Site icon Vistara News

Lok Sabha Election 2024: ಬೆಂಗಳೂರಲ್ಲಿ ಮತಬೇಟೆಗಿಳಿದ ಸಿಎಂ ಸಿದ್ದರಾಮಯ್ಯ; ಮಹಿಳಾ ಕೇಂದ್ರಿತ ಪ್ರಚಾರ!

Lok Sabha Election 2024 Cm Siddaramaiah seeks votes in Bengaluru

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಭರದ ಸಿದ್ಧತೆಗಳನ್ನು ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬೆಂಗಳೂರಿನಲ್ಲಿ ಮತ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ (Bangalore North Lok Sabha constituency) ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ (Rajeev Gowda) ಪರ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಪರ ಮತಯಾಚನೆ ಬಳಿಕ ನಾಗಸಂದ್ರ ಬಳಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರನ್ನು ಕೇಂದ್ರೀಕರಿಸಿ ಪ್ರಚಾರ ಮಾಡಿದ್ದಾರೆ.

ರಾಜೀವ್‌ ಗೌಡ ಗೆಲುವು ನಿಶ್ಚಿತ

ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರಿಂದಲೇ ಗೋ-ಬ್ಯಾಕ್ ಅನ್ನಿಸಿಕೊಂಡ ಶೋಭಾ ಕರಂದ್ಲಾಜೆ ಅವರಿಗೆ ಇಲ್ಲಿ ಟಿಕೆಟ್ ಕೊಟ್ಟಿದ್ದಾರೆ. ಉತ್ತರ ಲೋಕಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರರು ಶೋಭಾ ಅವರಿಗೆ ಇಲ್ಲಿಂದಲೂ ನೀವು ವಾಪಸ್ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಶೋಭಾ ಕರಂದ್ಲಾಜೆ ಅವರು ಐದು ವರ್ಷಗಳ ಕಾಲ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಒಂದೇ ಒಂದು ದಿನವೂ ಧ್ವನಿ ಎತ್ತಲಿಲ್ಲ. ಇಂಥವರಿಂದ ನಿಮ್ಮ ಮತಕ್ಕೆ ಬೆಲೆ ಬರುತ್ತದಾ? ನೀತಿ ಆಯೋಗದ ಉಪಾಧ್ಯಕ್ಷರಾಗಿ, ಉನ್ನತ ಶೈಕ್ಷಣಿಕ ಅರ್ಹತೆ ಮತ್ತು ತಿಳಿವಳಿಕೆ ಹೊಂದಿ ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ನಿರಂತರವಾಗಿ ಧ್ವನಿ ಎತ್ತುವ ರಾಜೀವ್ ಗೌಡರಿಂದ ನಿಮ್ಮ ಮತಕ್ಕೆ ಉತ್ತಮ ಘನತೆ ಬರುತ್ತದೆ. ಆದ್ದರಿಂದ ಪ್ರಜ್ಞಾವಂತರಾಗಿ ಇವರನ್ನು ಗೆಲ್ಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಹತ್ತು ವರ್ಷಗಳಲ್ಲಿ ಹೇಳಿದ ಯಾವುದನ್ನೂ ಜಾರಿ ಮಾಡಲೇ ಇಲ್ಲ. ಕಪ್ಪು ಹಣ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ ಕಾಳು ಯಾವುದರ ಬೆಲೆಯನ್ನೂ ಇಳಿಸಲಿಲ್ಲ. ಬರೀ ಬಾಯಲ್ಲಿ ಅಚ್ಛೇ ದಿನ್ ಆಯೇಗಾ ಎಂದು ಭಾಷಣ ಭಾರಿಸಿದ್ದು ಬಿಟ್ಟರೆ ಭಾರತೀಯರ ಬದುಕಿಗೆ ಅಚ್ಛೆ ದಿನ್ ಬರಲೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆಗಳಿಂದ ಹೈರಾಣಾಗಿದ್ದ ನಮ್ಮ ನಾಡಿನ ಜನತೆಯ ಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದಲೇ ಐದು ಗ್ಯಾರಂಟಿಗಳ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5-6 ಸಾವಿರ ಉಳಿತಾಯ ಆಗುವ ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಸರ್ಕಾರ ಭದ್ರ ಆಗಿರುವವರೆಗೂ ಈ ಅನುಕೂಲ ಪ್ರತಿ ತಿಂಗಳೂ ಜನರ ಮನೆ ಬಾಗಿಲಿಗೆ ಬರುತ್ತಲೇ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದೇವೇಗೌಡರ ವಿರುದ್ಧ ವಾಗ್ದಾಳಿ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ಭಾರತ ತೊರೆಯುವುದಾಗಿ ಹೇಳಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈಗ ಮೋದಿಯವರ ಜತೆಗೇ ಸೇರಿದ್ದಾರೆ. ಇದ್ದದ್ದು ಇದ್ದಂಗೆ ಹೇಳಿದರೆ ದೇವೇಗೌಡರಿಗೆ ಸಿಟ್ಟು ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 14ರಂದು ಕರ್ನಾಟಕಕ್ಕೆ ಮೋದಿ; ಬೆಂಗಳೂರಲ್ಲಿ ರೋಡ್‌ ಶೋ

ನಾಡಿನ ಜನತೆಯ ತೆರಿಗೆ ಹಣದ ಪಾಲಿನಲ್ಲಿ ರಾಜ್ಯಕ್ಕೆ ವಿಪರೀತ ಅನ್ಯಾಯ ಮಾಡಿದರು. ರಾಜ್ಯದ ಜನತೆ ಪ್ರವಾಹದಿಂದ, ಬರಗಾಲದಲ್ಲಿ ನರಳುವಾಗ ಮೋದಿ, ಅಮಿತ್ ಶಾ ನೆಪಕ್ಕೂ ರಾಜ್ಯಕ್ಕೆ ಕಾಲಿಡಲಿಲ್ಲ. ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಇವತ್ತಿನವರೆಗೂ ಒಂದೇ ಒಂದು ರೂಪಾಯಿ ನೀಡಲಿಲ್ಲ. ಹೀಗೆ ನಿರಂತರವಾಗಿ ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ ಬಿಜೆಪಿ ಯನ್ನು ಸೋಲಿಸಿ 7 ಕೋಟಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕು ಎಂದು ಕರೆ ನೀಡಿದರು.

ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರೊ.ರಾಜೀವ್ ಗೌಡ ಮತ್ತು 400 ಕ್ಕೂ ಅಧಿಕ ಮಂದಿ ಬೂತ್ ಮಟ್ಟದ ಮಹಿಳಾ ಮುಖಂಡರು ಉಪಸ್ಥಿತರಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗೆ ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

Exit mobile version