Site icon Vistara News

Toyota Kirloskar Motor: ಬಿಡದಿಯಲ್ಲಿ ಟೊಯೋಟಾದ 3ನೇ ಕಾರು ಉತ್ಪಾದನಾ ಘಟಕ

Agreement between Toyota and State Government

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ (Toyota Kirloskar Motor) ಕಂಪನಿಯು ಬಿಡದಿಯಲ್ಲಿ 3,300 ಕೋಟಿ ರೂ. ವೆಚ್ಚದಲ್ಲಿ ತನ್ನ ಮೂರನೇ ಕಾರು ಉತ್ಪಾದನಾ ಘಟಕವನ್ನು ಆರಂಭಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕಂಪನಿ ಮಂಗಳವಾರ ಒಡಂಬಡಿಕೆಗೆ ಅಂಕಿತ ಹಾಕಿದವು.

ಒಡಂಬಡಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು. ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಟೊಯೋಟಾ ಪರವಾಗಿ ಕಂಪನಿಯ ಉಪಾಧ್ಯಕ್ಷ ಸುದೀಪ್‌ ದಳವಿ ಅಂಕಿತ ಹಾಕಿ, ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು.

ಬಳಿಕ ಮಾತನಾಡಿದ ಸಚಿವ ಪಾಟೀಲ್‌ ಅವರು, ʻಟೊಯೋಟಾ ರಾಜ್ಯದಲ್ಲಿ ನೆಲೆಯೂರಿ 25 ವರ್ಷಗಳು ತುಂಬಿವೆ. ಈ ಸಂದರ್ಭದಲ್ಲೇ ಕಂಪನಿಯು ನೂತನ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿ ಉತ್ಪಾದನಾ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದ್ದು, ನೂತನ ತಂತ್ರಜ್ಞಾನಾಧಾರಿತ ಕಾರುಗಳು ಎಲ್ಲರಿಗೂ ಸುಲಭವಾಗಿ ಲಭ್ಯವಾಗಲಿವೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಟೊಯೋಟಾ ಕಂಪನಿಯ ಎರಡು ಉತ್ಪಾದನಾ ಘಟಕಗಳು ಈಗಾಗಲೇ ಬಿಡದಿಯಲ್ಲಿ ಸಕ್ರಿಯವಾಗಿವೆ. ಉದ್ದೇಶಿತ ಮೂರನೇ ಘಟಕದಲ್ಲಿ ವರ್ಷಕ್ಕೆ ಹೆಚ್ಚುವರಿಯಾಗಿ 1 ಲಕ್ಷ ಕಾರುಗಳನ್ನು ಉತ್ಪಾದಿಸುವ ಸಾಮರ್ಥ್ಯವಿದ್ದು, ಇದರಿಂದ ಅಂದಾಜು 2 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದರು.

ಸರ್ಕಾರವು ಕೈಗಾರಿಕಾ ರಂಗದ ಬೆಳವಣಿಗೆಗೆ ಆದ್ಯ ಗಮನ ಕೊಟ್ಟಿದ್ದು, ವಿದ್ಯುತ್‌ ಚಾಲಿತ ವಾಹನಗಳ ವಲಯ ಸೇರಿದಂತೆ ಒಟ್ಟು 9 ವಲಯಗಳಿಗೆ ಅನ್ವಯವಾಗುವಂತೆ ವಿಷನ್‌ ಗ್ರೂಪ್‌ಗಳನ್ನು ರಚಿಸಿದೆ. ಇವುಗಳಲ್ಲಿ ಗಣ್ಯ ಉದ್ಯಮಿಗಳೇ ಇದ್ದು, ರಾಜ್ಯಕ್ಕೆ ಬಂಡವಾಳ ಹೂಡಿಕೆಯನ್ನು ಆಕರ್ಷಿಲಾಗುವುದು. ಜತೆಗೆ ಕರ್ನಾಟಕ ಇನ್ವೆಸ್ಟ್‌ಮೆಂಟ್‌ ಫೋರಂ ಮತ್ತು ಸ್ಟ್ರಾಟೆಜಿಕ್‌ ಇನ್ವೆಸ್ಟ್‌ಮೆಂಟ್ ಫೋರಂ ಎರಡಕ್ಕೂ ಹೊಸ ರೂಪ ನೀಡಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ | ಆಸ್ಟ್ರೇಲಿಯಾ ಸಚಿವರೊಂದಿಗೆ ಎಂ.ಬಿ. ಪಾಟೀಲ್‌ ಮಾತುಕತೆ; ರಾಜ್ಯದಲ್ಲಿ ಹೂಡಿಕೆಗೆ ಬೆಂಬಲ

ಕಾರ್ಯಕ್ರಮದಲ್ಲಿ ಟೊಯೋಟಾ ವ್ಯವಸ್ಥಾಪಕ ನಿರ್ದೇಶಕ ಮಸಕಝು ಯೋಶಿಮುರ, ಉಪಾಧ್ಯಕ್ಷರಾದ ಸ್ವಪ್ನೇಶ್‌ ಮರು, ವಿಕ್ರಂ ಗುಲಾಟಿ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

Exit mobile version