Site icon Vistara News

ಮುರುಘಾಶ್ರೀ ಪ್ರಕರಣ | ಇನ್ನೂ 30-35 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸ್ಟ್ಯಾನ್ಲಿ ಗಂಭೀರ ಆರೋಪ

chitradurga muruga sharana

ಮೈಸೂರು: ಶ್ರೀಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾಶರಣರ ಮೇಲೆ ಈಗ ಮತ್ತಿಬ್ಬರು ಬಾಲಕಿಯರಿಂದ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಗಂಭೀರ ಆರೋಪ ಮಾಡಿದ್ದು, ಶ್ರೀಗಳಿಂದ ಮುರುಘಾ ಮಠದಲ್ಲಿ ಇನ್ನೂ 30-35 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟ್ಯಾನ್ಲಿ , ಶ್ರೀಮಠದಲ್ಲಿ ನಿರಂತರ ಲೈಂಗಿಕ ದೌರ್ಜನ್ಯ ನಡೆದಿದೆ. ಋತುಮತಿ ಆಗದ ಹೆಣ್ಣು ಮಕ್ಕಳನ್ನೂ ಸ್ವಾಮೀಜಿ ಬಳಸಿಕೊಂಡಿದ್ದಾರೆ. ಎರಡನೇ ಪ್ರಕರಣ ಮೊದಲ ಪ್ರಕರಣಕ್ಕೆ ಪೂರಕವಾಗಿದೆ. ಮೊದಲ ಪ್ರಕರಣ ಬೆಳಕಿಗೆ ಬಂದ ನಂತರ ನೂರಾರು ಮಕ್ಕಳನ್ನು ಬೇರೆ ಕಡೆಗೆ ಕಳುಹಿಸಲಾಗಿದೆ ಎಂದು ಆರೋಪ ಮಾಡಿದರು.

ಈಗ ತಾಯಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕರೆದುಕೊಂಡು ಬಂದಿದ್ದಾರೆ. ತಮ್ಮ ಮಕ್ಕಳಿಗಾದ ದೌರ್ಜನ್ಯವನ್ನು ಹೇಳಿ ದೂರು ಕೊಟ್ಟಿದ್ದಾರೆ. ಮುಂದೆ ಇನ್ನಷ್ಟು ಮಕ್ಕಳ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ಹೊರಗೆ ಬರಬಹುದು. ಚಿತ್ರದುರ್ಗದ ಮಕ್ಕಳ ಕಲ್ಯಾಣ ಸಮಿತಿಯು ನೊಂದ ಮಕ್ಕಳಿಗೆ ರಕ್ಷಣೆ, ಭದ್ರತೆ ನೀಡುವಲ್ಲಿ ವಿಫಲವಾಗಿದೆ. ನೂರಾರು ಮಕ್ಕಳನ್ನು ಒಂದೇ ದಿನ ಕೌನ್ಸೆಲಿಂಗ್ ಮಾಡಲಾಗಿದೆ. ಅದನ್ನೇನು ಒಂದು ಪದದ ಉತ್ತರ ಎಂದುಕೊಂಡಿದ್ದಾರಾ? ಎಂದು ಸ್ಟ್ಯಾನ್ಲಿ ಪ್ರಶ್ನಿಸಿದ್ದಾರೆ.

ನಾವು ಸ್ವಚ್ಛ ಮಾಡುವ ಕೆಲಸ ಮಾಡುತ್ತಿದ್ದೇವೆ. ಮುರುಘಾ ಮಠದ ಬಗ್ಗೆ ಗೌರವ ಇದೆ. ಆದರೆ, ಆಪಾದಿತ ಮತ್ತು ಆವರಿಗೆ ಸಹಕರಿಸಿದವರ ವಿರುದ್ಧ ಕಾನೂನು ಕ್ರಮ ಆಗಬೇಕು‌ ಎಂದು “ವಿಸ್ತಾರ ನ್ಯೂಸ್‌”ಗೆ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಸ್ಟ್ಯಾನ್ಲಿ ಪ್ರತಿಕ್ರಿಯೆ ನೀಡಿದರು.

ಮತ್ತಿಬ್ಬರು ಬಾಲಕಿಯರಿಂದ ಲೈಂಗಿಕ ಕಿರುಕುಳ ದೂರು
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಮತ್ತಿಬ್ಬರು ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. 12 ಹಾಗೂ 14 ವರ್ಷದ ಇಬ್ಬರು ಬಾಲಕಿಯರು ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಪೋಷಕರ ಜತೆಯಲ್ಲಿ ಒಡನಾಡಿ ಸಂಸ್ಥೆಗೆ ವಿದ್ಯಾರ್ಥಿಗಳು ಆಗಮಿಸಿದ್ದು, ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಿದ್ದಾರೆ. ಮಕ್ಕಳು ಈಗ ಒಡನಾಡಿ ಆಶ್ರಯದಲ್ಲಿ ಇದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮರುಘಾ ಶರಣರಿಗೆ ಯಶಸ್ವಿ ಕೊರೊನರಿ ಆಂಜಿಯೊಗ್ರಾಮ್‌: ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

ಪ್ರಸ್ತುತ ಒಂದು ಮಗು ಹಾಗೂ ಆಕೆಯ ತಾಯಿಯ ಹೇಳಿಕೆಯನ್ನು ಸಿಡಬ್ಲ್ಯೂಸಿ ಹಾಗೂ ಪೊಲೀಸರು ಪಡೆದಿದ್ದಾರೆ. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದು ದೂರಿನಲ್ಲಿ ಮಕ್ಕಳ ತಾಯಿ ಹೇಳಿದ್ದಾರೆ.

ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಟ್ಟು 7 ಮಂದಿ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಹೊಸದಾಗಿ ಮಠದ ಇಬ್ಬರು ಸಿಬ್ಬಂದಿಯ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಮೇಲೂ ದೂರು ನೀಡಲಾಗಿದೆ.

ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಮುರುಘಾ ಶರಣರು ಈಗಾಗಲೇ ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೃದಯ ಸಮಸ್ಯೆ ಹೊಂದಿರುವ ಶ್ರೀಗಳಿಗೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್‌ ನಡೆದಿ‌ದ್ದು, ಜಾಮೀನು ನಿರಾಕರಿಸಲಾಗಿದೆ.

ಏನಿದು ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು.

ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿಗಳ ಬಳಿಗೆ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರಿಸುವ ಔಷಧ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದೂ ಹೇಳಲಾಗಿತ್ತು.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಕೊನೆಗೆ ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧಿಸಲಾಯಿತು. ಬಳಿಕ ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಂಧಿಸಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಯಿತು. ಈ ನಡುವೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟಿದ್ದಾರೆ.

ಇದನ್ನೂ ಓದಿ | ಮುರುಘಾ ಶರಣರ ಮೇಲೆ ಮತ್ತಿಬ್ಬರು ಬಾಲಕಿಯರಿಂದ ಲೈಂಗಿಕ ಕಿರುಕುಳ ದೂರು

Exit mobile version