Site icon Vistara News

Weavers problems | ವೃತ್ತಿಪರ ನೇಕಾರರ ಸಮುದಾಯಗಳಿಗೆ 50% ಸಹಾಯಧನ, 2 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ

weavers

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೇಕಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನೇಕಾರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

೧.ವೃತ್ತಿಪರ ನೇಕಾರ ಸಮುದಾಯಗಳಿಗೆ ಶೇ. 50ರಷ್ಟು ಸಹಾಯಧನ ನೀಡುವ ಯೋಜನೆ ರೂಪಿಸಲು ತೀರ್ಮಾನಿಸಲಾಯಿತು.

೨. ಪವರ್ ಲೂಮ್ ನಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಲಾಯಿತು.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.

೩. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ Occupancy certificate ನೀಡಲು ತೀರ್ಮಾನಿಸಲಾಯಿತು.

೪. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ “ಗುಡಿ ಕೈಗಾರಿಕೆ”ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಯಿತು.

೫. ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು. ಇದನ್ನು ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

೬. ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಯಿತು.

೭. ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಯಿತು.

೮. 5 ಎಚ್‍.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲು ತೀರ್ಮಾನಿಸಲಾಯಿತು. ಹಾಗೂ Fixed charges ನಲ್ಲಿ ಶೇ. 50 ರಿಯಾಯಿತಿ ನೀಡಲು ತೀರ್ಮಾನಿಸಲಾಯಿತು.

೯. ನೇಕಾರರನ್ನು ಅಸಂಘಟಿತ ವಲಯದಲ್ಲಿ ಸೇರಿಸಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಕೂಲಿ ನೇಕಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಿ, ಆಯವ್ಯಯದ ಮಂಡನೆಯ ಸಂದರ್ಭದಲ್ಲಿ ತೀರ್ಮಾನಿಸಲಾಗುವುದು.

ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕೆ.ಎಚ್ ಡಿ ಸಿ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಅಭಯ್ ಪಾಟೀಲ್, ಮಹದೇವಪ್ಪ ಯಾದವಾಡ, ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ ಎಸ್. ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ | 46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

Exit mobile version