Site icon Vistara News

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು: ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಸಲ್ಲಿಸಿದ್ದಾರೆ.
ತಮಗೆ ಜೀವಾವಧಿ ಶಿಕ್ಷೆ ವಿಧಿಸಿರುವುದರಿಂದ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಶಿಕ್ಷೆಗೆ ಕೂಡಲೇ ತಡೆಯಾಜ್ಞೆ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಗಳಿದ್ದು, ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ಹೈಕೋರ್ಟ್ ಆಲಿಸುವ ಸಾಧ್ಯತೆಗಳಿವೆ.
ಎರಡು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಯಾದಲ್ಲಿ ಜನಪ್ರತಿನಿಧಿಗಳು ತಮ್ಮ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ತಮ್ಮ ಶಾಸಕ ಸ್ಥಾನಕ್ಕೆ ಎದುರಾಗಿರುವ ಅನರ್ಹತೆಯ ಭೀತಿಯಿಂದ ತಪ್ಪಿಸಿಕೊಳ್ಳಲು ಶಿಕ್ಷೆಗೆ ತಕ್ಷಣವೇ ತಡೆ ನೀಡುವಂತೆ ಕೋರಿದ್ದಾರೆ ಎಂದು ತಿಳಿದು ಬಂದಿದೆ.
ಏನಿದು ಪ್ರಕರಣ?
2016ರಲ್ಲಿ ಯೋಗೇಶ್ ಗೌಡ ಅವರ ಹತ್ಯೆ ನಡೆದಿತ್ತು. ಈ ಪ್ರಕರಣ ಕಳೆದ ಒಂದು ದಶಕದಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿತ್ತು. ಈ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಅಂದಿನ ಬಿಜೆಪಿ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಂತಿಮವಾಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

Exit mobile version