Site icon Vistara News

Vistara News Polling Booth: ಬಾಗಲಕೋಟೆಯಲ್ಲಿ ಮತ್ತೊಮ್ಮೆ ಅರಳಲಿದೆ ಕಮಲ; ಕಾಂಗ್ರೆಸ್‌ಗೆ ಬಂಡಾಯ ಬಿಸಿ?

vistara news polling Booth

ಬಾಗಲಕೋಟೆ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ವಿಸ್ತಾರ ನ್ಯೂಸ್‌ (Vistara News) ಸೋಮವಾರ (ಮಾ. 25) ನಡೆಸಿದ ಪೋಲಿಂಗ್‌ ಬೂತ್‌ (Vistara news polling booth) ಸಮೀಕ್ಷೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ‌ ಮತ್ತೊಮ್ಮೆ ಬಿಜೆಪಿ ಪರ ಜನರು ಒಲವು ತೋರಿದ್ದಾರೆ. ಕ್ಷೇತ್ರದಿಂದ ಸಾವಿರಾರು ಕರೆಗಳು ಬಂದಿದ್ದು, ಇವುಗಳ ಪೈಕಿ ಒಟ್ಟು 6010 ಕರೆಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಶೇ.51ರಷ್ಟು ಮಂದಿ ಬಿಜೆಪಿಯನ್ನು ಬೆಂಬಲಿಸಿದ್ದರೆ, ಶೇ.41ರಷ್ಟು ಜನರು ಕಾಂಗ್ರೆಸ್‌ ಪರ ಒಲವು ತೋರಿದ್ದಾರೆ. ಇನ್ನು ಶೇ.8 ರಷ್ಟು ಮಂದಿ ಇತರ ಪಕ್ಷಕ್ಕೆ (ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ) ಬೆಂಬಲಿಸಿದ್ದಾರೆ.

ವಿಸ್ತಾರ ನ್ಯೂಸ್‌ ನಡೆಸಿದ ಈ ಸಮೀಕ್ಷೆಗೆ ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಸಾವಿರಾರು ಕರೆಗಳು ಬಂದಿವೆ. ಅದರಲ್ಲಿ ಸ್ವೀಕರಿಸಿದ ಒಟ್ಟು 6010 ಕರೆಗಳ ಪೈಕಿ ಬಿಜೆಪಿಗೆ 3050 ಮತ, ಕಾಂಗ್ರೆಸ್‌ಗೆ 2461 ಮತ ಬಂದಿವೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗೆ 499 ಮತಗಳು ಬಂದಿದೆ. ಇದರಿಂದ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ಗೆ ಬಂಡಾಯ ಬಿಸಿ ತಟ್ಟುವುದು ಖಚಿತವಾಗಿದ್ದು, ಇದರಿಂದ ಮತ್ತೊಮ್ಮೆ ಬಿಜೆಪಿಯೇ ಜಯಭೇರಿ ಬಾರಿಸಲಿದೆ ಎಂಬುದು ಜನರ ಅಭಿಪ್ರಾಯವಾಗಿದೆ.

ಕರೆಗಳ ಶೇಕಡಾವಾರು ವಿವರ

ಸ್ವೀಕರಿಸಿದ ಕರೆಗಳು : 6010
ಬಿಜೆಪಿ : 3050 (ಶೇ.51)
ಕಾಂಗ್ರೆಸ್ : 2461 (ಶೇ.41)
ಇತರೆ : 499 (ಶೇ.8) (ವೀಣಾ ಕಾಶಪ್ಪನವರ್)

ಕ್ಷೇತ್ರದಲ್ಲಿ ನಾಲ್ಕು ಬಾರಿಯ ಸಂಸದ ಪಿ.ಸಿ.ಗದ್ದಿಗೌಡರ್‌ ಅವರು ಮತ್ತೊಮ್ಮೆ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಈ ಬಾರಿಯೂ ಅಭ್ಯರ್ಥಿಯನ್ನು ಬದಲಿಸಲಾಗಿದ್ದು, ಸಚಿವ ಶಿವಾನಂದ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ, ಈ ಬಾರಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರಿಗೆ ಟಿಕೆಟ್‌ ಕೈ ತಪ್ಪಿರುವುದರಿಂದ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಗಳಿವೆ. ಆದರೆ, ಇದೇ ವೇಳೆ ಭೇಟಿಯಾಗುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿರುವುದರಿಂದ ಅಲ್ಲಿ ಮನವೊಲಿಕೆ ಯತ್ನ ಯಶ ಕಂಡರೆ ಕಾಂಗ್ರೆಸ್‌ ಹೋರಾಟಕ್ಕೆ ಬಲ ಬರುತ್ತದೆ.

ಇದನ್ನೂ ಓದಿ | Vistara News Polling Booth: ಕೊಪ್ಪಳದಲ್ಲಿ ಅಭ್ಯರ್ಥಿ ಬದಲಾದರೂ ಬಿಜೆಪಿ ಬದಲಿಸದ ಮತದಾರ! ಯಾರಿಗೆಷ್ಟು ಮತ?

ವಿಸ್ತಾರ ಪೋಲಿಂಗ್‌ನಲ್ಲಿ ಬಿಜೆಪಿಗೆ 3050 ಮತ, ಕಾಂಗ್ರೆಸ್‌ಗೆ 2461 ಮತಗಳು ಬಂದಿದ್ದು, ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ವೀಣಾ ಕಾಶಪ್ಪನವರ್ ಅವರಿಗೆ ಶೇಕಡಾ 8ರಷ್ಟು ಮಂದಿ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್‌ಗೆ ಬಂಡಾಯದಿಂದ ಹೊಡೆತ ಬೀಳುವ ಸಾಧ್ಯತೆ ಇದೆ. ವೀಣಾ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದ್ದು, ಒಂದು ವೇಳೆ ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ತೀವ್ರ ಸ್ಪರ್ಧೆ ಖಚಿತ.

ಬಾಗಲಕೋಟೆ ಕ್ಷೇತ್ರದಲ್ಲಿ ಕಳೆದ 4 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್‌ ಗೆದ್ದು ಬೀಗಿದ್ದಾರೆ. ಈ ಬಾರಿ ಗೆದ್ದರೆ ಅವರು 5ನೇ ಬಾರಿ ಲೋಕಸಭೆಗೆ ಆಯ್ಕೆಯಾಗಲಿದ್ದಾರೆ. ಇನ್ನು ಕಳೆದ ನಾಲ್ಕು ಬಾರಿಯೂ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಬದಲಿಸುತ್ತಲೇ ಬಂದಿದೆ. ಇದು ಒಂದು ರೀತಿಯಲ್ಲಿ ಬಿಜೆಪಿ ಅಭ್ಯರ್ಥಿಗೆ ಅನುಕೂಲವಾಗುತ್ತಲೇ ಬಂದಿದೆ. ಇದೀಗ ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ ಪ್ರಕಾರ ಕ್ಷೇತ್ರವು ಮತ್ತೆ ಬಿಜೆಪಿ ತೆಕ್ಕೆಗೆ ಹೋಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮಾ.26, ಮಂಗಳವಾರ ಯಾವ ಕ್ಷೇತ್ರ?

ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಉತ್ತರ ಕನ್ನಡ ಮತ್ತು ಮಧ್ಯಾಹ್ನ 2ರಿಂದ ಸಂಜೆ 6 ಗಂಟೆಯವರೆಗೆ ಕಲಬುರಗಿ ಕ್ಷೇತ್ರದ ಜನ ಫೋನ್‌ ಮಾಡಿ ವೋಟ್‌ ಮಾಡಬಹುದು. ಮಧ್ಯಾಹ್ನ 2 ಮತ್ತು ರಾತ್ರಿ 8 ಗಂಟೆಗೆ ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಏನಿದು ಪೋಲಿಂಗ್‌ ಬೂತ್‌?

ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್‌ ಮುಖ್ಯ ಕಚೇರಿಯಲ್ಲಿ ತೆರೆಯಲಾಗಿರುವ ಪೋಲಿಂಗ್‌ ಬೂತ್‌ಗೆ ಸಾರ್ವಜನಿಕರು ನಿಗದಿತ ಸಮಯದಲ್ಲಿ ಪೋನ್‌ ಮಾಡುವ ಮೂಲಕ ತಮ್ಮ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು, ಯಾವ ಪಕ್ಷ ಈ ಬಾರಿ ಗೆಲ್ಲಬೇಕು ಎಂದು ತಿಳಿಸಬಹುದು.

ಇದನ್ನೂ ಓದಿ | Vistara News Polling Booth: ವಿಜಯಪುರದಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ ಕದನ ನಿಶ್ಚಿತ; ಅಂತರ ಕೇವಲ 1%!

ಪೋಲಿಂಗ್‌ ಬೂತ್‌ನಲ್ಲಿ ಮಾಹಿತಿ ಸಂಗ್ರಹ ಹೇಗೆ?

ವಿಸ್ತಾರ ನ್ಯೂಸ್‌ ಪೋಲಿಂಗ್‌ ಬೂತ್‌ಗೆ ಒಂದೇ ದೂರವಾಣಿ ಸಂಖ್ಯೆಯನ್ನು ನೀಡಲಾಗಿದೆ. ಆದರೆ, ಈ ಒಂದೇ ದೂರವಾಣಿ ಸಂಖ್ಯೆ ಸುಮಾರು 20ಕ್ಕೂ ಅಧಿಕ ಫೋನ್‌ಗಳಿಗೆ ಕನೆಕ್ಟ್‌ ಆಗುತ್ತದೆ. ಏಕಕಾಲದಲ್ಲಿ 20ಕ್ಕೂ ಅಧಿಕ ಮಂದಿ ಕರೆಯನ್ನು ಸ್ವೀಕರಿಸಿ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತದೆ. ಯಾರು ಅಭ್ಯರ್ಥಿಯಾಗಬೇಕು? ಯಾರು ಗೆಲ್ಲಬೇಕು? ಯಾರಿಗೆ ಮತ ಎಂಬಿತ್ಯಾದಿ ಮಾಹಿತಿಗಳನ್ನು ಈ ವೇಳೆ ದಾಖಲಿಸಿಕೊಳ್ಳಲಾಗುತ್ತದೆ. ಬಳಿಕ ಅವುಗಳನ್ನು ಸಮೀಕರಿಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080-69554488

Exit mobile version