Site icon Vistara News

Union Budget 2023: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ 7561 ಕೋಟಿ ರೂ.! ಇದು ದಾಖಲೆಯ ಅನುದಾನ

Ashwini Vaishnaw

ನವದೆಹಲಿ: ಈ ಬಾರಿ ಕರ್ನಾಟಕದ (Karnataka) ರೈಲ್ವೇ ಯೋಜನೆಗಳಿಗಾಗಿ (Indian Railway) ಬಜೆಟ್‌ನಲ್ಲಿ (Union Budget 2023) ಅತ್ಯಧಿಕ ಹಣವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 7561 ಕೋಟಿ ರೂ. ಮೀಸಲಿಡಲಾಗಿದೆ. ಇದು ಈ ಹಿಂದೆ ನೀಡುತ್ತಿದ್ದ ಮೊತ್ತಕ್ಕೆ ಹೋಲಿಸಿದರೆ, 9 ಪಟ್ಟು ಹೆಚ್ಚು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಕರ್ನಾಟಕದ ವಿಧಾನಸಭೆಗೆ ಚುನಾವಣೆ ನಡೆಯಲಿರುವುದರಿಂದ, ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ವಿಶೇಷ ಮುತುವರ್ಜಿ ವಹಿಸಲಾಗಿದೆ. ಅದೇ ರೀತಿ, ರೈಲ್ವೆ ಯೋಜನೆಗಳಿಗೂ ಹೆಚ್ಚಿನ ಹಣವನ್ನು ಎತ್ತಿಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ರೈಲ್ವೆಗೆ ಬಜೆಟ್‌ನಲ್ಲಿ ನೀಡಿದ ಅನುದಾನ ಕುರಿತು ಮಾಹಿತಿ ನೀಡಿದ ಸಚಿವ ಅಶ್ವಿನ್ ವೈಷ್ಣವ್ ಅವರು, ಕರ್ನಾಟಕಕ್ಕೆ ಈ ಬಾರಿ ಸಿಕ್ಕಾಪಟ್ಟೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಒಟ್ಟು 7561 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಹಣವನ್ನು ಈ ಹಿಂದೆ ಯಾವತ್ತೂ ನೀಡಿಲ್ಲ. 2009ರಿಂದ 2014ರವರೆಗೆ ಕರ್ನಾಟಕಕ್ಕೆ ಪ್ರತಿ ವರ್ಷ ಹೆಚ್ಚು 850 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಈ ಬಾರಿ 9 ಪಟ್ಟು ಹೆಚ್ಚಳ ಅನುದಾನ ಒದಗಿಸಿದೆ ಎಂದು ಅವರು ತಿಳಿಸಿದರು.

ಸಾರಿಗೆ ಕ್ಷೇತ್ರದಲ್ಲಿ ಮೋದಿ ಬದಲಾವಣೆ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳಲ್ಲೂ ಬದಲಾವಣೆ ಬಯಸುತ್ತಿದ್ದಾರೆ. ಸಾರಿಗೆ ಕ್ಷೇತ್ರದಲ್ಲೂ ಬದಲಾವಣೆಯ ಸಾಕಷ್ಟು ನಿರೀಕ್ಷೆಗಳನ್ನು ಅವರು ಹೊಂದಿದ್ದಾರೆ. ರೈಲು ನಿಲ್ದಾಣಗಳ ಅಭಿವೃದ್ಧಿ, ಹೊಸ ರೈಲು ಮಾರ್ಗಗಳನ್ನು ಹಾಕಲಾಗುತ್ತಿದೆ. ಕರ್ನಾಟಕದಲ್ಲಿ 55 ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಸರ್ ಎಂ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣ

ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಬ್ಲೂಪ್ರಿಂಟ್ ದೇಶಕ್ಕೆ ಮಾದರಿಯಾಗಿದೆ. ಇದೇ ಮಾದರಿಯನ್ನು ದೇಶದ ಇತರ ಕಡೆಗೂ ಬಳಸಿಕೊಳ್ಳಲಾಗುವುದು. ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಸೇರಿ ಎಲ್ಲ ಹಂತಗಳಲ್ಲಿ ರಾಜ್ಯ ಸರ್ಕಾರ ನೆರವು ನೀಡುತ್ತಿದೆ ಎಂದು ಕರ್ನಾಟಕ ಸರ್ಕಾರದ ಕ್ರಮವನ್ನು ಶ್ಲಾಘಿಸಿದರು.

ಇದನ್ನೂ ಓದಿ: Union Budget 2023: ನಮ್ಮ ಬಜೆಟ್‌ ಅನ್ನು ಜಗತ್ತು ಸ್ವೀಕರಿಸಲು 10 ಕಾರಣ ನೀಡಿದ ವಿದೇಶಾಂಗ ಸಚಿವ ಜೈಶಂಕರ್

ಸ್ಥಳೀಯ ಆಹಾರಕ್ಕೆ ಆದ್ಯತೆ

ರೈಲುಗಳಲ್ಲಿ ಸ್ಥಳೀಯ ಆಹಾರವನ್ನು ನೀಡಲು ನಿರ್ಧಾರ ಮಾಡಲಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಸ್ಥಳೀಯ ಆಹಾರಕ್ಕೆ ಆದ್ಯತೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ರೈಲುಗಳ ಹಳೆ‌ ಕೋಚ್‌‌ಗಳನ್ನು ಬದಲಾಯಿಸಲಾಗುತ್ತಿದೆ. ಜತೆಗೆ, ಮುಂದಿನ ದಿನಗಳಲ್ಲಿ ಒಂದೇ ಮೆಟ್ರೋ ಯೋಜನೆಗೆ ನಿರ್ಧರಿಸಲಾಗಿದೆ. ರೈಲು ಮಾರ್ಗಗಳ ಮೂಲಕ ನೂರು ಕಿಲೋಮೀಟರ್ ಅಂತರದಲ್ಲಿರುವ ಎರಡು ದೊಡ್ಡ ನಗರಗಳಿಗೆ ಸಂಪರ್ಕ ಕಲ್ಪಿಸುವ ಚಿಂತನೆ ಇದೆ. ಹೈಡ್ರೋಜನ್ ರೈಲು ಈ ಡಿಸೆಂಬರ್ ನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

Exit mobile version