Site icon Vistara News

Negligence of MESCOM | ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು: ಕುಟುಂಬದವರಿಂದ ಪ್ರತಿಭಟನೆ

Mescom Ennekoppa Village daily wage worker

ಸೊರಬ: ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ (Negligence of MESCOM) ದಿನಗೂಲಿ ನೌಕರನೊಬ್ಬ ಮೃತಪಟ್ಟಿರುವುದಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ (ಡಿ.೧೯) ಈ ಘಟನೆ ನಡೆದಿದೆ.

ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ (24) ಮೃತ. ಈತ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ. ಕುಬಟೂರು ಗ್ರಾಮದಲ್ಲಿ ಡಿ.17ರಂದು ವಿದ್ಯುತ್ ಪರಿವರ್ತಕ ಅಳವಡಿಕೆ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ ಪರಿಣಾಮ ವಿದ್ಯುತ್ ತಗುಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ. ಆನವಟ್ಟಿಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಡಿ.೧೯ರಂದು ಮೃತಪಟ್ಟಿದ್ದಾನೆ. ಕುಟುಂಬಸ್ಥರಿಗೆ ಆಧಾರವಾಗಿದ್ದ ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರೇ ನೇರ ಹೊಣೆ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಹಾಲಿಂಗಪ್ಪ, ಮೆಸ್ಕಾಂ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಯುವಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯಿಂದ ಕುಟುಂಬಕ್ಕೆ ಮೂಲಧಾರವೇ ಇಲ್ಲದಂತಾಗಿದೆ. ನಿರ್ಲಕ್ಷ್ಯ ತೋರಿದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಮೇಲಧಿಕಾರಿಗಳು ಕೂಡಲೇ ಕ್ರಮಕೈಗೊಂಡು, ಮೃತ ದಿನಗೂಲಿ ನೌಕರನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Weavers Branding | ಇಳಕಲ್‌ ಸೀರೆ, ನೇಕಾರರ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಬ್ರ್ಯಾಂಡಿಂಗ್‌: ಸಿಎಂ ಬೊಮ್ಮಾಯಿ ಭರವಸೆ


ತಾಪಂ ಮಾಜಿ ಅಧ್ಯಕ್ಷ ರುದ್ರಪ್ಪ ಕಡ್ಲೇರ್ ಮಾತನಾಡಿ, ಮೆಸ್ಕಾಂ ಇಲಾಖೆಯ ಆನವಟ್ಟಿ ಉಪ ವಿಭಾಗದಲ್ಲಿ ಅನೇಕ ವಿದ್ಯುತ್ ಅವಘಡಗಳು ಸಂಭವಿಸುತ್ತಿವೆ. ಆದರೂ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಇದೀಗ ಬಾಳಿ ಬದುಕಬೇಕಾದ ಯುವಕನೊಬ್ಬನ ಸಾವಿಗೆ ಅಧಿಕಾರಿಗಳು ಕಾರಣರಾಗಿದ್ದಾರೆ. ಇಲಾಖಾ ಮೇಲಧಿಕಾರಿಗಳು ಮೃತ ಯುವಕನ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಇದನ್ನು ವಿರೋಧಿಸಿ ಮಂಗಳವಾರ (ಡಿ.೨೦) ಯುವಕನ ಶವವನ್ನು ಇಲಾಖೆಯ ಕಚೇರಿಯ ಮುಂಭಾಗದಲ್ಲಿಟ್ಟು ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.


ಪ್ರತಿಭಟನೆಯಲ್ಲಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರ ಸಮಿತಿಯ ಸದಸ್ಯ ಮಹಾಲಿಂಗೇಗೌಡ, ಜಿಲ್ಲಾ ನಿರ್ದೇಶಕ ಸಮೀರ್ ಬಾಷಾ, ಎಸ್.ಕೆ. ಲೋಕೇಶ್, ಮಹೇಶ್ ಕವಲಿ, ಎಚ್.ಎಂ. ಮುತ್ತೇಶ, ಹನುಮಂತಪ್ಪ, ರಾಘವೇಂದ್ರ ಆಚಾರ್, ದಿವಾಕರಯ್ಯ, ಶಿವಯೋಗಿಸ್ವಾಮಿ, ಕುಟುಂಬಸ್ಥರಾದ ಅಶ್ವಿನಿ, ಜಯಮ್ಮ, ಸಾವಿತ್ರಮ್ಮ, ಖಂಡ್ಯಪ್ಪ, ಗ್ರಾಮಸ್ಥರಾದ ಹೊನ್ನಪ್ಪ, ಮಂಜಪ್ಪ ಉದ್ರಿ, ಧರ್ಮಾ ನಾಯ್ಕ್, ಮೈಲಾರಿ ನಾಯ್ಕ್, ಎನ್.ರವಿ, ಬಸವಣ್ಯಪ್ಪ ಉಪ್ಪಾರ್, ಅಶೋಕ್, ಆನಂದ, ಸುರೇಶ, ಪರಸಪ್ಪ ಇದ್ದರು.

ಇದನ್ನೂ ಓದಿ | Student death | ಅತಿಥಿ ಶಿಕ್ಷಕನ ಹುಚ್ಚಾಟ: ಮನ ಬಂದಂತೆ ಥಳಿಸಿದ್ದರಿಂದ ಬಾಲಕ ಸಾವು, ಶಿಕ್ಷಕಿಯಾದ ತಾಯಿಗೂ ಹೊಡೆತ

Exit mobile version