Site icon Vistara News

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Waqf Bill

ನವದೆಹಲಿ: ವಕ್ಫ್‌ ಮಂಡಳಿಯ ಪರಮಾಧಿಕಾರವನ್ನು ರದ್ದುಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗಾಗಿ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು (Waqf Bill) ಲೋಕಸಭೆಯಲ್ಲಿ ಮಂಡಿಸಿದೆ. ಇದರ ಬೆನ್ನಲ್ಲೇ, ವಿಧೇಯಕದ ಪರಿಶೀಲನೆಗಾಗಿ ಕೇಂದ್ರ ಸರ್ಕಾರವು (Central Government) 21 ಸದಸ್ಯರ ಜಂಟಿ ಸಂಸದೀಯ ಸಮಿತಿಯನ್ನು (Joint Parliamentary Panel) ರಚಿಸಿದೆ. ಸಮಿತಿಯಲ್ಲಿ ಕರ್ನಾಟಕದ ಸಂಸದ ತೇಜಸ್ವಿ ಸೂರ್ಯ, ಎಐಎಂಐಎಂ ಸಂಸದ ಅಸಾದುದ್ದೀನ್‌ ಓವೈಸಿ ಸೇರಿ ಹಲವರು ಇದ್ದಾರೆ.

ಮಸೂದೆ ಕುರಿತು ಚರ್ಚೆ, ಮಾಡಬೇಕಾದ ಬದಲಾವಣೆಗಳು ಸೇರಿ ಹಲವು ರೀತಿಯಲ್ಲಿ ಪರಿಶೀಲನೆ ನಡೆಸಲು 21 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚಿಸಲಾಗಿದೆ. ಜಗದಾಂಬಿಕಾ ಪಾಲ್‌, ನಿಶಿಕಾಂತ್‌ ದುಬೆ, ತೇಜಸ್ವಿ ಸೂರ್ಯ, ಅಪರಾಜಿತ ಸಾರಂಗಿ, ಸಂಜಯ್‌ ಜೈಸ್ವಾಲ್‌, ದಿಲೀಪ್‌ ಸೈಕಿಯಾ, ಗೌರವ್‌ ಗೊಗೊಯ್‌, ಇಮ್ರಾನ್‌ ಮಸೂದ್‌, ಮೊಹಮ್ಮದ್‌ ಜಾವೇದ್‌, ಕಲ್ಯಾಣ್‌ ಬ್ಯಾನರ್ಜಿ, ಎ ರಾಜಾ, ಅರವಿಂದ್‌ ಸಾವಂತ್‌, ಸುರೇಶ್‌ ಗೋಪಿನಾಥ್‌, ಅಸಾದುದ್ದೀನ್‌ ಓವೈಸಿ ಸೇರಿ ಪ್ರತಿಪಕ್ಷಗಳು, ಆಡಳಿತ ಪಕ್ಷಗಳ 21 ಸದಸ್ಯರಿದ್ದಾರೆ.

ಏನೆಲ್ಲ ಬದಲಾವಣೆ?

ದೇಶದ ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿ ಆಸ್ತಿ ಎಂಬುದಾಗಿ ಘೋಷಿಸವ, ಅದನ್ನು ಯಾರೂ ಕೋರ್ಟ್‌ನಲ್ಲೂ ಪ್ರಶ್ನಿಸಲು ಸಾಧ್ಯವಾಗದಂತಹ ಪರಮಾಧಿಕಾರವನ್ನು ವಕ್ಫ್‌ ಕಾಯ್ದೆಯು ನೀಡಿದೆ. ಆದರೆ, ಈ ಪರಮಾಧಿಕಾರವನ್ನು ರದ್ದುಗೊಳಿಸುವುದು ಪ್ರಮುಖ ಬದಲಾವಣೆಯಾಗಿದೆ. ಇನ್ನು, ಆಯಾ ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಇಬ್ಬರು ಹೆಣ್ಣುಮಕ್ಕಳು ಕಡ್ಡಾಯವಾಗಿ ಇರುವುದು, ವಕ್ಫ್‌ ಮಂಡಳಿ ಆಸ್ತಿ ಕುರಿತು ಜಿಲ್ಲಾಧಿಕಾರಿ ತೀರ್ಮಾನ ತೆಗೆದುಕೊಳ್ಳುವುದು ಸೇರಿ ಹಲವು ಬದಲಾವಣೆ ಮಾಡಲಾಗುತ್ತದೆ.

ಅಷ್ಟೇ ಅಲ್ಲ, ಸಮಿತಿಯಲ್ಲಿ ಒಬ್ಬ ಕೇಂದ್ರ ಸಚಿವ, ಮೂವರು ಸಂಸದರು, ಮೂರು ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಮೂವರು ಮುಸ್ಲಿಂ ಕಾನೂನು ತಜ್ಞರು ಇರಲಿದ್ದಾರೆ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ಇಬ್ಬರು ಜಡ್ಜ್‌ಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸುವ ಮೊದಲು ನೋಟಿಸ್‌ ನೀಡಬೇಕು. ಆ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ವಕ್ಫ್‌ ಆಸ್ತಿಗಳ ಸರ್ವೇಯನ್ನು ಜಿಲ್ಲಾಧಿಕಾರಿ ಎದುರು ಮಾಡಬೇಕು. ಮಂಡಳಿಯ ನಿರ್ಧಾರ ಪ್ರಶ್ನಿಸಿ 90 ದಿನಗಳಲ್ಲಿ ಆಸ್ತಿಯ ಮಾಲೀಕರು ಅಥವಾ ಸಂಬಂಧಪಟ್ಟವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಅಧಿಕಾರ ನೀಡಲಾಗಿದೆ.

ಆಸ್ತಿಯ ಬದಲು ಹಣಕಾಸು ನೆರವು ಬಂದರೆ, ಆ ಹಣವನ್ನು ಕೇಂದ್ರ ಸರ್ಕಾರ ಸಲಹೆಯಂತೆ ವಿಧವೆಯರು, ವಿಚ್ಛೇದನ ಪಡೆದವರು ಹಾಗೂ ಅನಾಥರ ಕಲ್ಯಾಣಕ್ಕೆ ವಿನಿಯೋಗಿಸಬೇಕು. ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿರುವ ಬೋಹ್ರಾ ಹಾಗೂ ಆಗಾಖಾನಿ ಸಮುದಾಯದವರಿಗೆ ಪ್ರತ್ಯೇಕ ಮಂಡಳಿಸಲು ಪ್ರಸ್ತಾಪಿಸಲಾಗಿದೆ.

ಏನಿದು ವಕ್ಫ್‌ ಕಾಯ್ದೆ?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ಇದನ್ನೂ ಓದಿ: Waqf Act: ಪುರಸಭೆ ಕಚೇರಿಯನ್ನೇ ನುಂಗಿದ ವಕ್ಫ್‌ ಮಂಡಳಿ; ಆಸ್ತಿ ಕಬಳಿಕೆ ಬಣ್ಣ ಬಯಲು ಮಾಡಿದ ಕೇಂದ್ರ ಸಚಿವ!

Exit mobile version