ಬೆಂಗಳೂರು: ಪ್ರಧಾನಿ ಕಾರ್ಯಕ್ರಮಕ್ಕೆ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆ ತರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಂಗಳವಾರ ಬೆಳಗ್ಗೆ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರಿಂದ ಅದನ್ನು ಸಂಜೆ ವೇಳೆ ವಾಪಸ್ ಪಡೆಯಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.೧೧ ರಂದು ಕೆಂಪೇಗೌಡ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆ ತರುವಂತೆ ಡಿಡಿಪಿಯು ಆದೇಶ ಹೊರಡಿಸಿದ್ದರು. ಆದರೆ, ಈ ಬಗ್ಗೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದರಿಂದ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಕಾರ್ಯಕ್ರಮಕ್ಕೆ ನಿಗದಿ ಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆ ತರುವ ಜವಾಬ್ದಾರಿ ಆಯಾ ಕಾಲೇಜಿನ ಪ್ರಾಂಶುಪಾಲರದ್ದು, ಇದಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳನ್ನು ಕ್ಷೇಮವಾಗಿ ಕರೆತರಬೇಕು ಹಾಗೂ ವಾಪಸ್ ಕರೆದುಕೊಂಡು ಹೋಗಬೇಕು. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಆಯಾ ಕಾಲೇಜಿನ ಪ್ರಾಂಶುಪಾಲರು ಜವಾಬ್ದಾರರಾಗುತ್ತಾರೆ ಎಂದು ಮಂಗಳವಾರ ಆದೇಶದಲ್ಲಿ ಸೂಚನೆ ನೀಡಲಾಗಿತ್ತು. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗಮನಕ್ಕೆ ತಾರದೇ ಡಿಡಿಪಿಯು ಆದೇಶ ಹೊರಡಿಸಿದ್ದರು ಎನ್ನಲಾಗಿದೆ. ಆದರೆ ಸಚಿವರ ಸೂಚನೆ ಬಳಿಕ ಆದೇಶ ವಾಪಸ್ ಪಡೆದಿದ್ದಾರೆ.
ಇದನ್ನೂ ಓದಿ ಕಾಂಗ್ರೆಸ್ನಂತೆ ಬಿಜೆಪಿ ಓಲೈಕೆ ರಾಜಕಾರಣ ಮಾಡಿಲ್ಲ ಎಂದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್