Site icon Vistara News

World Malaria Day: ವಿಶ್ವ ಮಲೇರಿಯಾ ಜಾಗೃತಿ ದಿನ; ರೋಗ ತಡೆಗೆ ಸೊಳ್ಳೆ ನಿರ್ಮೂಲನೆ ಅಗತ್ಯ

World Malaria Day, Mosquito eradication is essential to prevent the disease

ತ್ತೀಚೆಗಷ್ಟೇ ಹೆಸರು ಕೇಳಿ ಬರುತ್ತಿರುವ ಕೋವಿಡ್‌ ಮತ್ತದರ ಸಂಬಂಧಿ ವೈರಸ್‌ಗಳ ವಿಷಯ ಬಿಡಿ, ಶತಮಾನಗಳಿಂದ ಮನುಕುಲವನ್ನು ಕಾಡಿಸುತ್ತಿರುವ ಮಲೇರಿಯಾ ವೈರಸ್‌ನಿಂದ ಮುಕ್ತವಾಗುವುದಕ್ಕೆ ನಾವಿನ್ನೂ ಹೆಣಗುತ್ತಲೇ ಇದ್ದೇವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ೨೦೨೧ರಲ್ಲಿ ವಿಶ್ವದೆಲ್ಲೆಡೆಯಿಂದ ೨೧.೭ ಕೋಟಿ ಪ್ರಕರಣಗಳು ವರದಿಯಾಗಿವೆ ಮತ್ತು ೬ ಲಕ್ಷಕ್ಕೂ ಹೆಚ್ಚು ಮಂದಿ ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರಲ್ಲಿ ಹೆಚ್ಚಿನ ಪ್ರಕರಣಗಳು ಆಫ್ರಿಕಾ ದೇಶಗಳಲ್ಲಿ ಸಂಭವಿಸಿದ್ದರೂ, ಭಾರತ ಈ ನಿಟ್ಟಿನಲ್ಲಿ ಪ್ರಬಲ ಸ್ಪರ್ಧೆಯನ್ನು ಒಡ್ಡುತ್ತಿದೆ. ವರ್ಷಂಪ್ರತಿ ೨೦ ಸಾವಿರ ಮಂದಿ ಮಲೇರಿಯಾ ರೋಗಕ್ಕೆ ಭಾರತದಲ್ಲಿ ಜೀವ ತೆರುತ್ತಿದ್ದಾರೆ. ಇವೆಲ್ಲ ಕಾರಣಗಳಿಂದಾಗಿ ಎಪ್ರಿಲ್‌ ೨೫ರಂದು ಆಚರಿಸಲಾಗುವ ವಿಶ್ವ ಮಲೇರಿಯಾ ಜಾಗೃತಿ ದಿನ (World Malaria Day) ಮಹತ್ವ ಪಡೆದಿದೆ.

ಮಲೇರಿಯಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಮೇಲುಗೈ ಸಾಧಿಸಬೇಕೆಂಬ ಉದ್ದೇಶದಿಂದ, ಈ ರೋಗದ ಕುರಿತಾದ ತಿಳುವಳಿಕೆ, ಬಾರದಂತೆ ಜಾಗೃತಿ ಮತ್ತು ಬಂದಾಗ ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಕುರಿತು ಅರಿವನ್ನು ಮೂಡಿಸುವ ಉದ್ದೇಶದಿಂದ- “ಮಲೇರಿಯಾವನ್ನು ಶೂನ್ಯಕ್ಕಿಳಿಸುವ ಸಮಯವಿದು: ಹೂಡಿ, ಆವಿಷ್ಕರಿಸಿ, ಅನುಷ್ಠಾನಗೊಳಿಸಿ” ಎಂಬ ಘೋಷವಾಕ್ಯವನ್ನು ಈ ಸಾಲಿಗೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದೆ (World Malaria Day). ಹಾಗಾಗಿ ರೋಗದ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಹಂಚಿಕೊಳ್ಳುವ ಸಮಯವಿದು.

ಮಲೇರಿಯಾ ರೋಗಕ್ಕೆ ಕಾರಣವೇನು?

ಪ್ಲಾಸ್ಮೋರಿಯಂ ಎಂಬ ಏಕಕೋಶ ಜೀವಿಯಿಂದ ಬರುವ ರೋಗವಿದು. ಈ ಜೀವಿಯ ಪ್ರಸರಣಕ್ಕೆ ಪೂರಕವಾಗಿ ಒದಗುವುದು ಅನಾಫಿಲಿಸ್‌ ಸೊಳ್ಳೆಗಳು. ಕಚ್ಚುವ ಸೊಳ್ಳೆಗಳ ಮೂಲಕ ಮಾನವದ ದೇಹವನ್ನು ಪ್ರವೇಶಿಸುವ ರೋಗಾಣು, ಯಕೃತ್‌ನಲ್ಲಿ ಸಂತಾನಾಭಿವೃದ್ಧಿ ನಡೆಸುತ್ತದೆ. ರೋಗಾಣುಗಳು ಸಾಕಷ್ಟು ವೃದ್ಧಿಯಾಗಿ, ಸೋಂಕು ಪಸರಿಸುವ ಹೊತ್ತಿನಲ್ಲಿ ರೋಗ ಲಕ್ಷಣಗಳು ಕಾಣಲು ಆರಂಭಿಸುತ್ತವೆ. ಇದಕ್ಕೆ ಸಾಮಾನ್ಯವಾಗಿ ಸೋಂಕು ತಗುಲಿದ ನಂತರ, ೧೦ ದಿನಗಳಿಂದ ನಾಲ್ಕು ವಾರಗಳವರೆಗೂ ಬೇಕಾಗುತ್ತದೆ.

ಮಲೇರಿಯಾ ಲಕ್ಷಣಗಳೇನು?

ತೀವ್ರ ಜ್ವರ, ಚಳಿನಡುಕ, ತಲೆನೋವು, ಮೈಕೈ ನೋವು, ವಾಂತಿ, ವಿಪರೀತ ಸುಸ್ತು- ಇವು ಸಾಮಾನ್ಯವಾಗಿ ಮಲೇರಿಯ ರೋಗಿಯಲ್ಲಿ ಕಂಡುಬರುವ ಲಕ್ಷಣಗಳು. ಮಕ್ಕಳಲ್ಲಿ ಇವಿಷ್ಟರ ಜೊತೆಗೆ ಕೆಮ್ಮು ಮತ್ತು ಡಯರಿಯ ಸಹ ಬರಬಹುದು. ಮಲೇರಿಯದಿಂದ ಕಾಮಾಲೆ (ಜಾಂಡೀಸ್)‌ ಮತ್ತು ರಕ್ತಹೀನತೆ (ಅನಿಮಿಯ) ಸಹ ಬರಬಹುದು. ಇಂಥ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ರಕ್ತಪರೀಕ್ಷೆ ಮಾಡಿಸಲು ವೈದ್ಯರು ಸೂಚಿಸುತ್ತಾರೆ. ತ್ವರಿತವಾಗಿ ಚಿಕಿತ್ಸೆ ದೊರೆಯದಿದ್ದರೆ, ಯಕೃತ್‌ ಸಮಸ್ಯೆ, ಶ್ವಾಸಕೋಶಗಳಲ್ಲಿ ನೀರು ತುಂಬುವುದು, ನ್ಯುಮೋನಿಯ, ದೃಷ್ಟಿಯ ತೊಂದರೆ, ಕಿಡ್ನಿ ವೈಫಲ್ಯ- ಹೀಗೆ ಹಲವು ರೀತಿಯಲ್ಲಿ ಆರೋಗ್ಯ ಕೈಕೊಟ್ಟು ಸಾವು ವಕ್ಕರಿಸಬಹುದು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೆ, ಮಲೇರಿಯಾ ಹೆಚ್ಚಳ: ಪಾರಾಗಲು ಇಲ್ಲಿದೆ ಉಪಾಯ

ಮಲೇರಿಯಾ ತಡೆ ಹೇಗೆ?

ಮೊದಲನೇದಾಗಿ, ವೃದ್ಧಿಯಾಗುವ ಸೊಳ್ಳೆಗಳನ್ನು ನಾಶ ಮಾಡಲೇಬೇಕು. ಎಲ್ಲೆಲ್ಲಿ ನೀರು ನಿಂತಿದೆ ಅವೆಲ್ಲಕ್ಕೂ ಕೀಟನಾಶಕ ಸಿಂಪಡಿಸಿ ತುರ್ತಾಗಿ ಸೊಳ್ಳೆಗಳ ಪ್ರಸರಣ ನಿಲ್ಲಿಸಬೇಕು. ಸೊಳ್ಳೆಗಳ ಹೆಚ್ಚಳ ತಡೆಯುವುದು ಈ ರೋಗ ನಿವಾರಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಮಾತ್ರವಲ್ಲ, ಸೊಳ್ಳೆಗಳು ಕಚ್ಚದಂತೆ ರೆಪೆಲ್ಲೆಂಟ್‌ಗಳನ್ನು ಬಳಸುವುದು ಅಗತ್ಯ. ಕಿಟಕಿಗಳಿಗೆ ಸೊಳ್ಳೆ ಪ್ರವೇಶಿಸದಂಥ ಪರದೆಗಳು ಮತ್ತು ರಾತ್ರಿ ಮಲಗುವಾಗಲೂ ಪರದೆ ಬಳಸುವುದು ಸೂಕ್ತ. ಮಲೇರಿಯ ನಿರೋಧಕತೆ ಉದ್ದೀಪಿಸುವಂಥ ಲಸಿಕೆಗಳು ಮಕ್ಕಳಿಗಾಗಿ ಲಭ್ಯವಿದೆ. ಈ ಬಗ್ಗೆ ವೈದ್ಯರಲ್ಲಿ ಮಾತಾಡುವುದು ಕ್ಷೇಮ.

Exit mobile version