಕ್ಷ. ಪಿಎಫ್‌ಐಗೂ ಅದಕ್ಕೂ ಸಂಬಂಧವಿಲ್ಲ. ಪಿಎಫ್‌ಐ ಮತ್ತು ಅದರ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಪಿಐ ಹೆಸರು ಸೇರಿಸಿಲ್ಲ. ಅದಾಗ್ಯೂ, ಸರ್ಕಾರಿ ಅಧಿಕಾರಿಗಳು/ಪ್ರತಿವಾದಿಗಳು, ಎಸ್‌ಡಿಪಿಐಗೆ ಸೇರಿದ ಸ್ಥಳಗಳಲ್ಲಿ ಅಕ್ರಮವಾಗಿ ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಂಬಂಧಿತ ಎಲ್ಲರಿಗೂ ಎಸ್‌ಡಿಪಿಐ 2022ರ ಅಕ್ಟೋಬರ್‌ 29ರಂದು ಮನವಿ ಸಲ್ಲಿಸಿದೆ ಎಂದು ವಿವರಿಸಲಾಗಿದೆ.

ಅರ್ಜಿದಾರ ಪಕ್ಷದ ಜಪ್ತಿ ಮಾಡಲಾಗಿರುವ, ಮುಚ್ಚಲ್ಪಟ್ಟಿರುವ ಕಚೇರಿಗಳು ಬಾಡಿಗೆ ಸ್ಥಳಗಳಾಗಿದ್ದು, ದುರುದ್ದೇಶದಿಂದ ಎಸ್‌ಡಿಪಿಐ ಹೆಸರಿಗೆ ಚ್ಯುತಿ ಉಂಟು ಮಾಡಲು ಜಪ್ತಿ ಮಾಡಲಾಗಿದೆ. ಮಂಗಳೂರಿನಲ್ಲಿರುವ ಎಸ್‌ಡಿಪಿಐ ಮಾಹಿತಿ ಮತ್ತು ಸೇವಾ ಕೇಂದ್ರ, ಬಂಟ್ವಾಳ, ಅದ್ದೂರ್‌, ಕುದ್ರೋಳಿ, ಪಾವೂರು, ಸುರತ್ಕಲ್‌ನ ಚೊಕ್ಕಬೆಟ್ಟು, ಫರಂಗಿಪೇಟೆ, ಕಾಟಿಪಳ್ಳ, ಬಂಟ್ವಾಳದ ಮಂಚಿ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿ, ತಾಳಪಾಡಿಯ ಕೆ ಸಿ ರಸ್ತೆ, ಮಂಗಳೂರಿನ ಉಲ್ಲಾಳದಲ್ಲಿನ ಕಚೇರಿಗಳ ಮೇಲೆ ಅಕ್ರಮವಾಗಿ ದಾಳಿ ನಡೆಸಿ, ಜಪ್ತಿ ಮಾಡಿ, ಅವುಗಳನ್ನು ಮುಚ್ಚಲಾಗಿತ್ತು.

ಯಾವುದೇ ಮಾಹಿತಿ ನೀಡದೇ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇರುವ ಎಸ್‌ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಯನ್ನು ಮುಚ್ಚಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಎಸ್‌ಡಿಪಿಐ ಪಕ್ಷದ ಅಡಿ ಹಲವು ಮಂದಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 200ಕ್ಕೂ ಅಧಿಕ ಚುನಾಯಿತ ಪ್ರತಿನಿಧಿಗಳಿದ್ದು, ರಾಜಕೀಯ ಚಟುವಟಿಕೆ ನಡೆಸಲು ಅವರಿಗೆ ಕಚೇರಿಯ ಅಗತ್ಯವಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಏನಿದು ಕಚೇರಿ ಜಪ್ತಿ ಪ್ರಕರಣ?
2022ರ ಸೆಪ್ಟೆಂಬರ್‌ 28ರಂದು ಕೇಂದ್ರ ಗೃಹ ಇಲಾಖೆಯು ಐದು ವರ್ಷಗಳ ಅವಧಿಗೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಅಡಿ ನಿಷೇಧಿಸಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ಗಳು, ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳು ಹಾಗೂ ದಕ್ಷಿಣ ಕನ್ನಡದ ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ, ಜಫ್ತಿ ಮಾಡಿದ್ದರು. ಜಪ್ತಿ ಮಾಡಿದ್ದರು. ಇದರ ಬಗ್ಗೆ ಮಾಡಿದ ಮನವಿಗಳಿಗೆ ಸ್ಪಂದಿಸದೆ ಇದ್ದಾಗ ಎಸ್‌ಡಿಪಿಐ ಕೋರ್ಟ್‌ ಮೆಟ್ಟಿಲೇರಿದೆ.

ಇದನ್ನೂ ಓದಿ | SDPIಗೆ BJP ಫಂಡಿಂಗ್‌: ಸತ್ಯಜಿತ್‌ ಸುರತ್ಕಲ್‌ ವಿಡಿಯೋ ಬಿಡುಗಡೆ ಮಾಡಿದ ಪ್ರಿಯಾಂಕ್‌ ಖರ್ಗೆ

Exit mobile version