Site icon Vistara News

Road Accident : ಬೈಕ್‌ಗೆ ಡಿಕ್ಕಿ ಹೊಡೆದು ಕಂದಕ್ಕೆ ಉರುಳಿದ ಲಾರಿ; ಮೂವರು ಗಂಭೀರ

Lorry hit Bike

ಕಾರವಾರ/ ಶಿವಮೊಗ್ಗ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಾನೀರ ಬಳಿ ಬೈಕ್‌ಗೆ ಲಾರಿಯೊಂದು ಡಿಕ್ಕಿ (Road Accident) ಹೊಡೆದಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಹೆದ್ದಾರಿ ಪಕ್ಕದ‌ ಕಂದಕ್ಕೆ ಲಾರಿ ಉರುಳಿದೆ. ಅಪಘಾತದಲ್ಲಿ ಬೈಕ್ ಸವಾರ ಶಿವು ಗೌಡ ಹಾಗೂ ಲಾರಿ ಚಾಲಕ, ಕ್ಲೀನರ್ ಚಂದು, ಗಣೇಶ ಗಾಯಗೊಂಡಿದ್ದಾರೆ. ಬೈಕ್‌ ಸವಾರ ಶಿವು ಗೌಡ ಕುಮಟಾದಿಂದ ಹರ್ಕಡೆ ಗ್ರಾಮದತ್ತ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಗಾಯಾಳುಗಳು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಂದಕ್ಕೆ ಬಿದ್ದ ಲಾರಿಯನ್ನು ಮೇಲಕ್ಕೆತ್ತುವ ಕೆಲಸವನ್ನು ಮಾಡಲಾಗುತ್ತಿದೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸವಾರನ ನರಳಾಟ

ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗ ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಬರುವೆ ಗ್ರಾಮದ ನಿವಾಸಿ ಲೋಕೇಶ್ (48) ಗಂಭೀರ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ 10:30ಕ್ಕೆ ಲೋಕೇಶ್‌ ರಿಪ್ಪನ್ ಪೇಟೆಯಿಂದ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು.

ಈ ವೇಳೆ ಬೈಕ್‌ಗೆ ಹಿಂಬದಿಯಿಂದ ಮತ್ತೊಂದು ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲೋಕೇಶ್‌ ತಲೆಗೆ ಗಂಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದು ನರಳಾಡಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಸಹಾಯಕ್ಕಾಗಿ ಅಂಗಲಾಚಿದ್ದು, ಬಳಿಕ ಸ್ಥಳೀಯರೊಬ್ಬರ ನೆರವಿನಿಂದ ರಿಪ್ಪನಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಗಾಯಾಳನ್ನು ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಪ್ರವೀಣ್, ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version