Site icon Vistara News

Text Book: ಹೊಸ ಪಠ್ಯಕ್ರಮ ರಚನೆಗೆ ಸಮಿತಿ; ಬಿಜೆಪಿ ಅವಧಿಯ ಅಧ್ಯಾಯಗಳಿಗೆ ಕೊಕ್‌?

siddaramaiah and niranjanaradhya

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ ಪರಿಷ್ಕರಣೆ ಮಾಡಿದ್ದ ಪಠ್ಯಪುಸ್ತಕಕ್ಕೆ (Text Book) ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಈಗ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರ ವಹಿಸಿಕೊಂಡ ತಿಂಗಳೊಳಗೇ ಪಠ್ಯ ಬದಲಾವಣೆ ಬಗ್ಗೆ ಮಾತನಾಡಿದ್ದಲ್ಲದೆ, ಆ ನಿಟ್ಟಿನಲ್ಲಿ ಕ್ರಮಕ್ಕೂ ಮುಂದಾಗಿದೆ. ಈಗ ಹೊಸ ಪಠ್ಯಕ್ರಮ ರಚಿಸಲು ಸಮಿತಿ ರಚಿಸಲು ಸೂಚನೆ ನೀಡಿರುವ ಸಿದ್ದರಾಮಯ್ಯ (CM Siddaramaiah) ನೇತೃತ್ವದ ರಾಜ್ಯ ಸರ್ಕಾರವು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೇರಿಸಿದ್ದ ಕೆಲ ಅಧ್ಯಾಯಗಳಿಗೆ ಕೊಕ್‌ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಬೋಧನೆ ಮತ್ತು ಮೌಲ್ಯ ಮಾಪನದಿಂದ ಪಠ್ಯವನ್ನು ಕೈಬಿಡಲು ನಿರ್ಧಾರ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರಿಂದ ಶಿಕ್ಷಣ ಇಲಾಖೆಗೆ ಸೂಚನೆ ಹೋಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Goods Train Derails: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ರೈಲು; ಯಾರನ್ನು ‘ಹಳಿ’ಯಬೇಕು?

ನಿರಂಜನಾರಾಧ್ಯ ನೇತೃತ್ವದ ಸಮಿತಿ?

ಸಾಹಿತಿ ನಿರಂಜನಾರಾಧ್ಯ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸೇರಿಸಿದ್ದ ಹೊಸ ಅಧ್ಯಾಯಗಳನ್ನು ತೆಗೆಯುವಂತೆ ಈ ಹಿಂದೆ ಕೆಲವು ಸಾಹಿತಿಗಳು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇದರ ಭಾಗವಾಗಿ ಈಗ ಸಿಎಂ ಸೂಚನೆಯನ್ನು ನೀಡಿದ್ದು, ಈ ನಿಟ್ಟಿನಲ್ಲಿ ಸಮಿತಿಯನ್ನು ರಚನೆ ಮಾಡಲಾಗುತ್ತಿದೆ.

ಇದನ್ನೂ ಓದಿ: Health tips for Monsoon : ಮಳೆಗಾಲದ ಖುಷಿ ಅನುಭವಿಸಿ, ಆದರೆ ರೋಗಗಳನ್ನು ದೂರ ಇರಿಸಿ

ಈ ಶೈಕ್ಷಣಿಕ ವರ್ಷದಲ್ಲಿ ಕೆಲ ಅಧ್ಯಾಯಗಳನ್ನು ಅಧ್ಯಯನ ಮತ್ತು ಮೌಲ್ಯ ಮಾಪನದಿಂದ ಕೈಬಿಡುವುದು. ಮುಂದಿನ ವರ್ಷದಿಂದ ಪಠ್ಯಕ್ರಮ ರಚಿಸಲು ಸಮಿತಿ ರಚಿಸಲು ಮಂಗಳವಾರ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ನಿರಾಂಜನಾರಾಧ್ಯ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡುವ ಸಾಧ್ಯತೆ ಇದ್ದು, ಇವರು ಪಠ್ಯ ಹೇಗಿರಬೇಕು? ಯಾವ ಅಧ್ಯಾಯಗಳನ್ನು ತೆಗೆಯಬೇಕು? ಯಾವುದನ್ನು ಸೇರಿಸಬೇಕು? ಎಂಬಿತ್ಯಾದಿ ನಿರ್ಣಯಗಳನ್ನು ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಋಣ ತೀರಿಸಲು ಪಠ್ಯದಲ್ಲಿ ಗುಲಾಮಿ ಚಿಂತನೆ ತುರುಕುತ್ತಿರುವ ಸಿದ್ದರಾಮಯ್ಯ: ಸುನಿಲ್‌ ಕುಮಾರ್‌ ಕೆಂಡ

ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡ್ಗೇವಾರ್, ಚಕ್ರವರ್ತಿ ಸೂಲಿಬೆಲೆ ವಿರಚಿತ “ತಾಯಿ ಭಾರತಿ” ಹಾಗೂ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯವನ್ನು ಕೈಬಿಡಲು ರಾಜ್ಯ ಸರ್ಕಾರ‌ ನಿರ್ಧಾರ ಮಾಡಿರುವ ಬಗ್ಗೆ ಮಾಜಿ ಸಚಿವ ಸುನಿಲ್ ಕುಮಾರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ
ಮಾಡಿದ್ದಾರೆಂಬ ಋಣ ತೀರಿಸಿಕೊಳ್ಳುವುದಕ್ಕಾದರೂ ಗುಲಾಮಿ ಚಿಂತನೆಯನ್ನು ಶಿಕ್ಷಣದಲ್ಲಿ ತುರುಕುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್‌ನ ಸಂಪೂರ್ಣ ಮಾಹಿತಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ.

ರಾಜ್ಯದ ಮತ್ತಷ್ಟು ಸುದ್ದಿಗಳಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version