Site icon Vistara News

LoK Sabha Election 2024: ಮೇಕೆದಾಟು ಪಾದಯಾತ್ರೆಯಲ್ಲಿ ನಾನು ತೂರಾಡಿದ್ನಾ? ಎಚ್‌ಡಿಕೆ ಹೀಗೆ ಹೇಳಿದ್ದು ಯಾರಿಗೆ?

LoK Sabha Election 2024 HD Kumaraswamy attacks DK Shivakumar over Mekedatu padayatra

ಬೆಂಗಳೂರು: ಲೋಕಸಭಾ ಚುನಾವಣೆ (LoK Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ, ನಾಯಕರ ವಾಕ್ಸಮರಗಳು ಜೋರಾಗಿ ನಡೆಯುತ್ತಿವೆ. ಈಗ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರ ಬಿಡದಿ ತೋಟದ ಮನೆಯಲ್ಲಿ ಗುರುವಾರ (ಏಪ್ರಿಲ್‌ 11) ನಡೆಯುತ್ತಿರುವ ಔತಣಕೂಟದ ಬಗ್ಗೆ ಕಾಂಗ್ರೆಸ್‌ (Congress Karnataka) ತಕರಾರು ತೆಗೆದಿದೆ. ಇದರಲ್ಲಿ ಮದ್ಯ ಹಾಗೂ ರಾಜಕೀಯದ ಘಮಲು ಬರುತ್ತಿದೆ ಎಂದು ಅನುಮಾನ ಹೊರಹಾಕಿದೆ. ಇದಕ್ಕೆ ತಿರುಗೇಟು ನೀಡಿರುವ ಎಚ್‌ಡಿಕೆ, ನಾವು ಬಿಡದಿ ತೋಟದಲ್ಲಿ ಗ್ಲಾಸ್ ಇಟ್ಟು ಪಾರ್ಟಿ ಮಾಡುತ್ತಿಲ್ಲ. ಹಾಗೆ ಮಾಡೋದು ಕಾಂಗ್ರೆಸ್ ಸಂಸ್ಕೃತಿ. ಅಂತಹ ಕೆಲಸವನ್ನು ಕಾಂಗ್ರೆಸ್ ನಿರಂತರವಾಗಿ ಮಾಡಿಕೊಂಡು ಬಂದಿದೆ‌. ಬಿಡದಿಯ ನನ್ನ ತೋಟವನ್ನು ಜೆಡಿಎಸ್ ಹೆಡ್ಡಾಫೀಸ್ ಎಂದು ಕಾಂಗ್ರೆಸ್‌ ಟೀಕೆ ಮಾಡಿದೆ. ಹಾಗಂತ ನಾನು ಕಾಂಗ್ರೆಸ್ ಕಚೇರಿಯನ್ನು ಹೆಡ್ಡಾಫೀಸ್ ಮಾಡಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಬಿಡದಿಯ ನನ್ನ ತೋಟವೇ ನನ್ನ ಪಕ್ಷದ ಹೆಡ್ಡಾಫೀಸ್. ಅದರಲ್ಲಿ ತಪ್ಪೇನಿದೆ? ನಾನು ಪಕ್ಷದ ಅಧ್ಯಕ್ಷನಿದ್ದೇನೆ. ಅಲ್ಲಿ ನಾನು ನಮ್ಮ ಪಕ್ಷದ ಕೆಲ ಮುಖಂಡರ ಸಭೆ ಕರೆದಿದ್ದೆ. ಅಲ್ಲದೆ, ನನ್ನ ತೋಟದಲ್ಲಿ 120 ಜನ ಈಗಲೂ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಊಟದ ವ್ಯವಸ್ಥೆ ಮಾಡಿದ್ದೆವು. ಮಾಡಬಾರದು ಅನ್ನೋಕೆ ಅದೇನು ಕಾಂಗ್ರೆಸ್ ಹೆಡ್ಡಾಫೀಸಾ? ಬಿಜೆಪಿಗೆ ಕೇಶವ ಕೃಪ ಹೇಗೋ ನಮ್ಮ ಪಕ್ಷಕ್ಕೆ ನಮ್ಮ ತೋಟದ ಮನೆಯೂ ಹಾಗೆಯೇ ಎಂದು ಕಾಂಗ್ರೆಸ್ ಪಕ್ಷವನ್ನು ಕುಟುಕಿದರು.

ಕಾಂಗ್ರೆಸ್ ನಾಯಕರು ವಿಧಾನಸಭೆ ಚುನಾವಣೆಗೆ ಮೊದಲು ಮೇಕೆದಾಟು ಪಾದಯಾತ್ರೆ ಮಾಡಿದ್ದರು. ಪಾದಯಾತ್ರೆಯಲ್ಲಿ ತೂರಾಡಿದ್ದು ಯಾರು? ನಾನು ತೂರಾಡಿದ್ನಾ? ‌ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ನನಗೂ ಏನು ಮಾಡಬೇಕು, ಮಾಡಬಾರದು ಎಂದು ಗೊತ್ತಿದೆ. ಅಲ್ಲಿನ ತಹಸೀಲ್ದಾರ್ ಅವರಿಗೆ ಪದೇ ಪದೆ ಫೋನ್ ಕರೆ ಮಾಡಿ ಒತ್ತಡ ಹೇರಿದ್ದಾರೆ. ಏನೂ ಸಿಕ್ಕಿಲ್ಲ ಅಲ್ಲಿ. ಇಷ್ಟು ಚುನಾವಣೆ ಮಾಡಿದವನಿಗೆ ಏನು ಮಾಡಬೇಕು ಅನ್ನೋದು ಗೊತ್ತಿಲ್ಲವಾ? ಎಂದು ಎಚ್‌.ಡಿ. ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದರು.

ಶ್ರೀಗಳನ್ನು ದುರುಪಯೋಗ ಮಾಡಿಕೊಂಡಿಲ್ಲ

ನಾನು ಎಂದೂ ಸಹ ಅಧಿಕಾರದಲ್ಲಿದ್ದಾಗ ನಮ್ಮ ಸಮುದಾಯದ ಸ್ವಾಮೀಜಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಕೆಲಸ ಮಾಡಿಲ್ಲ. ನಾನು ಎಂದೂ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜಾತ್ಯತೀತ ಅಂತ ಹೇಳೋರು, ಪ್ರತಿ ದಿನ ಜಾತಿ ಬಗ್ಗೆಯೇ ಮಾತಾಡ್ತಾರೆ. ನಮ್ಮ ಸಮಾಜದ ಜನ ದಡ್ಡರಲ್ಲ. ಇವರು ನಡೆಸುತ್ತಿರುವ ರಾಜಕೀಯ ಎಲ್ಲರಿಗೂ ಅರ್ಥ ಆಗುತ್ತಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ನನ್ನ ನೇತೃತ್ವದ ಮೈತ್ರಿ ಸರ್ಕಾರ ಹೋಗಲಿಕ್ಕೆ ಕಾಂಗ್ರೆಸ್ ನಾಯಕರು ಏನೆಲ್ಲಾ ಮಾಡಿದರು ಎನ್ನುವುದು ನನಗೆ ಗೊತ್ತಿದೆ. ಆಗ ಕಾಂಗ್ರೆಸ್ ನಾಯಕರಲ್ಲಿಯೇ ಯಾಕೆ ಸಂಘರ್ಷ ನಡೆಯಿತು ಎನ್ನುವುದೂ ತಿಳಿದಿದೆ. ಧರ್ಮಸ್ಥಳದ ಸಿದ್ದವನದಲ್ಲಿ ಏನೇನ್ ನಡೆಯಿತು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಸರ್ಕಾರ ರಚನೆಯಾದ ಮೂರೇ ತಿಂಗಳಿಗೆ ಲೋಕಸಭೆ ಚುನಾವಣೆ ಹೊತ್ತಿಗೆ ಸರಕಾರ ಹೋಗುತ್ತದೆ ಎಂದು ಹೇಳಿದವರು ಯಾರು? ಐದು ವರ್ಷ ಬೇಷರತ್ ಬೆಂಬಲ ಕೊಡುತ್ತೇವೆ ಎಂದಿದ್ದರು. ಆಮೇಲೆ ಏನಾಯಿತು? ಸಿದ್ದವನದಲ್ಲಿ ಅದಕ್ಕೆ ಔಷಧಿ ಅರೆದ್ರಲ್ವಾ? ಎಂದು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.

ಪ್ರತಿ ಯುಗಾದಿ ಹಬ್ಬದ ಮೇಲೆ ನಮ್ಮ ಗುರುಗಳ ಆಶೀರ್ವಾದ ಪಡೆಯುವುದು ನಾವು ಪಾಲಿಸಿಕೊಂಡು ಬಂದಿರುವ ಸಂಪ್ರದಾಯ. ನಮ್ಮ ಪಕ್ಷದವರು, ಬಿಜೆಪಿ ನಾಯಕರು ಒಟ್ಟಾಗಿ ಬಂದು ಆಶೀರ್ವಾದ ಪಡೆದಿದ್ದೇವೆ. ಇದರಲ್ಲಿ ತಪ್ಪೇನು? ಎಂದು ಎಚ್.ಡಿ. ಕುಮಾರಸ್ವಾಮಿ, ಪರಮಪೂಜ್ಯ ಶ್ರೀಗಳನ್ನು ಭೇಟಿ ಮಾಡಿ ಅವರನ್ನು ಬಳಸಿಕೊಳ್ಳುವ ಪ್ರಯತ್ನ ಮೊನ್ನೆ ಕಾಂಗ್ರೆಸ್ ಮಾಡಿದೆ. ರಾಜಕೀಯಕ್ಕೂ ಧರ್ಮಕ್ಕೂ ಏನ್ ಸಂಬಂಧ? ಧಾರ್ಮಿಕವಾಗಿ ನಾಡಿಗೆ ಮಾರ್ಗದರ್ಶನ ಮಾಡುತ್ತಿರುವ ಸ್ವಾಮೀಜಿಗಳನ್ನು ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ – ಜೆಡಿಎಸ್‌ ಮಧ್ಯೆ ಮದ್ಯ, ಬಾಡೂಟ ಪಾಲಿಟಿಕ್ಸ್;‌ ಏಟು – ಎದುರೇಟು!

ಶ್ರೀಗಳ ಆಶೀರ್ವಾದ ಪಡೆದ ಮೈತ್ರಿಕೂಟದ ನಾಯಕರು

ಇದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಜೆಡಿಎಸ್ ಬಿಜೆಪಿ ಪಕ್ಷಗಳ ನಾಯಕರು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ, ಮೈತ್ರಿಕೂಟದ ಅಭ್ಯರ್ಥಿಗಳಾದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್, ವಿ.ಸೋಮಣ್ಣ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಡಾ.ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಮಲ್ಲೇಶ್ ಬಾಬು, ಡಾ.ಕೆ. ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕೆ. ಗೋಪಾಲಯ್ಯ, ಡಾ. ಕೆ.ಸಿ. ನಾರಾಯಣಗೌಡ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Exit mobile version