Site icon Vistara News

Azam Khan | ದ್ವೇಷ ಭಾಷಣ ಕೇಸ್‌ನಲ್ಲಿ ದೋಷಿಯಾಗಿರುವ ಅಜಂ ಖಾನ್‌ ಸಂಸತ್ ಸದಸ್ಯತ್ವ ಕಳೆದುಕೊಳ್ಳುವುದೇಕೆ?

Azam Khan

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ (Azam Khan) ಅವರು ದೋಷಿ ಎಂದು ರಾಮ್‌ಪುರ ಎಂಪಿ-ಎಂಎಲ್‌ಎ ನ್ಯಾಯಾಲಯವು ತೀರ್ಪು ನೀಡಿದ್ದು, ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಕೆ, ಕುರಿ ಕಳ್ಳತನ ಪ್ರಕರಣದಲ್ಲೂ ಆರೋಪಿಯಾಗಿರುವ ಅಜಂ ಖಾನ್‌ ಈಗ ಲೋಕಸಭೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಲೋಕಸಭೆ ಸದಸ್ಯತ್ವ ಏಕೆ ರದ್ದು?

ಅಜಂ ಖಾನ್‌ ಅವರಿಗೆ ಎಂಪಿ-ಎಂಎಲ್‌ಎ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕಾರಣ ಅವರು ಲೋಕಸಭೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. ಸುಪ್ರೀಂ ಕೋರ್ಟ್‌ 2013ರಲ್ಲಿ ನೀಡಿದ ತೀರ್ಪಿನ ಪ್ರಕಾರ, ಯಾವುದೇ ಸಂಸದ, ಶಾಸಕ ಅಥವಾ ವಿಧಾನ ಪರಿಷತ್‌ ಸದಸ್ಯನ ವಿರುದ್ಧ ಅಪರಾಧ ಪ್ರಕರಣ ದಾಖಲಾಗಿ, ಎಂಪಿ-ಎಂಎಲ್‌ಎ ನ್ಯಾಯಾಲಯವು ಕನಿಷ್ಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದರೆ ಅವರ ಅಧಿಕಾರ ತಕ್ಷಣವೇ ಮೊಟಕಾಗಲಿದೆ ಎಂದು ತಿಳಿಸಿದೆ. ಹಾಗಾಗಿ, ಅಜಂ ಖಾನ್‌ ಅವರು ಅಧಿಕಾರ ಕಳೆದುಕೊಳ್ಳಲಿದ್ದಾರೆ. ಇವರು ರಾಮ್‌ಪುರ ಸಂಸದರಾಗಿದ್ದಾರೆ.

ಏನಿದು ಪ್ರಕರಣ?

ಅಜಂ ಖಾನ್‌ ಅವರು 2019ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಆಗಿನ ಜಿಲ್ಲಾ ದಂಡಾಧಿಕಾರಿ (District Magistrate) ಔಂಜನೇಯ ಕುಮಾರ್‌ ಸಿಂಗ್‌ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಪ್ರಕರಣ ಇದಾಗಿದೆ. ಸದ್ಯ ವಂಚನೆ ಪ್ರಕರಣದಲ್ಲಿ ಅಜಂ ಖಾನ್‌ ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣವು ಅವರಿಗೆ ಉರುಳಾಗಿದೆ. ವಂಚನೆ ಪ್ರಕರಣದಲ್ಲಿ ಈಗಾಗಲೇ ಅವರು ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ, ವಂಚನೆ ಸೇರಿ ಸುಮಾರು 90 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | Hate Speech | ಕ್ರಮ ತೆಗೆದುಕೊಳ್ಳಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ, ದ್ವೇಷ ಭಾಷಣ ಕುರಿತು ಸುಪ್ರೀಂ ಗರಂ

Exit mobile version