Site icon Vistara News

Election Results 2024: ಜೈಲಿನಿಂದಲೇ ಕಣಕ್ಕಿಳಿದಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಭಾರೀ ಮುನ್ನಡೆ

Election Results 2024

ಪಂಜಾಬ್‌: ಜೈಲಿನಿಂದಲೇ ಕಣಕ್ಕಿಳಿದಿರುವ ಖಲಿಸ್ತಾನಿ ಪರ ಬೋಧಕ (Pro-Khalistani preacher) ಅಮೃತ್‌ಪಾಲ್‌ ಸಿಂಗ್ (Amrit pal Singh) ಮುನ್ನಡೆ ಸಾಧಿಸಿದ್ದು, 59,421 ಮತಗಳಅಂತರ ಕಾಯ್ದುಕೊಂಡಿದ್ದಾನೆ. ಈ ಬಾರಿ ಲೋಕಸಭಾ ಚುನಾವಣೆ (Lok Sabha Election 2024)ಯಲ್ಲಿ ಪಂಜಾಬ್‌ನ ಖದೂರ್ ಸಾಹಿಬ್ (Khadoor Sahib) ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಮೃತ್‌ ಪಾಲ್‌ ಸಿಂಗ್‌ ಆರಂಭಿಕ ಹಂತದಲ್ಲೇ ಮುನ್ನಡೆ ಸಿಕ್ಕಿದೆ(Election Results 2024). ಇನ್ನು ಇಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಕುಲ್ಬೀರ್‌ ಸಿಂಗ್‌ ಜೀರಾ 32598 ಮತಗಳನ್ನು ಪಡೆದಿದ್ದಾರೆ.

ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಆರು ತಿಂಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ.

ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

2022ರ ಸೆಪ್ಟೆಂಬರ್‌ 25ರಂದು ಆನಂದ್‌ಪುರ ಸಾಹಿಬ್‌ನಲ್ಲಿ ನಡೆದ ಸಿಖ್‌ ಧರ್ಮದ ಸಾಂಪ್ರದಾಯಿಕ ಬ್ಯಾಪ್ಟಿಸಂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮೃತ್‌ಪಾಲ್‌, ʼಅಮೃತಧಾರಿ ಸಿಖ್‌ʼ ಎನಿಸಿದ. ಈ ಕಾರ್ಯಕ್ರಮಕ್ಕೆ ಹರಿದುಬಂದ ಜನಸಾಗರ ನೋಡಿ ಪಂಜಾಬ್‌ ಅವಾಕ್ಕಾಯಿತು. ಇದಾದ ನಾಲ್ಕು ದಿನಗಳ ನಂತರ ಸೆ. 29ರಂದು ʼದಸ್ತರ್‌ ಬಂದಿʼ ಕಾರ್ಯಕ್ರಮ ನಡೆಯಿತು. ಇದಕ್ಕೂ ದಾಖಲೆ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಇದು ನಡೆದುದು ರೋಡೆ ಗ್ರಾಮದಲ್ಲಿ. ಅದು ಖಲಿಸ್ತಾನ್‌ ಚಳವಳಿಯ ರಾಕ್ಷಸ ಭಯೋತ್ಪಾದಕನಾಗಿದ್ದ ಜರ್ನೈಲ್‌ ಸಿಂಗ್‌ ಭಿಂದ್ರಾನ್‌ವಾಲೆಯ ಜನ್ಮಸ್ಥಳ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದಾನೆ. ಹಿಂದು ರಾಷ್ಟ್ರ ವಾದ ಸರಿ ಎಂದಾದರೆ ಖಲಿಸ್ತಾನ್‌ ಯಾಕೆ ತಪ್ಪು ಎಂದು ಪ್ರಶ್ನಿಸುತ್ತಾನೆ. ಇವನು ಪಾರಂಪರಿಕ ಧಾರ್ಮಿಕ ತರಬೇತಿ ಪಡೆದು ಮುಖ್ಯಸ್ಥನಾಗಿಲ್ಲ. ರಾಜಕೀಯ ವಿಚಾರದಿಂದ ಆರಂಭಿಸಿ ಮತೀಯ ಗುರು ಎನಿಸಿಕೊಂಡವನು. ಧಾರ್ಮಿಕ ವಿಷಯಗಳನ್ನು ಉಲ್ಲೇಖಿಸುವಾಗ ಈತನ ತಿಳಿವಳಿಕೆಯ ಪೊಳ್ಳುತನ ಎದ್ದು ಕಾಣಿಸುತ್ತದೆ. ಆದರೂ ಈತನ ಕಠೋರ ರಾಜಕೀಯ ನಿಲುವುಗಳಿಂದಾಗಿ ಅಭಿಮಾನಿಗಳು ಈತನನ್ನು ಸುತ್ತುವರಿಯುತ್ತಾರೆ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ.

ಇದನ್ನೂ ಓದಿ:Election results 2024: ದಿಲ್ಲಿಯಲ್ಲಿ ಈ ಬಾರಿಯೂ ಕ್ಲೀನ್‌ ಸ್ವೀಪ್‌ ಮಾಡುತ್ತಾ ಬಿಜೆಪಿ? ಏಳೂ ಕ್ಷೇತ್ರಗಳಲ್ಲಿ ಮುನ್ನಡೆ

Exit mobile version