Site icon Vistara News

Yuva Nidhi Scheme: ಯುವ ನಿಧಿ ಕನ್ನಡಿಗ ವಿದ್ಯಾರ್ಥಿಗಳಿಗೆ ಮಾತ್ರ

yuva nidhi

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (yuvanidhi) ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಪದವೀಧರರು ಮತ್ತು ಡಿಪ್ಲೊಮಾ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆ ಪಡೆಯಲು ಅಭ್ಯರ್ಥಿಗಳಿಗೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಇವುಗಳಲ್ಲಿ ಪ್ರಮುಖವಾಗಿ ಈ ಯೋಜನೆಯು (Yuva Nidhi Scheme) ಕೇವಲ ಕನ್ನಡಿಗ ವಿದ್ಯಾರ್ಥಿಗಳಿಗೆ ಮಾತ್ರ ಸಿಗಲಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು, 2023ರಲ್ಲಿ ಪಾಸ್‌ ಆಗಿರುವ ಡಿಗ್ರಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳು ಯುವ ನಿಧಿ ಯೋಜನೆಗೆ ಅರ್ಹರು. ಪದವಿ ಪೂರ್ಣ ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿ ರಿಜಿಸ್ಟರ್ ಮಾಡಿಸಬೇಕು. ಜನವರಿಯಲ್ಲಿ ಯೋಜನೆಗೆ ಚಾಲನೆ ನೀಡುತ್ತೇವೆ. ನಾವು ಘೋಷಣೆ ಮಾಡಿರುವುದು ಪದವಿ ಪಾಸಾಗಿ ಆರು ತಿಂಗಳು ಕೆಲಸ ಸಿಗದ ಅಥವಾ ಉನ್ನತ ಶಿಕ್ಷಣಕ್ಕೆ ಹೋಗದ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಫಲಾನುಭವಿಗಳು ಕನ್ನಡಿಗರು ಆಗಿರಬೇಕು

ಡಿಗ್ರಿ ಮುಗಿಸಿದವರಿಗೆ 3 ಸಾವಿರ ರೂ., ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ 1,500 ರೂ. ನಿರುದ್ಯೋಗ ಭತ್ಯೆ ಕೊಡಲಾಗುವುದು. ಈ ಯೋಜನೆ ಡಿಸೆಂಬರ್‌ನಲ್ಲಿ ಆರಂಭ ಅಗುತ್ತದೆ. ಎರಡು ವರ್ಷಗಳ ಕಾಲ ಯೋಜನೆ ಸೌಲಭ್ಯ ಸಿಗಲಿದೆ. ಫಲಾನುಭವಿಗಳು ಕನ್ನಡಿಗರು ಆಗಿರಬೇಕು. ಐದು ಲಕ್ಷ ಯುವಕ, ಯುವತಿಯರು ಅರ್ಹತೆ ಪಡೆಯುವ ನಿರೀಕ್ಷೆ ಇದೆ. ಪ್ರಾಥಮಿಕವಾಗಿ 250 ರಿಂದ 300 ಕೋಟಿ ವೆಚ್ಚ ತಗುಲುವ ಸಾಧ್ಯತೆ ಇದೆ. ಮುಂದಿನ ವರ್ಷ 1 ಸಾವಿರ ಕೋಟಿ ಖರ್ಚಾಗಲಿದೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ನೋಂದಣಿ ವೇಳೆ ಸರ್ವರ್ ಸಮಸ್ಯೆ ವಿಚಾರ ಪ್ರತಿಕ್ರಿಯಿಸಿ, ಸರ್ವರ್ ಡೌನ್ ಪ್ರಶ್ನೆಯೇ ಬರಲ್ಲ. ಇದು ನಿತಂತರ ಪ್ರಕ್ರಿಯೆ. ಯಾವುದೇ ಸಮಸ್ಯೆ ಆಗದ ರೀತಿ ಫಲಾನುಭವಿಗಳಿಗೆ ಹಣ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Belagavi Winter Session: ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ ಮಂಡನೆ; ಹೆಚ್ಚಲಿದೆ ಮುದ್ರಾಂಕ ಶುಲ್ಕ!

5ನೇ ಗ್ಯಾರಂಟಿ ಯುವನಿಧಿ ಡಿ. 21ರಿಂದ ಜಾರಿ; ಅರ್ಜಿ ಸಲ್ಲಿಕೆ ಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ (Congress Guarantee) ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (yuvanidhi) ಚಾಲನೆ ನೀಡಲು ಮುಹೂರ್ತ ಫಿಕ್ಸ್‌ ಆಗಿದೆ. ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21 ರಿಂದ ನೋಂದಣಿ (Registration from December 21) ಪ್ರಕ್ರಿಯೆ ಆರಂಭ ಆಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ವಿಚಾರವನ್ನು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಖಾತೆ ಸಚಿವ ಶರಣಪ್ರಕಾಶ್‌ ಪಾಟೀಲ್‌ (Sharana prakash Pateel) ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಚುನಾವಣೆಗೆ ಮೊದಲು ಮತದಾರರಿಗೆ ಪಂಚ ಗ್ಯಾರಂಟಿಗಳನ್ನು ನೀಡಿತ್ತು. ಚುನಾವಣೆಯಲ್ಲಿ ಗೆದ್ದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ, 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ, ಪ್ರತಿ ಮನೆಗೆ 200 ಯೂನಿಟ್‌ಗಳಷ್ಟು ಉಚಿತ ವಿದ್ಯುತ್‌ ನೀಡುವ ಗೃಹ ಜ್ಯೋತಿ ಹಾಗೂ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2000 ರೂ ಡಿಬಿಟಿ ಮಾಡುವ ಗೃಹಲಕ್ಷ್ಮೀ ಯೋಜನೆಗಳನ್ನು ಆಗಲೇ ಜಾರಿಗೊಳಿಸಲಾಗಿದೆ. ಯುವ ನಿಧಿ ಯೋಜನೆ ಡಿಸೆಂಬರ್‌ನಲ್ಲಿ ಜಾರಿಗೆ ಬರಲಿದೆ ಎಂದು ಹಿಂದೆಯೇ ಘೋಷಿಸಲಾಗಿತ್ತು. ಇದೀಗ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ದಿನಾಂಕವನ್ನು ಪ್ರಕಟಿಸಲಾಗಿದೆ. ಯುವ ನಿಧಿ ಮೂಲಕ ರಾಜ್ಯದ 5 ಲಕ್ಷ ನವ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೊಮಾ ಹೋಲ್ಡರ್‌ಗಳಿಗೆ ನೇರವಾಗಿ ಹಣ ತಲುಪಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಏನಿದು ಯುವನಿಧಿ ಯೋಜನೆ? ಯಾರಿಗೆ ಸಿಗುತ್ತದೆ ಹಣ?

  1. ಯುವ ನಿಧಿ ಯೋಜನೆಯ ಫಲಾನುಭವಿಯಾಗುವುದಕ್ಕೆ ಇರಬೇಕಾದ ಅರ್ಹತೆ ಮತ್ತು ಸಿಗುವ ಭತ್ಯೆ ವಿವರ ಹೀಗಿದೆ.
  2. 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವವರಿಗೆ ಈ ಯೋಜನೆಯ ಲಾಭ ಸಿಗಲಿದೆ.
  3. ವೃತ್ತಿಪರ ಕೋರ್ಸ್‌ ಒಳಗೊಂಡು ಎಲ್ಲ ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನೀಡಲಾಗುತ್ತದೆ.
  4. ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.
  5. ಈ ಭತ್ಯೆಯು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಸಿಗಲಿದೆ.
  6. ಯಾವುದಾದರೂ ಉದ್ಯೋಗ ಸಿಕ್ಕಿದ ಕೂಡಲೇ ಈ ಸವಲತ್ತು ಸ್ಥಗಿತಗೊಳ್ಳಲಿದೆ.

ಯುವ ನಿಧಿ ಯೋಜನೆ ಷರತ್ತುಗಳು ಇವು

  1. ‘ಸೇವಾ ಸಿಂಧು’ ಪೋರ್ಟಲ್‌ ಮೂಲಕವೇ ಅರ್ಜಿ ಸಲ್ಲಿಸಬೇಕು (ಇನ್ನಷ್ಟೇ ಲಿಂಕ್‌ ಜನರೇಟ್‌ ಆಗಬೇಕಾಗಿದೆ.
  2. ನಿರುದ್ಯೋಗ ಸ್ಥಿತಿ ಬಗ್ಗೆ ಸ್ವಯಂ ಘೋಷಣೆ ಮಾಡಿದರೆ ಸಾಕಾಗುತ್ತದೆ. ಆದರೆ, ಅಸತ್ಯದ ಪ್ರಮಾಣ ಸಲ್ಲದು.
  3. ಪದವಿ/ ಡಿಪ್ಲೊಮಾ ಮುಗಿಸಿದ ಫ್ರೆಷರ್ಸ್‌ಗೆ 6 ತಿಂಗಳಾದರೂ ಉದ್ಯೋಗ ಸಿಗದೆ ಇದ್ದರೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.
  4. ತಿ ಫಲಾನುಭವಿಗೆ 2 ವರ್ಷಗಳಿಗೆ ಮಾತ್ರ ಸೀಮಿತ. 2 ವರ್ಷಗಳೊಳಗೆ ಉದ್ಯೋಗ ದೊರೆತರೆ ಯೋಜನೆ ಸೌಲಭ್ಯ ಸ್ಥಗಿತ
  5. ಉದ್ಯೋಗ ದೊರೆತ ನಂತರ ಘೋಷಣೆ ಮಾಡಿಕೊಂಡು ಭತ್ಯೆ ಸ್ವೀಕರಿಸುವುದನ್ನು ನಿಲ್ಲಿಸಬೇಕು. ಇಲ್ಲದೇ ಇದ್ದರೆ ದಂಡ ವಿಧಿಸಲಾಗುತ್ತದೆ.

ಯಾರಿಗೆ ಈ ಯೋಜನೆಯ ಲಾಭ ಸಿಗುವುದಿಲ್ಲ?

  1. ಉನ್ನತ ವ್ಯಾಸಂಗಕ್ಕೆ ದಾಖಲಾಗುವವರು ಮತ್ತು ವಿದ್ಯಾಭ್ಯಾಸ ಮುಂದುವರಿಸುವವರು.
  2. ಯಾವುದೇ ಅಪ್ರೆಂಟೀಸ್‌ ವೇತನ ಪಡೆಯುತ್ತಿರುವವರು.
  3. ಸರಕಾರಿ/ ಖಾಸಗಿ ಉದ್ಯೋಗ ಪಡೆದಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.
  4. ಸರಕಾರದ ನಾನಾ ಯೋಜನೆಗಳಡಿ ಅಥವಾ ಬ್ಯಾಂಕ್‌ ಸಾಲ ಪಡೆದು ಸ್ವಯಂ ಉದ್ಯೋಗ ಶುರು ಮಾಡಿದವರಿಗೂ ಇಲ್ಲ

ಇದನ್ನೂ ಓದಿ | Caste Census: ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್‌

ಯುವ ನಿಧಿಗೆ ಅರ್ಜಿ ಸಲ್ಲಿಕೆ ಹೇಗೆ?

  1. ಕರ್ನಾಟಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ
  2. ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ ತೆಗೆದಿಟ್ಟುಕೊಳ್ಳಿ.
  3. ನಿಮ್ಮ ಬ್ಯಾಂಕ್‌ ಖಾತೆ ಮಾಹಿತಿ‌ ಸ್ಪಷ್ಟವಾಗಿಬೇಕು, ಖಾತೆಯೇ ಇಲ್ಲದಿದ್ದರೆ ಈಗಲೇ ಮಾಡಿಸಿ, ಕೆವೈಸಿ ಕೂಡಾ ಮಾಡಿ ಇಡಿ.
  4. ಪದವಿ ಅಂಕಪಟ್ಟಿ ಹಾಗೂ ವಿಶ್ವವಿದ್ಯಾಲಯ ಪದವಿ ಪ್ರಮಾಣ ಪತ್ರ ಕಡ್ಡಾಯ (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು)
  5. ಡಿಪ್ಲೊಮಾ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರ. (ಅದು 2023ರದ್ದೇ ಆಗಿರಬೇಕು, ಶಿಕ್ಷಣ ಮುಗಿಸಿ ಆರು ತಿಂಗಳು ಆಗಿರಬೇಕು).

ಯುವ ನಿಧಿ ಅರ್ಜಿ ಎಲ್ಲಿ ಸಲ್ಲಿಸಬೇಕು?

  1. ಯುವನಿಧಿಗೆ ಅರ್ಹತೆ ಹೊಂದಿರುವ ಯುವಕ ಯುವತಿಯರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಇನ್ನೂ ಅಧಿಕೃತವಾಗಿ ಹೇಳಿಲ್ಲ. ನಾವೇ ಮೊಬೈಲ್‌ನಲ್ಲಿ, ಕಂಪ್ಯೂಟರ್‌ಗಳಲ್ಲಿ ಅರ್ಜಿ ತುಂಬಬಹುದು. ಬೇರೆ ಕೇಂದ್ರಗಳ ಸಹಕಾರವನ್ನು ಕೂಡಾ ನೀಡಲಾಗುತ್ತದೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version