Site icon Vistara News

BJP National Meet: ಇಂದಿನಿಂದ ಬಿಜೆಪಿ ರಾಷ್ಟ್ರೀಯ ಸಮಾವೇಶ; ಲೋಕಸಭಾ ಚುನಾವಣೆಗೆ ತಯಾರಿ

bjp meeting

bjp meeting

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha election) ದಿನ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಈ ಬಾರಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಅದರ ಭಾಗವಾಗಿ ಇಂದು ಮತ್ತು ನಾಳೆ (ಫೆಬ್ರವರಿ 17 ಮತ್ತು 18) ದೆಹಲಿಯ ಪ್ರಗತಿ ಮೈದಾನದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮಾವೇಶವನ್ನು ಆಯೋಜಿಸಿದೆ (BJP National Meet). ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿತ ರಾಷ್ಟ್ರೀಯ ಮತ್ತು ರಾಜ್ಯ ಶ್ರೇಣಿಯ ಪದಾಧಿಕಾರಿಗಳು, 11,000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಸಭೆ ಇಂದು ಬೆಳಗ್ಗೆ 9:30ಕ್ಕೆ ಪ್ರಾರಂಭವಾಗಲಿದೆ. ನಂತರ ಅಪರಾಹ್ನ 3 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಸಮಾರೋಪ ಭಾಷಣದೊಂದಿಗೆ ಸಮಾವೇಶ ಮುಕ್ತಾಯಗೊಳ್ಳಲಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ಅಧಿಕಾರಿಗಳು, ರಾಷ್ಟ್ರೀಯ ಪರಿಷತ್ತಿನ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ರಾಜ್ಯಾಧ್ಯಕ್ಷರು, ಲೋಕಸಭಾ ಕ್ಲಸ್ಟರ್‌ನ ಉಸ್ತುವಾರಿಗಳು ಮತ್ತು ಸಂಯೋಜಕರು, ಮೇಯರ್, ಪುರಸಭೆ ಮತ್ತು ನಗರ ಪಂಚಾಯತ್, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಮೋರ್ಚಾಗಳ ರಾಜ್ಯ ಅಧ್ಯಕ್ಷರು, ಮಾಧ್ಯಮ, ಸಾಮಾಜಿಕ ಮಾಧ್ಯಮ ಮತ್ತು ಐಟಿ ರಾಜ್ಯ ಸಂಚಾಲಕರು, ಆಯೋಗದ ಮಂಡಳಿ ನಿಗಮದ ಅಧ್ಯಕ್ಷರು, ಕೋಶಗಳ ಸಂಚಾಲಕರು ಮತ್ತು ಪಕ್ಷದ ಇತರ ಪ್ರಮುಖ ಅಧಿಕಾರಿಗಳು ಎರಡು ದಿನಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎರಡು ನಿರ್ಣಯ ಅಂಗೀಕಾರ?

ಈ ರಾಷ್ಟ್ರೀಯ ಸಮಾವೇಶದಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸಲು ನಿರ್ಧರಿಸಲಾಗಿದೆ. ಈ ಪೈಕಿ ಒಂದು ರಾಜಕೀಯ ಪ್ರಸ್ತಾಪ ಮತ್ತು ಇನ್ನೊಂದು ಆರ್ಥಿಕ, ಸಾಮಾಜಿಕ ಮತ್ತು ರಾಮ ಮಂದಿರ ಸಂಬಂಧಿತ ವಿಷಯಗಳನ್ನು ಆಧರಿಸಿರಬಹುದು ಎಂದು ಅಂದಾಜಿಸಲಾಗಿದೆ.

ಈ ಪ್ರಸ್ತಾಪಗಳಲ್ಲಿ ಅಯೋಧ್ಯೆಯ ಭವ್ಯ ರಾಮ ದೇವಾಲಯದಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆ, ಮಹಿಳಾ ಮೀಸಲಾತಿ, ಜ್ಞಾನ ಸೂತ್ರ, ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಚಂದ್ರಯಾನ ಮಿಷನ್ ಸೇರಿದಂತೆ ಇಸ್ರೋದ ಎಲ್ಲ ಯಶಸ್ಸುಗಳು ಸೇರಿವೆ. ಕೊರೋನಾದಿಂದಾಗಿ ಉದ್ಭವಿಸಿದ ಜಾಗತಿಕ ಬಿಕ್ಕಟ್ಟಿನ ಸಮಯದಲ್ಲಿ ಮೋದಿ ಸರ್ಕಾರ ಕೈಗೊಂಡ ಪರಿಣಾಮಕಾರಿ ಕ್ರಮಗಳು ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಸೇರಿದಂತೆ ಅನೇಕ ಪ್ರಮುಖ ಸಾಧನೆಗಳನ್ನು ಉಲ್ಲೇಖಿಸುವ ಸಾಧ್ಯತೆ ಇದೆ.

ಎರಡು ದಿನಗಳ ರಾಷ್ಟ್ರೀಯ ಸಮಾವೇಶಕ್ಕೆ ಮುಂಚಿತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೆಹಲಿಯ ಭಾರತ್ ಮಂಟಪದಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶದ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಿಜೆಪಿಗೆ ಈ ಸಮಾವೇಶ ಅತ್ಯಂತ ಮಹತ್ವದ್ದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Delhi CM: ವಿಶ್ವಾಸ ಮತಯಾಚನೆಗೆ ಮುಂದಾದ ದಿಲ್ಲಿ ಸಿಎಂ ಕೇಜ್ರಿವಾಲ್! ಕಾರಣ ಏನು?

ರಾಜ್ಯದ ನಾಯಕರಿಗೂ ಆಹ್ವಾನ

ರಾಜ್ಯದ ಸುಮಾರು 535 ನಾಯಕರನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು, ಮಾಜಿ ಸಿಎಂ ಆಗಿ ಯಡಿಯೂರಪ್ಪ, ಸಂಸದರಾಗಿ ರಾಘವೇಂದ್ರ, ಶಾಸಕ ಹಾಗೂ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಭಾಗಿಯಾಗಲಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಕುಟುಂಬದ ಮೂವರು ಸದಸ್ಯರು ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹೈಕಮಾಂಡ್ ರಾಜ್ಯದ ನಾಯಕರಿಗೆ ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಗೆಲುವಿನ ಟಾಸ್ಕ್ ನೀಡುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version