Site icon Vistara News

ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಶಾಕ್;‌ ಗಾಂಧಿ ಕುಟುಂಬದ ಐವರು ಆಪ್ತರು ಬಿಜೆಪಿಗೆ!

Congress Leaders

Big Jolt to Congress in Madhya Pradesh as Suresh Pachouri, several party leaders join BJP

ಭೋಪಾಲ್:‌ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಲೋಕಸಭೆ ಚುನಾವಣೆ ಟಿಕೆಟ್‌ ವಿಚಾರಕ್ಕೆ ಮುನಿಸಿಕೊಂಡು, ಬೇರೆ ಪಕ್ಷದಲ್ಲಿ ಟಿಕೆಟ್‌ ಸಿಗುವ ಆಸೆಗಾಗಿ ಎಲ್ಲ ಪಕ್ಷಗಳಲ್ಲಿಯೂ ನಾಯಕರು ಬೇರೆ ಪಕ್ಷ ಸೇರಿಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) ಕಾಂಗ್ರೆಸ್‌ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಸುರೇಶ್‌ ಪಚೌರಿ (Suresh Pachouri) ಸೇರಿ ಐವರು ನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾದಂತಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುರೇಶ್‌ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್‌ ರಾಜುಖೇಡಿ, ಮಾಜಿ ಶಾಸಕ ಸಂಜಯ್‌ ಶುಕ್ಲಾ ಸೇರಿ ಐವರು ನಾಯಕರು ಬಿಜೆಪಿ ಸೇರ್ಪಡೆಯಾದರು. ಮುಖ್ಯಮಂತ್ರಿ ಮೋಹನ್‌ ಯಾದವ್‌, ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌, ಬಿಜೆಪಿ ರಾಜ್ಯಾಧ್ಯಕ್ಷ ವಿ.ಡಿ. ಶರ್ಮಾ ಅವರು ಕಾಂಗ್ರೆಸ್‌ನ ಐವರೂ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇವರು ಕೂಡ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

ಸುರೇಶ್‌ ಪಚೌರಿ ಅವರು ಗಾಂಧಿ ಕುಟುಂಬದ ಆಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್‌ನಲ್ಲಿದ್ದು, ಕೆಲ ವರ್ಷಗಳಿಂದ ಇವರಿಗೆ ಹೆಚ್ಚಿನ ಮನ್ನಣೆ ನೀಡುತ್ತಿರಲಿಲ್ಲ ಎನ್ನಲಾಗಿದೆ. ಇದರಿಂದ ಬೇಸತ್ತ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. “ನಾನು ಸಮಾಜ ಸೇವೆ ಮಾಡಬೇಕು, ದೇಶಕ್ಕೆ ಕೊಡುಗೆ ನೀಡಬೇಕು ಎಂದು ತುಂಬ ವರ್ಷಗಳ ಹಿಂದೆ ಕಾಂಗ್ರೆಸ್‌ ಸೇರಿದ್ದೆ. ಆದರೆ, ಕಾಂಗ್ರೆಸ್‌ನಲ್ಲಿ ಈಗ ಸೇವಾ ಮನೋಭಾವವೇ ಇಲ್ಲದಂತಾಗಿದೆ. ಹಾಗಾಗಿ, ಬಿಜೆಪಿ ಸೇರ್ಪಡೆಯಾಗಿದ್ದೇನೆ” ಎಂದು ಸುರೇಶ್‌ ಪಚೌರಿ ತಿಳಿಸಿದರು.

ಇದನ್ನೂ ಓದಿ: Lok Sabha Election: ಆಂಧ್ರದಲ್ಲಿ ಬಿಜೆಪಿ, ಟಿಡಿಪಿ, ಜನಸೇನಾ ಮೈತ್ರಿ ಫೈನಲ್;‌ ಸೀಟು ಹಂಚಿಕೆ ಹೇಗೆ?

ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ನ ಏಕೈಕ ಸಂಸದೆ ಬಿಜೆಪಿಗೆ

ಕೆಲ ದಿನಗಳ ಹಿಂದಷ್ಟೇ ಜಾರ್ಖಂಡ್‌ನ ಏಕೈಕ ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಅವರು ಕೂಡ ಬಿಜೆಪಿ ಸೇರ್ಪಡೆಯಾಗಿದ್ದರು. ಗೀತಾ ಕೋಡಾ ಅವರು ಮಾಜಿ ಮುಖ್ಯಮಂತ್ರಿ ಮಧು ಕೋಡಾ ಪುತ್ರಿಯಾಗಿದ್ದಾರೆ. ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ್ದ ಅವರು, “ಕಾಂಗ್ರೆಸ್‌ ದೇಶವನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ಬರೀ ಓಲೈಕೆಯ ರಾಜಕಾರಣ ಮಾಡುತ್ತಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವುದಾಗಿ ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ, ಒಂದು ಕುಟುಂಬದ ಹೊರತಾಗಿ ಬೇರೆಯವರಿಗೆ ಅಲ್ಲಿ ಆಸ್ಪದ ಇಲ್ಲ. ಹಾಗಾಗಿ, ಕಾಂಗ್ರೆಸ್‌ನಲ್ಲಿ ಇರುವುದು ಒಳ್ಳೆಯದಲ್ಲ ಎಂದು ಭಾವಿಸಿ ಬಿಜೆಪಿ ಸೇರ್ಪಡೆಯಾದೆ” ಎಂದು ತಿಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version