Site icon Vistara News

Karnataka Election: ಆರೋಗ್ಯ ಲೆಕ್ಕಿಸದೆ ದಿನಕ್ಕೆ 18 ಗಂಟೆ ಹೋರಾಟ ಮಾಡುತ್ತಿದ್ದೇನೆ: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ

ಶಿರಾದಲ್ಲಿ ಕುಮಾರಸ್ವಾಮಿ ಪ್ರಚಾರ ಕಾರ್ಯಕ್ರಮ

ಶಿರಾ: ವಿಧಾನಸಭಾ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಅದೇ ರೀತಿಯಲ್ಲಿ ಜೆಡಿಎಸ್‌ ಮುಖಂಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಕೂಡ ಎಲ್ಲೆಡೆ ಪ್ರಚಾರ ನಡೆಸುತ್ತಿದ್ದಾರೆ. ತುಮಕೂರಿನ ಶಿರಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಜೆಡಿಎಸ್ ಅಭ್ಯರ್ಥಿ ಆರ್. ಉಗ್ರೇಶ್ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, “ಕ್ಷೇತ್ರದಲ್ಲಿ ಇಂದಿನ ಕಾರ್ಯಕ್ರಮದಲ್ಲಿ ಹಳ್ಳಿ ಹಳ್ಳಿಗಳಿಂದ ಬಂದಿರುವ ಎಲ್ಲರಿಗೂ ಅಭಿನಂದನೆಗಳು. ನಾನು ಕಳೆದ ಹದಿನೈದು ವರ್ಷಗಳಿಂದ ಶಿರಾಕ್ಕೆ ಬಂದಿದ್ದೇನೆ. ಇಂತಹ ಉತ್ಸಾಹ ಅಂದಿನಿಂದ ಇಂದಿನವರೆಗೂ ಕಾಣುತ್ತಿದ್ದೇನೆ. ರಾಜ್ಯದ ಜನರ ಜೀವನದ ಜತೆ ಚೆಲ್ಲಾಟ ಆಡುತ್ತಿರುವ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Karnataka Election : ಬಜರಂಗ ಗಲಾಟೆ ನಡುವೆ ಮೋದಿ ಪತ್ನಿ ವಿಷಯ ಪ್ರಸ್ತಾಪ; ಎಲ್ಲಿ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ ಉಗ್ರಪ್ಪ

“ನಾನು ಕೇವಲ ರಾಜಕೀಯ ಭಾಷಣ ಮಾಡಿ, ಇನ್ನೊಬ್ಬರನ್ನು ನಿಂದನೆ ಮಾಡಲು ಬಂದಿಲ್ಲ. ನನ್ನ ಯೋಜನೆಗಳನ್ನು ಜನರ ಮುಂದಿಟ್ಟು ಮತ ಕೇಳಲು ಬಂದಿದ್ದೇನೆ. ಆರೋಗ್ಯ ಸರಿ ಇಲ್ಲದಿದ್ದರೂ ಕಳೆದ ಹದಿನೈದು ದಿನಗಳಿಂದ ದಿನದ 18 ಗಂಟೆ ಕೆಲಸ ಮಾಡುತ್ತಿದ್ದೇನೆ. ಇವತ್ತು ಕಾಂಗ್ರೆಸ್ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಈ ನಾಡಿನ ಜನತೆಗೆ ಬೇಡುವ ಸ್ಥಿತಿ ತಂದೊಡ್ಡುವ ರೀತಿ ಇದೆ ಆ ಪ್ರಣಾಳಿಕೆ. ನಮ್ಮ ಪಂಚರತ್ನ ಕಾರ್ಯಕ್ರಮ ಹಾಗಲ್ಲ. ಎಲ್ಲರೂ ಸದೃಢವಾಗಿ ಇರಬೇಕು. ನಮ್ಮ ಸರ್ಕಾರ ಪ್ರತಿ ಕುಟುಂಬವೂ ಸ್ವಾಭಿಮಾನದಿಂದ ಬದುಕುವಂತೆ ಶಕ್ತಿ ತುಂಬಲಿದೆ. ಒಂದೇ ಒಂದು ಬಾರಿ ಪರೀಕ್ಷೆ ಮಾಡಿ. ನಿಮ್ಮ ಕಷ್ಟಗಳಿಗೆ ಮುಕ್ತಿ ಕೊಡ್ತೇನೆ. ನಾನು ಹೇಳಿದಂತೆ ಮಾಡದಿದ್ದರೆ ಇನ್ನೆಂದೂ ನಿಮ್ಮೆದುರು ಬರೋದಿಲ್ಲ” ಎಂದು ಅವರು ಮನವಿ ಮಾಡಿದರು.

“5 ವರ್ಷದ ಆಡಳಿತದ ಸರ್ಕಾರವನ್ನು ಜನತಾದಳಕ್ಕೆ ಕೊಡಿ. ನೀವು ಮೆಚ್ಚುವ ಆಡಳಿತ ಕೊಡುತ್ತೇನೆ. ಅಧಿಕಾರಕ್ಕೇರಿ ನಾನು ಮುಖ್ಯಮಂತ್ರಿ ಆಗಿ ಮೆರೆಯಬೇಕು ಅಂತಲ್ಲ. ಎಲ್ಲರೂ ನೆಮ್ಮದಿಯಿಂದ ಬಾಳುವಂತಹ ಸರ್ಕಾರ ಕೊಡುತ್ತೇನೆ. ಶ್ರೀಮಂತ ಮಕ್ಕಳಿಗೆ ಸಮಾನವಾದ ಶಿಕ್ಷಣವನ್ನು ಬಡವರ ಮಕ್ಕಳೂ ಪಡೆಯಬೇಕು. ಬಡವರ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತೇವೆ” ಎಂದು ಕುಮಾರಸ್ವಾಮಿ ಅವರು ನುಡಿದರು.

“ಜೆಡಿಎಸ್ ಸರ್ಕಾರ ಬಂದರೆ ಎಂತಹ ಮಾರಣಾಂತಿಕ ಕಾಯಿಲೆ ಬಂದರೂ ಉಚಿತ ಚಿಕಿತ್ಸೆ ಸಿಗಲಿದೆ. ಅಪರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಕೂಡ ಚಿಕಿತ್ಸೆ ಕೊಡಿಸುತ್ತೇವೆ. ನಾನು ಜಾತಿ-ಧರ್ಮ ನೋಡೋಡಿಲ್ಲ. ಸರ್ವರಿಗೂ ಒಳ್ಳೆಯದಾಗಬೇಕು. ಸಮಾನ ಸೌಲಭ್ಯಗಳು ಸಿಗಬೇಕು. ಇದೇ ನನ್ನ ಆಶಯ. ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಾಣವೇ ನನ್ನ ಗುರಿ” ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಇದನ್ನೂ ಓದಿ: Karnataka election 2023: ವಿಜಯನಗರಕ್ಕೆ ಮೆಡಿಕಲ್, ನರ್ಸಿಂಗ್, ಲಾ ಕಾಲೇಜು ತರುವೆ; ಅಲ್ಲೀವರೆಗೂ ವಿರಮಿಸಲ್ಲ: ಸಿದ್ದಾರ್ಥ ಸಿಂಗ್

“ನೀರಾವರಿ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕಾರ್ಯಗತ ಮಾಡುತ್ತೇವೆ. ಜನತಾ ಜಲಧಾರೆ ಹೆಸರಿನಲ್ಲಿ ಯೋಜನೆ ರೂಪಿಸಿದ್ದೇವೆ. ಕೃಷಿ, ನೀರಾವರಿಗೆ ಸಮೃದ್ಧ ನೀರು ಕೊಡುವುದು ನಮ್ಮ ಬದ್ಧತೆ. ಅದನ್ನು ಮಾಡಿ ತೋರಿಸುತ್ತೇವೆ. ಜಮೀನಿಲ್ಲದ ಕೂಲಿ ಕಾರ್ಮಿಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ. ವೃದ್ಧಾಪ್ಯ ವೇತನವಾಗಿ ತಿಂಗಳಿಗೆ 5 ಸಾವಿರ ನೀಡಲಾಗುವುದು. ಈ ನಾಡಿನ ಬಡತನ ಹೋಗಲಾಡಿಸಲು ಜನತಾ ಸರ್ಕಾರ ತನ್ನಿ” ಎಂದು ಜನರನ್ನು ಮಾಜಿ ಮುಖ್ಯಮಂತ್ರಿಗಳು ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೇರಿದಂತೆ ಅನೇಕ ಹಿರಿಯ ನಾಯಕರು, ಸ್ಥಳೀಯ ಮುಖಂಡರು ಹಾಜರಿದ್ದರು.

Exit mobile version