Site icon Vistara News

Shivaji statue : ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shivaji statue

#image_title

ಬೆಳಗಾವಿ: ʻʻದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ (Shivaji statue) ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದುʼʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಆರ್.ಐ.ಡಿ.ಎಲ್, ಪ್ರವಾಸೋದ್ಯಮ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ (ಮಾ.2) ರಾಜಹಂಸಗಡ ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಈ ಅನುದಾನವನ್ನು ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಪೂರಕವಾಗಿ ಸಮುದಾಯ ಭವನ, ವಿಶ್ರಾಂತಿ ಗೃಹ ನಿರ್ಮಾಣ ಜೊತೆಗೆ ಇತರ ಮೂಲಭೂತ ಸೌಕರ್ಯ ಕಲ್ಪಿಸಿ, ಪ್ರವಾಸಿ ತಾಣವನ್ನಾಗಿ ಮಾರ್ಪಾಡು ಮಾಡಲಾಗುವುದು ಎಂದು ತಿಳಿಸಿದರು.

ಕೋಟೆ ಅಭಿವೃದ್ಧಿಗೆ ಅನುದಾನ ಬಿಡುಗಡೆ

ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 2008ರಲ್ಲಿ ಸಿಎಂ ಯಡಿಯೂರಪ್ಪ ಅವರು 14 ಕೋಟಿ ರೂಪಾಯಿ ಮಂಜೂರು ಮಾಡಿದರು. ಜನಾರ್ದನ ರೆಡ್ಡಿ ಅವರು ಅಂದಿನ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ಶಾಸಕ ಸಂಜಯ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೋಟೆಯ ಆವರಣದಲ್ಲಿ ಮೂಲಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಕೋಟೆ ಅಭಿವೃದ್ಧಿಗೆ ನಿಗದಿಯಾಗಿರುವ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ರಾಜಹಂಸ ಕೋಟೆ ಅದ್ಭುತವಾಗಿದೆ. ಶಿವಾಜಿ ಮಹಾರಾಜರ ಕಾಲದ ಗತವೈಭವ, ಸಂಸ್ಕೃತಿ ಸಾರುವ ಕೋಟೆಯಾಗಿದೆ. ಶಿವಾಜಿ ಮಹಾರಾಜರ ವ್ಯಕ್ತಿತ್ವದ ತಕ್ಕ ಹಾಗೆ ಮೂರ್ತಿ ಪ್ರತಿಷ್ಠಾಪನೆಯಾಗಿದೆ. ಮುಂದಿನ ದಿನಗಳಲ್ಲಿ ಕೋಟೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವದು ಎಂದು ತಿಳಿಸಿದರು.

ಧರ್ಮರಕ್ಷಣೆಗೆ ಸೆಣಸಾಡಿದ ಶಿವಾಜಿ ಮಹಾರಾಜರು

ಶಿವಾಜಿ ಮಹಾರಾಜರ ಇತಿಹಾಸ ಪ್ರತಿಯೊಬ್ಬರಿಗೂ ತಿಳಿದ ವಿಷಯ. ಅವರು ಈ ದೇಶ ಕಂಡ ಅಪ್ರತಿಮ ನಾಯಕ. ಮೊಗಲರು ಹಾಗೂ ಪರಕೀಯರ ಆಡಳಿತದಲ್ಲಿ ಸಿಲುಕಿದ ಸಂದರ್ಬದಲ್ಲಿ ಹಿಂದೂ ಸಾಮ್ರಾಜ್ಯ ಕಟ್ಟುಲು, ಮೊಗಲರ ದೊಡ್ಡ ಸಾಮ್ರಾಜ್ಯದ ವಿರುದ್ಧ ಹೋರಾಡಿದ್ದಾರೆ.

ಶಿವಾಜಿ ಮಹಾರಾಜರು ತಾಯಿ ಜೀಜಾಬಾಯಿ ಅವರ ಪ್ರೇರಣೆ, ಆಶೀರ್ವಾದ ಹಾಗೂ ಮಾರ್ಗದರ್ಶನದಲ್ಲಿ ಸಕಲ ವಿದ್ಯಾ, ಕಲೆಗಳನ್ನು ಕಲಿತು ಪರಿಣಿತರಾದ ಶ್ರೇಷ್ಠ ನಾಯಕರು. ತಮ್ಮ ಸ್ವಾರ್ಥಕ್ಕೆ ಹೊರಾಡದೆ, ಹಿಂದೂ ಧರ್ಮ ಹಾಗೂ ಸಾಮ್ರಾಜ್ಯ ಉಳಿವಿಗೆ ನಿರಂತರ ಹೋರಾಡಿದ ಮಹನೀಯರು ಎಂದು ಹೇಳಿದರು.

ಧೈರ್ಯ, ಶೌರ್ಯ, ಛಲದಿಂದ ಪರಕೀಯರ ದೈತ್ಯ ಸೈನ್ಯವನ್ನು ಸೋಲಿಸಲು ಆತ್ಮವಿಶ್ವಾಸದ ಜೊತೆಗೆ ತೋಳ್ಬಲದಲ್ಲಿ ಛಲವಿದೆ ಎಂದು ತಮ್ಮ ಸೈನ್ಯಕ್ಕೆ ತೋರಿಸಿಕೊಟ್ಟರು. ಅನೇಕ ಯುದ್ಧಗಳನ್ನು ಮಾಡಿ, ತಮ್ಮ ಪರಾಕ್ರಮದ ಮೂಲಕ ದೇಶದ ಉಳಿವಿಗೆ ಹೋರಾಡಿ ಹಲವಾರು ಕೋಟೆ ಕಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತಿಹಾಸವನ್ನು ಸ್ಮರಿಸಿದರು.

ನಗಾರಿ ಬಾರಿಸುವ ಮೂಲಕ ಚಾಲನೆ

ಇದಕ್ಕೂ ಮುಂಚೆ ನಗಾರಿ ಬಾರಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿ, ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಅನೀಲ ಬೆನಕೆ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಪ್ರಾದೇಶಿಕ ಆಯುಕ್ತರಾದ ಎಂ.ಜಿ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಅವರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸ್ವಾಗತಿಸಿದರು. ವಿನಾಯಕ ಮೊರೆ ಹಾಗೂ ತಂಡದವರಿಂದ ನಾಡಗೀತೆ ಪ್ರಸ್ತುತ ಪಡಿಸಲಾಯಿತು. ಬಸವರಾಜ ಕುಪ್ಪಸಗೌಡರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ರಾಜಹಂಸಗಢದ ಗ್ರಾಮಸ್ಥರು ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : Shivaji statue : ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಗೈರು

Exit mobile version