ಕರ್ನಾಟಕ
Group Clash: ಫ್ಲೆಕ್ಸ್ ಗಲಾಟೆಯಲ್ಲಿ ಕೈ-ಕಮಲ ಕಾರ್ಯಕರ್ತರ ಮಾರಾಮಾರಿ; 3 ಪ್ರತ್ಯೇಕ ಎಫ್ಐಆರ್ ದಾಖಲು
Group Clash: ಬೆಂಗಳೂರಿನ ಗೋವಿಂದರಾಜನಗರದಲ್ಲಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರ ನಡುವೆ ಫ್ಲೆಕ್ಸ್ ವಿಚಾರವಾಗಿ ಮಾರಾಮಾರಿ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ 3 ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಫ್ಲೆಕ್ಸ್ ಹಾಕುವ ವಿಚಾರವಾಗಿ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಶಾಸಕ ಪ್ರಿಯಕೃಷ್ಣ ಬೆಂಬಲಿಗರ ನಡುವೆ ಮಾರಾಮಾರಿ ನಡೆದ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಪೊಲೀಸರು ಒಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡರೆ, ಉಳಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ನೀಡಿರುವ ದೂರು-ಪ್ರತಿದೂರು ಆಧರಿಸಿ ಎರಡು ಪ್ರಕರಣಗಳು ದಾಖಲಾಗಿವೆ.
ಫ್ಲೆಕ್ಸ್ ಹಾಕುವ ವಿಚಾರಕ್ಕೆ ಶುಕ್ರವಾರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜಿಎಸ್ ಮೈದಾನದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿತ್ತು. ಭಾನುವಾರ ಬಿಜಿಎಸ್ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಫ್ಲೆಕ್ಸ್ ಹಾಕಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ಥಳೀಯ ಯುವಕರು ತಡೆದ ಹಿನ್ನೆಲೆಯಲ್ಲಿ ವಾಗ್ವಾದ ಶುರುವಾಗಿತ್ತು. ನಂತರ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರಿಂದ ಎರಡೂ ಗುಂಪುಗಳ ನಡುವೆ ಜಗಳ, ಕಲ್ಲು ತೂರಾಟ ನಡೆದಿತ್ತು.
ಗಲಾಟೆಯಲ್ಲಿ ಒಬ್ಬ ಬಿಜೆಪಿ ಮುಖಂಡ ಹಾಗೂ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದವು. ನಂತರ ಪೊಲೀಸರು ಲಾಠಿ ಚಾರ್ಜ್ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು. ನಂತರ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಆರೋಪದ ಮೇಲೆ ಮೂವತ್ತಾರು ಜನರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Bike Wheeling: ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಕಿರಿಕ್; ಬೇಡ ಎಂದಿದ್ದಕ್ಕೆ ಲಾಂಗು, ಮಚ್ಚು ತೆಗೆದುಕೊಂಡು ಹೋದವ ಮೃತ್ಯು
ಇದಲ್ಲದೇ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ನೀಡಿರುವ ದೂರಿನನ್ವಯ 10 ಜನರ ವಿರುದ್ಧ ಹಲ್ಲೆ ಹಾಗೂ ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಪ್ರತಿಯಾಗಿ ಬಿಜೆಪಿ ಕಾರ್ಯಕರ್ತೆ ರಮ್ಯಾ ಎಂಬುವವರು ಸಹ ದೂರು ನೀಡಿದ್ದು, ಅದರನ್ವಯ 8 ಜನರ ವಿರುದ್ಧ ಹಲ್ಲೆ, ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ.
ಪರಸ್ಪರ ಕೆಸರೆರಚಾಟದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರು
ಇನ್ನು ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ, ಮಾರ್ಚ್ 18, 19ಕ್ಕೆ ಕಾಂಗ್ರೆಸ್ ಮಹಿಳಾ ಸದಸ್ಯರ ಸಮಾವೇಶ ಇತ್ತು. ಕಾರ್ಯಕ್ರಮ ಪಬ್ಲಿಸಿಟಿಗಾಗಿ ಫ್ಲೆಕ್ಸ್ ಹಾಕಲು ನಮ್ಮ ಕಾರ್ಯಕರ್ತರು ತೆರಳಿದ್ದರು. ಇದಕ್ಕೆ ಕೆಲವು ಕಿಡಿಗೇಡಿಗಳು ಅಡ್ಡಿಪಡಿಸಿದ್ದಾರೆ. ಕೆಲ ರೌಡಿಶೀಟರ್ಸ್ ಹಾಗೂ ಸಮಾಜಘಾತುಕ ಶಕ್ತಿಗಳು ನಮ್ಮ ಮಹಿಳಾ ಕಾರ್ಯಕರ್ತರ ಜತೆ ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಬಿಜೆಪಿಗೆ ಸಪೋರ್ಟ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಡೆಯುವ ಹಾಗೆ ಮಾಡಿದ್ದಾರೆ. ಗಲಾಟೆ ನಡೆಯುವ ಮುನ್ನ ಅರುಣ್ ಸೋಮಣ್ಣ ಕೂಡ ಇದ್ದರು. ಬಿಜೆಪಿಯವರ ಕಾರಿನಲ್ಲಿ ಮಾರಾಕಾಸ್ತ್ರಗಳೂ ಇದ್ದವು ಎಂದು ಆರೋಪಿಸಿದ್ದಾರೆ.
ಪೊಲೀಸ್ ಕಮಿಷನರ್ಗೆ ಬಿಜೆಪಿ ದೂರು
ವಿಜಯನಗರ ಬಿಜೆಪಿ ನಿಯೋಗವು ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿಗೆ ದೂರು ನೀಡಿದೆ. ಪೊಲೀಸ್ ಅಧಿಕಾರಿಗಳು ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಕಾಂಗ್ರೆಸ್ ಗೂಂಡಾಗಳು ಕಿರಿಕ್ ಮಾಡಿದ್ದಾರೆ. ಮಾ. 19 ರಂದು ಕಾರ್ಯಕ್ರಮ ಇದ್ದರೆ 18ರಂದು ಫ್ಲೆಕ್ಸ್ ಕಟ್ಟಬೇಕಿತ್ತು. ಆದರೆ, ಶುಕ್ರವಾರ ಕ್ರಿಕೆಟ್ ಆಡುತ್ತಿದ್ದವರಿಗೆ ಅಡ್ಡಿಪಡಿಸಿದ್ದಾರೆ. ಅಲ್ಲದೇ ಗಲಾಟೆ ಸಮಯದಲ್ಲಿ ಅರುಣ್ ಸೋಮಣ್ಣ ಸ್ಥಳದಲ್ಲಿಯೇ ಇರಲಿಲ್ಲ, ಯಾವುದೇ ಮಾರಕಾಸ್ತ್ರಗಳು ಕೂಡ ಇರಲಿಲ್ಲ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಇದನ್ನೂ ಓದಿ | Murder Case: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಮ್ಮನನ್ನೇ ತುಂಡು ತುಂಡಾಗಿ ಕತ್ತರಿಸಿದ್ದ ಅಕ್ಕ; 8 ವರ್ಷಗಳ ಬಳಿಕ ಸೆರೆ ಸಿಕ್ಕಿದ್ದು ಹೇಗೆ?
ಕಾರಿನಲ್ಲಿ ಎರಡು ಪೆಟ್ರೋಲ್ ಕ್ಯಾನ್ ಪತ್ತೆ!
ಗೋವಿಂದರಾಜನಗರದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ವೇಳೆ ಬಿಜೆಪಿಯವರು ಕಾರಿನಲ್ಲಿ ಮಾರಕಾಸ್ತ್ರಗಳನ್ನು ತಂದಿದ್ದರು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದರು. ಇದೀಗ ಪೆಟ್ರೋಲ್ ತುಂಬಿದ್ದ 2 ಕ್ಯಾನ್ಗಳು ಗಲಾಟೆ ವೇಳೆ ಕಂಡುಬಂದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಸ್ವಿಫ್ಟ್ ಕಾರಿನಲ್ಲಿ ಬಿಜೆಪಿ ಕಡೆಯವರು ಪೆಟ್ರೋಲ್ ಕ್ಯಾನ್ಗಳನ್ನು ತಂದಿದ್ದರು ಎಂದು ಆರೋಪಿಸಿದ್ದಾರೆ. ಆದರೆ, ಪೆಟ್ರೋಲ್ ಕ್ಯಾನ್ಗಳನ್ನು ಯಾರು ತಂದಿದ್ದರು, ಕಾರು ಯಾರಿಗೆ ಸೇರಿದ್ದು ಎಂಬುದು ತಿಳಿದುಬಂದಿಲ್ಲ.
ಗಲಾಟೆ ವೇಳೆ ಪೆಟ್ರೋಲ್ ಕ್ಯಾನ್ ಅನ್ನು ಕೈಯಲ್ಲಿ ಹಿಡಿದು ಯುವಕನೊಬ್ಬ ಓಡುತ್ತಿರುವ ದೃಶ್ಯ ಸೆರೆಯಾಗಿದ್ದು, ಸದ್ಯ ಈ ವಿಡಿಯೊ ವೈರಲ್ ಆಗಿದೆ. ಬಿಜೆಪಿಯವರು ಗಲಾಟೆ ಮಾಡಲು ಪೆಟ್ರೋಲ್ ತಂದಿದ್ದರು ಎಂದು ಕಾಂಗ್ರೆಸ್ನವರು ಆರೋಪಿಸುತ್ತಿರುವ ನಡುವೆ ಇದಕ್ಕೆ ಇಂಬು ನೀಡುವಂತೆ ಇಬ್ಬರು ಕ್ಯಾನ್ ಹಿಡಿದು ಓಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ. ಆದರೆ, ಈ ಪೆಟ್ರೋಲ್ ಕ್ಯಾನ್ಗಳನ್ನು ಸ್ಥಳಕ್ಕೆ ಯಾವ ಕಾರಣಕ್ಕೆ ತಂದಿದ್ದರು ಎಂಬುದು ಪೊಲೀಸರ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.
ಉತ್ತರ ಕನ್ನಡ
Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ
Uttara Kannada News: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ಐವರು ವಿದ್ಯಾರ್ಥಿಗಳು ವಿಜೇತರಾಗಿದ್ದಾರೆ.
ಉತ್ತರ ಕನ್ನಡ: ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾ.22ರಿಂದ 25ರವರೆಗೆ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಯಲ್ಲಾಪುರ ತಾಲೂಕಿನ (Uttara Kannada News) ಉಮ್ಮಚಗಿಯ ಶ್ರೀ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವಿವಿಧ ವಿಭಾಗಗಳಲ್ಲಿ ಮೂವರು ಪ್ರಥಮ ಸ್ಥಾನ ಹಾಗೂ ಇಬ್ಬರು ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಾಕ್ಪ್ರತಿಯೋಗಿತಾ ಸ್ಪರ್ಧೆಯ ಸಾಹಿತ್ಯ ಭಾಷಣದಲ್ಲಿ ನಾಗರಾಜ ಭಟ್ಟ ಪ್ರಥಮ, ಜ್ಯೋತಿಷ್ಯ ಶಲಾಕಾ ಸ್ಪರ್ಧೆಯಲ್ಲಿ ಗಣೇಶ ಪ್ರಸಾದ ಭಟ್ಟ ಪ್ರಥಮ, ಜ್ಯೋತಿಷ್ಯ ಭಾಷಣ ಸ್ಪರ್ಧೆಯಲ್ಲಿ ವಿನಾಯಕ ಭಟ್ಟ ದ್ವಿತೀಯ, ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ಸುಮಂತ್ ಜೋಶಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೆಯೇ ಇದೇ ಶಾಲೆಯಲ್ಲಿ ಅಧ್ಯಯನ ಮಾಡಿದ ಪಿಎಚ್ಡಿ ವಿದ್ಯಾರ್ಥಿ ಕುಮಾರ ಹೆಗಡೆ ಅಕ್ಷರಶ್ಲೋಕಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 14 ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯವು ಸತತ 41ನೇ ಬಾರಿ ವಿಜಯ ವೈಜಯಂತೀ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇದನ್ನೂ ಓದಿ | ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!
ವೇದಭಾಷ್ಯ ಭಾಷಣದಲ್ಲಿ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ
ಕಾಶಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ನಡೆದ 2022-23ನೇ ಸಾಲಿನ ರಾಷ್ಟ್ರಮಟ್ಟದ ವಾಕ್ಪ್ರತಿಯೋಗಿತಾ ಸ್ಪರ್ಧೆಯಲ್ಲಿ ಶ್ರೀ ರಾಜರಾಜೇಶ್ವರೀ ಸಂಸ್ಕೃತ ಮಹಾಪಾಠಶಾಲೆಯ ಕೃಷ್ಣ ಯಜುರ್ವೇದ ವಿದ್ಯಾರ್ಥಿಯಾದ ಮಹೇಶ ಭಟ್ಟ ಹಿತ್ಲಕಾರಗದ್ದೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಕ್ಕೆ ಮತ್ತು ಪಾಠಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿ.ಪ್ರಸಾದ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಸ್ವರ್ಣವಲ್ಲೀ ಶ್ರೀಗಳು, ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ
Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ
Modi in Karnataka: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ರೋಡ್ ಶೋ ವೇಳೆ ಭದ್ರತಾ ವೈಫಲ್ಯ ಉಂಟಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಪೊಲೀಸರು ವಿಚಾರಣೆ ನಡೆಸಿದ್ದಾರೆ. ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳ ಮೂಲದ ಯುವಕ ಬಸವರಾಜ್ (29) ಹಾಗೂ ಎನ್ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿಯ ಬೃಹತ್ ಸಮಾವೇಶದ ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರು ಬೃಹತ್ ಪೆಂಡಾಲ್ನ ಸುತ್ತ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದರೆ ಯುವಕ ಬಸವರಾಜ್ ಬ್ಯಾರಿಕೇಡ್ ಹಾರಿ ಮೋದಿ ಅವರಿದ್ದ ವಾಹನದತ್ತ ದೌಡಾಯಿಸಿದ್ದ. ಕೂಡಲೇ ಎಚ್ಚೆತ್ತ ಗಾಂಧಿನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್ ಶೋ ನಡೆಸಿದ್ದೇಕೆ?
ಇನ್ನು ರೋಡ್ ಶೋಗೂ ಮೊದಲು ಸಂಗಮದಲ್ಲಿ ಪ್ರಧಾನ ಮಂತ್ರಿ ಆಗಮನದ ವೇಳೆ ಡಿ ಜೋನ್ನಲ್ಲಿ ಪ್ರವೇಶ ಮಾಡಿದ್ದ ಎನ್ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಈಗ ಎನ್ಸಿಸಿ ಅಧಿಕಾರಿಯಾಗಿರುವ ರಾಜ್ ಗೌರವ್ ಮೋದಿ ಅವರ ಜತೆ ಪೋಟೊ ತೆಗೆಸಿಕೊಳ್ಳಲು ಎನ್ಸಿಸಿ ನುಗ್ಗಿದ್ದಾರೆ ಎನ್ನಲಾಗಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ.
ರಾಜ್ಯಾದ್ಯಂತ ನಡೆದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ಆಯೋಜನೆಯಾಗಿತ್ತು. ಅಲ್ಲಿ ಸುಮಾರು 2 ಲಕ್ಷ ಜನರಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗಿತ್ತು. ಅವರ ಮಧ್ಯೆ ಪ್ರಧಾನಿಯವರು ವಾಹನದ ಮೂಲಕ ರೋಡ್ ಶೋ ನಡೆಸಿದರು. ಈ ವೇಳೆ ಭದ್ರತಾ ಲೋಪ ಕಂಡುಬಂದಿದೆ.
ಕರ್ನಾಟಕ
Amit Shah Visit: ಭಾನುವಾರ ಅಮಿತ್ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
Amit Shah Visit: ಬೀದರ್, ರಾಯಚೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ.
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 26ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೀದರ್, ರಾಯಚೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಮೆ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಅಮಿತ್ ಶಾ ಅವರು (Amit Shah Visit) ಭಾಗವಹಿಸಲಿದ್ದಾರೆ.
ಮೊದಲಿಗೆ ಬೀದರ್ ಜಿಲ್ಲೆ ಗೋರ್ಟಾ ಗ್ರಾಮದಲ್ಲಿ ಹುತಾತ್ಮರ ಸ್ಮಾರಕ ಹಾಗೂ ಸರ್ದಾರ್ ವಲ್ಲಭಭಾಯಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಬಳಿಕ ರಾಯಚೂರು ಜಿಲ್ಲೆಯಲ್ಲಿ 4,238 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವೇಶ್ವರ ಹಾಗೂ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಡಿ ಜಿಲ್ಲೆ ಬೀದರ್ಗೆ ಎರಡನೆ ಬಾರಿಗೆ ಆಗಮಿಸಿದ್ದಾರೆ. ಶನಿವಾರ (ಮಾ.25) ಸಂಜೆ ಬೀದರ್ ಏರ್ ಬೇಸ್ಗೆ ಅವರು ಆಗಮಿಸಿದ್ದಾರೆ. ರಾತ್ರಿ ಏರ್ಪೋರ್ಸ್ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಲಿರುವ ಬಿಜೆಪಿಯ ಚಾಣಕ್ಯ, ಭಾನುವಾರ ಬೆಳಗ್ಗೆ 10-10ಕ್ಕೆ ಹೆಲಿಕಾಪ್ಟರ್ ಮೂಲಕ ಬಸವಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮಕ್ಕೆ ತೆರಳಲಿದ್ದಾರೆ. ಬೆಳಗ್ಗೆ 10-30 ರಿಂದ ಮಧ್ಯಾಹ್ನ 12-30 ವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ | Modi in Karnataka: ಸರ್. ಎಂ. ವಿಶ್ವೇಶ್ವರಯ್ಯ ಅವರ ಕುರಿತು ಹೊಸ ಮ್ಯೂಸಿಯಂ ನಿರ್ಮಾಣ: ಪ್ರಧಾನಿ ನರೇಂದ್ರ ಮೋದಿ ಭರವಸೆ
ಗೋರ್ಟಾ ಗ್ರಾಮದ ಲಕ್ಷ್ಮಿ ದೇವಸ್ಥಾನದ ಎದುರು ನಿಜಾಮರ ಆಡಳಿತದಲ್ಲಿ ನಡೆದ ಹತ್ಯಾಕಾಂಡದ ಸ್ಥಳದಲ್ಲಿ 103 ಅಡಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 35 ಅಡಿ ಎತ್ತರದ ಹುತಾತ್ಮದ ಸ್ಮಾರಕ, 1100 ಕೆ.ಜಿ. ತೂಕದ 11 ಅಡಿ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡುತ್ತಾರೆ. ಬಳಿಕ ಕಾರ್ಯಕ್ರಮದ ವೇದಿಕೆಯಲ್ಲಿ ಗೋರ್ಟಾ ಗ್ರಾಮದಲ್ಲಿ ನಡೆದ ಹತ್ಯಾಕಾಂಡ, ನಿಜಾಮರ ಆಡಳಿತ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯ ನಾಯಕರು ಉಪಸ್ಥಿತರಿರಲಿದ್ದಾರೆ.
ಬಳಿಕ ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಬ್ಬೂರಿಗೆ ತೆರಳಿ 4,283 ಸಾವಿರ ಕೋಟಿ ರೂಪಾಯಿ ವೆಚ್ಚದ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಸೇರಿ 200 ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 3 ಲಕ್ಷ ಜನ ಸೇರು ನಿರೀಕ್ಷೆ ಇದೆ.
ಇದನ್ನೂ ಓದಿ | Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
ನಂತರ ಸಂಜೆ 6.30ಕ್ಕೆ ಗಂಟೆಗೆ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ʼಬೆಂಗಳೂರು ಹಬ್ಬʼದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ವಿಧಾನ ಸೌಧದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ನಾಯಕರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಅದಾದ ನಂತರ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿ, ಮಾ.27 ರಂದು ಬೆಳಗ್ಗೆ ನವ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಕರ್ನಾಟಕ
Karnataka Rain: ಮಾ.26, 27 ರಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ
Karnataka Rain: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 26 ಮತ್ತು 27 ರಂದು ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ರಾಯಚೂರು ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮಾ.28 ಬೆಳಗ್ಗೆ 8.30ರವರೆಗೆ ರಾಜ್ಯದ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಇದನ್ನೂ ಓದಿ | ವಿಸ್ತಾರ TOP 10 NEWS: ರಾಜ್ಯಾದ್ಯಂತ ಮೋದಿ ಸಂಚಾರದಿಂದ, ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆವರೆಗಿನ ಪ್ರಮುಖ ಸುದ್ದಿಗಳಿವು
ಇತ್ತೀಚೆಗೆ ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು ಮಾತ್ರವಲ್ಲದೆ, ಅಪಾರ ಬೆಳೆ ಹಾನಿ ಉಂಟಾಗಿತ್ತು. ಇದೀಗ ಮತ್ತೆ ಎರಡು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೈತರು ಆತಂಕಗೊಂಡಿದ್ದಾರೆ.
-
ಅಂಕಣ21 hours ago
Ramzan Fasting : ರಂಜಾನ್ ವ್ರತಾಚರಣೆಗಿದೆ ವೈಜ್ಞಾನಿಕ ದೃಷ್ಟಿಕೋನ; ಆರೋಗ್ಯ ವರ್ಧನೆಗೆ ಇದು ಎಷ್ಟು ಸಹಕಾರಿ?
-
ಅಂಕಣ21 hours ago
ರಾಜ ಮಾರ್ಗ ಅಂಕಣ : ಎಸೆಸೆಲ್ಸಿ ವಿದ್ಯಾರ್ಥಿಗಳು ಇನ್ನು ಆರೇ ದಿನ ಓದಿದರೂ ಪಾಸ್ ಆಗಬಹುದು! ಹಾಗಿದ್ರೆ ಏನು ಮಾಡಬೇಕು?
-
ಕರ್ನಾಟಕ21 hours ago
Modi In Karnataka: ಕೆಆರ್ ಪುರ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ; ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?
-
ಅಂಕಣ22 hours ago
ವಿಸ್ತಾರ ಅಂಕಣ: ಭಾರತಕ್ಕೆ ಈಗ ಬೇಕಿರುವುದು ʼಈಸ್ ಆಫ್ ಡೂಯಿಂಗ್ ಪಾಲಿಟಿಕ್ಸ್ʼ ಸೂಚ್ಯಂಕ
-
ಕರ್ನಾಟಕ19 hours ago
Congress Ticket list : ಸಿದ್ದರಾಮಯ್ಯ ವರುಣ ಕೇಳಿದ್ರು ಕೊಟ್ವಿ, ಕೋಲಾರ ಕೇಳಿದ್ದರೆ ಅದನ್ನೇ ಕೊಡುತ್ತಿದ್ದೆವು; ಡಿ.ಕೆ. ಶಿವಕುಮಾರ್
-
ಕರ್ನಾಟಕ15 hours ago
Modi in Karnataka: ಮೆಟ್ರೊ ರೈಲು ಮಾರ್ಗ ಉದ್ಘಾಟಿಸಿ ಸಾಮಾನ್ಯರಂತೆ ಪ್ರಯಾಣಿಸಿದ ಪ್ರಧಾನಿ ಮೋದಿ
-
ಕರ್ನಾಟಕ19 hours ago
Modi In Karnataka: ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ; ಪ್ರವಾಸದ ಇಂಚಿಂಚು ಮಾಹಿತಿ ಇಲ್ಲಿದೆ
-
ಅಂಕಣ16 hours ago
ಹೊಸ ಅಂಕಣ: ಸೈಬರ್ ಮಿತ್ರ: ಜಾಣರಾಗಿ, ಜಾಗರೂಕರಾಗಿರಿ!