Site icon Vistara News

Wayanad Landslide: ಕೇರಳ ಭೂ ಕುಸಿತ; ಕನ್ನಡಿಗರಿಗೆ ನೆರವು ನೀಡಲು ಸಹಾಯವಾಣಿ

Wayanad Landslide

ಬೆಂಗಳೂರು: ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ (Wayanad Landslide) ಸಾವಿನ ಸಂಖ್ಯೆ 89ಕ್ಕೇರಿದೆ. ಹೀಗಾಗಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಕೆಲಸ ಕಾರ್ಯಗಳಿಗಾಗಿ ಕರ್ನಾಟಕದಿಂದ ಹಲವು ಕನ್ನಡಿಗರು ಕೇರಳಕ್ಕೆ ತೆರಳಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆ ಇರುವುದರಿಂದ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸೂಚಿಸಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಭೂಕುಸಿತದ ತ್ಯಾಜ್ಯ ವಿಲೇವಾರಿಗೆ ಲೋಕೋಪಯೋಗಿ ಇಲಾಖೆ ನೆರವು

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯ ಕಲ್ಪಿಸಲು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ ಕೆಲಸಕ್ಕಾಗಿ ತೆರಳಿರುವ ಸಾಧ್ಯತೆ ಇರುವುದರಿಂದ, ಅಂತಹವರು ಕಣ್ಮರೆಯಾಗಿದ್ದರೆ ಮಾಹಿತಿ ನೀಡಲು ಚಾಮರಾಜನಗರ ಜಿಲ್ಲಾಡಳಿತವು 24/7 ಸಹಾಯವಾಣಿ ಸ್ಥಾಪಿಸಿದೆ.

ಸಹಾಯವಾಣಿ ಸಂಖ್ಯೆಗಳು- 08226-223161, 223163, 223160 ಅಥವಾ ವಾಟ್ಸಪ್ ಸಂಖ್ಯೆ 9740942902 ಮೂಲಕ ಸಾರ್ವಜನಿಕರು ಸಂಪರ್ಕಿಸಲು ಕೋರಿದೆ.

ಮಾರ್ಗ ಸ್ಥಗಿತ

ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವಯನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಮೈಸೂರು ಜಿಲ್ಲಾಡಳಿತರಿಂದ ಅಗತ್ಯ ಕ್ರಮ

ಮೈಸೂರು ಜಿಲ್ಲಾಡಳಿತವು ಕೂಡ ಹೆಗ್ಗಡದೇವನಕೋಟೆ ತಾಲ್ಲೂಕು ಆಸ್ಪತ್ರೆ ಹಾಗೂ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವೈದ್ಯರನ್ನು ನಿಯೋಜಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲು ಸಾಕಷ್ಟು ಬಸ್, ವಾಹನಗಳನ್ನು ಅಣಿಗೊಳಿಸಲಾಗಿದೆ. ಪಾರ್ಥಿವ ಶರೀರಗಳ ಸಂರಕ್ಷಣೆಗೆ ಶೈತ್ಯಾಗಾರದ ಘಟಕಗಳನ್ನು ಒದಗಿಸುವ ಸರಬರಾಜುದಾರನ್ನು ಗುರುತಿಸಲಾಗಿದೆ.

ಮೈಸೂರು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ: 0821-24223800

ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳ ನೇಮಕ

ನವ ದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ (Wayanad Landslide) ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದ್ದು, ಇದಕ್ಕಾಗಿ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ.ಗಳು ಹಾಗೂ 70 ಮಂದಿ ವಿವಿಧ ರ‍್ಯಾಂಕ್‌ನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡೀಪುರ ಚೆಕ್ ಪೋಸ್ಟ್‌ನಲ್ಲಿ ಈ ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್‌ಗಳನ್ನು ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

Exit mobile version