Site icon Vistara News

Arvind Kejriwal: ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 15 ದಿನ ಜೈಲು ಫಿಕ್ಸ್!

arvind kejriwal

Delhi Excise Policy Case: court sends CM Arvind Kejriwal to judicial custody till April 15

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರನ್ನು ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ (Rose Avenue Court) ಆದೇಶ ಹೊರಡಿಸಿದೆ. ಇದರಿಂದಾಗಿ ಇನ್ನೂ 15 ದಿನ ಕೇಜ್ರಿವಾಲ್‌ ಅವರು ಕಸ್ಟಡಿಯಲ್ಲಿಯೇ ಕಾಲ ಕಳೆಯಬೇಕಾಗಿದೆ. ಕೋರ್ಟ್‌ ಆದೇಶದ ಬಳಿಕ ಅರವಿಂದ್‌ ಕೇಜ್ರಿವಾಲ್‌ ಅವರನ್ನು ತಿಹಾರ ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಅವರನ್ನು ಸೋಮವಾರ (ಏಪ್ರಿಲ್‌ 1) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನೂರಾರು ಕೋಟಿ ರೂ. ಹಗರಣದ ಕುರಿತು ಇನ್ನೂ ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಿದರು. ಇ.ಡಿ ಪರ ವಕೀಲರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯವು ಅವರಿಗೆ ಏಪ್ರಿಲ್‌ 15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತು. ಇದರಿಂದಾಗಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಭಾನುವಾರ (ಮಾರ್ಚ್‌ 31) ದೆಹಲಿಯಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿವೆ.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: Sunita Kejriwal: ಸುನೀತಾ ಕೇಜ್ರಿವಾಲ್‌ ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದ ಕಲ್ಪನಾ ಸೊರೆನ್ ಹೇಳಿದ್ದೇನು?

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version