Site icon Vistara News

DA Hike: ತುಟ್ಟಿ ಭತ್ಯೆ ಶೇ. 3.75 ಏರಿಕೆ; ರಾಜ್ಯ ಸರ್ಕಾರಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೃತಜ್ಞತೆ

State Primary School Teachers' Association expresses gratitude to state government

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು (DA Hike) ಶೇ.3.75ಏರಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್‌ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಏರಿಸಿ ಆದೇಶ ಹೊರಡಿಸಿದ 4 ಗಂಟೆಗಳೊಳಗೆ ರಾಜ್ಯ ಸರ್ಕಾರಿ ನೌಕರರಿಗೂ ಶೇ.3.75 ತುಟ್ಟಿ ಭತ್ಯೆ ನೀಡಲು ಅನುಮೋದಿಸಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಕೆ.ನಾಗೇಶ್‌ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹೇಳಿದ್ದಾರೆ.

ಇದನ್ನೂ ಓದಿ | Grama Sahayaka: ಗ್ರಾಮ ಸಹಾಯಕರ ವೇತನ 13,000 ರಿಂದ 15,000ಕ್ಕೆ ಹೆಚ್ಚಳ: ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ರಾಜ್ಯ ಸರ್ಕಾರಿ ನೌಕರರಿಗೆ Good News ; ತುಟ್ಟಿಭತ್ಯೆ ಭಾರಿ ಹೆಚ್ಚಳ

ಬೆಂಗಳೂರು: ಲೋಕಸಭಾ ಚುನಾವಣಾ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ (Government Employees) ಗುಡ್ ನ್ಯೂಸ್‌ (Good News) ನೀಡಲಾಗಿದೆ. ರಾಜ್ಯ ಸರ್ಕಾರ (Karnataka Government) ತುಟ್ಟಿಭತ್ಯೆ ಹೆಚ್ಚಳ (DA Hike) ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಶೇಕಡಾ 3.75ರಷ್ಟು ತುಟ್ಟಿಭತ್ಯೆ (Deaness Allowance) ಹೆಚ್ಚಿಸಲು ಆದೇಶಿಸಲಾಗಿದೆ. ತುಟ್ಟಿಭತ್ಯೆ ಪ್ರಮಾಣವನ್ನು ಶೇ. 38.75ರಿಂದ ಶೇ. 42.50ಕ್ಕೆ ಹೆಚ್ಚಿಸಲಾಗಿದೆ.

ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್‌ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75ರಿಂದ ಶೇಕಡ 42.5ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರದ ಆರ್ಥಿಕ ಇಲಾಖೆಗಳ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು ಸಹಿ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.

ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, 2023ರ ಜುಲೈ 1ರಿಂದ ಜಾರಿಗೆ ಬರುವಂತೆ ಶೇ. 3.75 ರಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ತುಟ್ಟಿ ಭತ್ಯೆ ಶೇ 38.75ಗೆ ಏರಿಸಲಾಗಿತ್ತು.

ತುಟ್ಟಿ ಭತ್ಯೆಗೆ ಪರಿಗಣಿಸಿದ ಮೂಲ ವೇತನ ಯಾವುದು?

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ ‘ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಭಡ್ತಿ..

(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ.

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ- ಎಂದು ತಿಳಿಸಲಾಗಿದೆ.

ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ಇತರ ಪ್ರಮುಖ ಅಂಶಗಳು

  1. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 38.75 ರಿಂದ ಶೇಕಡ 42.5 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
  2. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
  3. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
  4. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂಥ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

ಇದನ್ನೂ ಓದಿ :DA Hike:‌ ಕೇಂದ್ರ ನೌಕರರಿಗೆ ಗುಡ್‌ ನ್ಯೂಸ್;‌ ಶೇ.4ರಷ್ಟು ಡಿಎ ಹೆಚ್ಚಳದ ಜತೆಗೆ ಹಲವು ಬಂಪರ್‌!

ತುಟ್ಟಿಭತ್ಯೆಯನ್ನು ನಗದಾಗಿಯೇ ಪಾವತಿಸಬೇಕು

  1. ಮೇಲಿನ ಅಂಶಗಳ ಆಧಾರದಲ್ಲಿ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡಲು ಸೂಚಿಸಲಾಗಿದೆ.
  2. ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
  3. ತುಟ್ಟಿಭತ್ಯ ಬಾಕಿ ಮೊತ್ತವನ್ನು, 2024ರ ಮಾರ್ಚ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
  4. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.
  5. ಸರ್ಕಾರದ ಆದೇಶದಲ್ಲಿ ಏನೇನಿದೆ?
Exit mobile version