Site icon Vistara News

ಐಟಿ ಕ್ಷೇತ್ರದಂತೆ ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ ಕೆ ಸಿಸಿಐ ನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ವಿವಿ ಹಾಗೂ ಎಫ್ ಕೆ ಸಿಸಿಐ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ. ರೈತರಿಗೆ ಉಪಯುಕ್ತವಾದ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಹಾಗೂ ಯಂತ್ರೋಪಕರಣಗಳ ವಸ್ತುಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ. ಆದರೆ ವಸ್ತುಪ್ರದರ್ಶನವನ್ನು ಪ್ರತ್ಯೇಕವಾಗಿ ಆಯೋಜಿಸುವುದು ಉತ್ತಮವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.
ಭಾರತ ದೇಶ ಕೃಷಿಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.
ಕೃಷಿ ತಂತ್ರಜ್ಞಾನಕ್ಕೂ ಬೆಂಗಳೂರು ರಾಜಧಾನಿಯಾಗಬೇಕು:
ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಹೆಚ್ಚು ಒಣಭೂಮಿಯಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ, ಗ್ರಾಮೀಣಾಭೀವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

Exit mobile version