Site icon Vistara News

Pothole | ರಸ್ತೆಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರ್ಕಾರ: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

pothole

ಬೆಂಗಳೂರು: ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ನಿವೃತ್ತ ಯೋಧರೊಬ್ಬರು ರಸ್ತೆಗುಂಡಿಗೆ (Pothole) ಬಿದ್ದು ಲಾರಿ ಕೆಳಕ್ಕೆ ಸಿಕ್ಕಿ ಜೀವ ಕಳೆದುಕೊಂಡ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ತೀವ್ರ ದುಃಖ ಉಂಟು ಮಾಡಿದೆ. ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ? ಎಂದು ಕಿಡಿಕಾರಿದ್ದಾರೆ.

ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತಿ ಆಗಿದ್ದ ಕುಮಾರ್ (38) ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ ಎಂದಿದ್ದಾರೆ.

ಇನ್ನೆಷ್ಟು ತಂದೆ‌, ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು?
ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ದು, ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ. ಕಣ್ಮುಂದೆಯೇ ಜೀವ ಬಿಟ್ಟ ಪುತ್ರನ ಪಾರ್ಥಿವ ಶರೀರದ ಮುಂದೆ ಗೋಳಾಡುತ್ತಿದ್ದ ಆ ವೃದ್ಧ ತಂದೆಯನ್ನು ಕಂಡು ನನ್ನ ಮನಸ್ಸಿಗೆ ಆಘಾತವಾಗಿದೆ. ಇನ್ನೆಷ್ಟು ತಂದೆ ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಯೋಧರ ದುರಂತ ಸಾವಿಗೆ ಕಾರಣವಾದ ರಸ್ತೆಯೂ ಸೇರಿ ಮಂಡ್ಯ ನಗರಸಭೆ ವ್ಯಾಪ್ತಿಯ ಎಲ್ಲ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಡುಗಡೆ ಮಾಡಿದ್ದೆ. ದುರಂತ ಎಂದರೆ, ನನ್ನ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಆ 50 ಕೋಟಿ ರೂ. ಹಣವನ್ನು ಕೂಡಲೇ ಹಿಂಪಡೆಯಿತು ಎಂದು ಎಚ್‌ಡಿಕೆ ದೂರಿದ್ದಾರೆ.

ರಾಜಕೀಯ ಕಾರಣಕ್ಕೆ ಹಣ ವಾಪಸ್ ಪಡೆದ ರಾಜ್ಯ ಬಿಜೆಪಿ ಸರ್ಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ. ಇದು ಅಮಾನುಷವಾಗಿದ್ದು, ಸರ್ಕಾರವು ನೊಂದ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಕ್ಕೆ ನೋವು ಭರಿಸುವ ಆ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.

ಪಾಟ್ ಹೋಲ್ ಸರ್ಕಾರ ಎಂದು ಕಿಡಿಕಾರಿದ ಕಾಂಗ್ರೆಸ್‌
ಮಂಡ್ಯದಲ್ಲಿ ರಸ್ತೆ‌ಗುಂಡಿಗೆ ನಿವೃತ್ತ ಯೋಧ ಬಲಿಯಾದ ವಿಚಾರಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ಟ್ವೀಟ್ ಮಾಡಿದ್ದಾರೆ. ಪಾಟ್ ಹೋಲ್ ಸರ್ಕಾರ ಎಂದು ಕಿಡಿಕಾರಿದ್ದು, ನಿವೃತ್ತ ಯೋಧನ ಬಲಿ ಪಡೆದಿದೆ. ಬಿಜೆಪಿಯ 40% ಸರ್ಕಾರ ಡಜನ್ ಗಟ್ಟಲೇ ಕನ್ನಡಿಗರನ್ನು ಕೈಯಾರೆ ಬಲಿ ಪಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಭೇಟಿಗೆ ಬೊಮ್ಮಾಯಿ ಸರ್ಕಾರ 10 ಕೋಟಿ ರೂ. ಖರ್ಚು ಮಾಡಿದೆ. ಆದರೆ, ರಸ್ತೆ ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲವಾ? ಎಂದು ಟ್ವೀಟ್ ಮೂಲಕ ರಾಜ್ಯ ಬಿಜೆಪಿ ಸರ್ಕಾರವನ್ನು ಸುರ್ಜೆವಾಲ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Pothole | ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್‌ ಸವಾರ ಬಲಿ; ಸಾರ್ವಜನಿಕರ ಆಕ್ರೋಶ

Exit mobile version