ನವದೆಹಲಿ: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ (Hijab Row) ಕುರಿತು ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ಇಬ್ಬರ ನ್ಯಾಯಮೂರ್ತಿಗಳ ನಡುವೆ ಈ ಬಗ್ಗೆ ಒಮ್ಮತ ಅಭಿಪ್ರಾಯ ಮೂಡಿಲ್ಲ. ಏತನ್ಮಧ್ಯೆ, ಇಡೀ ಪ್ರಕರಣವನ್ನು ಪೂರ್ಣ ಪೀಠ ಅಥವಾ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗುವ ಸಾಧ್ಯತೆ ಇದೆ.
ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿದ್ದ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮುಸ್ಲಿಮ್ ಬಾಲಕಿಯರು ಹಾಗೂ ಕೆಲವು ಸಂಘಟನೆಗಳು ಅರ್ಜಿ ಸಲ್ಲಿದ್ದವು. ಈ ಕುರಿತು ಸುಪ್ರೀಂ ಕೋರ್ಟ್ ಸತತ ವಿಚಾರಣೆ ನಡೆಸಿ ಅಕ್ಟೋಬರ್ 13ರಂದು ತನ್ನ ತೀರ್ಪು ಪ್ರಕಟಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಆರಂಭವಾಗಿ, ದೇಶಾದ್ಯಂತ ಈ ಪ್ರಕರಣವು ಸುದ್ದಿಯಾಗಿತ್ತು. ಈ ಪ್ರಕರಣವು ದೇಶ ಮಾತ್ರವಲ್ಲದೇ ವಿದೇಶಿ ಮಾಧ್ಯಮಗಳಲ್ಲೂ ಸುದ್ದಿಯಾಗಿತ್ತು.
ಏನಾಗಿತ್ತು?
ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜ್ಗಳು, ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು.
ಬಳಿಕ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಸತತವಾಗಿ ವಿಚಾರಣೆ ನಡೆಸಿ, ತೀರ್ಪನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು. ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಿದೆ. ಕರ್ನಾಟಕ ಸರ್ಕಾರವು ಫೆಬ್ರವರಿ 5ರಂದು ಆದೇಶ ಹೊರಡಿಸಿ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು.
ಹಲವು ದಿನಗಳವರೆಗೆ ಸುಪ್ರೀಂ ಕೋರ್ಟ್ ಹಿಜಾಬ್ ವಿಚಾರಣೆ ನಡೆಸಿತ್ತು. ಹಿಜಾಬ್ ಪ್ರಕರಣ ತೀವ್ರವಾಗುವುದರ ಹಿಂದೆ ಪಿಎಫ್ಐ ಕೈವಾಡ ಇದೆ ಎಂದು ಕರ್ನಾಟಕ ಸರ್ಕಾರ ತಿಳಿಸಿತ್ತು. ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸುವುದು ಮೂಲ ಹಕ್ಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.