Site icon Vistara News

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಮತ್ತೊಮ್ಮೆ ಹಿನ್ನಡೆ; ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಕಾರ

Arvind Kejriwal

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ತಿಹಾರ್ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal)‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ (Supreme Court) ಬುಧವಾರ (ಆಗಸ್ಟ್‌ 14) ನಿರಾಕರಿಸಿದೆ. ನ್ಯಾಯಾಲಯವು ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗೆ ನೋಟಿಸ್ ನೀಡಿದ್ದು, ಆಗಸ್ಟ್ 23ರವರೆಗೆ ಕೇಜ್ರಿವಾಲ್ ಜೈಲುವಾಸ ಮುಂದುವರಿಯಲಿದೆ.

ಸಿಬಿಐ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ. ಕೇಜ್ರಿವಾಲ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ಮನವಿಯನ್ನು ಸೋಮವಾರ ಪರಿಗಣಿಸಿದ ಕೋರ್ಟ್‌ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಒಪ್ಪಿಕೊಂಡಿತ್ತು.

ದೆಹಲಿ ಹೈಕೋರ್ಟ್ ಆಗಸ್ಟ್ 5ರಂದು ಕೇಜ್ರಿವಾಲ್‌ ಅವರ ಬಂಧನವನ್ನು ಕಾನೂನುಬದ್ಧ ಎಂದು ಹೇಳಿತ್ತು. ಅಲ್ಲದೆ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಸಿಬಿಐ ಪ್ರಕರಣದಲ್ಲಿ ನಿಯಮಿತ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿತ್ತು.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಬದಲಾಯಿಸಿದಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಕೇಜ್ರಿವಾಲ್ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದೂ ಪಕ್ಷ ಗಂಭೀರ ಆರೋಪ ಮಾಡುತ್ತಲೇ ಇದೆ. ಕೆಲವು ದಿನಗಳ ಹಿಂದೆ ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ʼʼಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿʼʼ ಎಂದು ಹೇಳಿದ್ದರು.

Exit mobile version