Site icon Vistara News

DK Shivakumar : ಬೆಂಗಳೂರು ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಚಳಿ ಬಿಡಿಸಿದ ಡಿ.ಕೆ. ಶಿವಕುಮಾರ್!

DK shivakumar in KDP Meeting

ಬೆಂಗಳೂರು: ಸರ್ಕಾರಕ್ಕೆ (Karnataka Government) ಒಳ್ಳೇ ಹೆಸರು ತರುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಬೇರೆ ಜಾಗ ನೋಡಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅಲ್ಲದೆ, ಕೆಡಿಪಿ ಸಭೆಯಲ್ಲಿ (KDP Meeting) ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬನಶಂಕರಿಯ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2023-24 ಮೊದಲ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರತಿ ಹಳ್ಳಿ, ಪ್ರತಿ ಪಂಚಾಯಿತಿಯಲ್ಲೂ ಕುಡಿಯುವ ನೀರಿನ ಸ್ಥಿತಿಗತಿ ಅರಿತು ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಬೇಕು. ಮಳೆ ಕೊರತೆಯಿಂದ ಕುಡಿಯುವ ನೀರಿನ (Drinking Water) ಸಮಸ್ಯೆ ಉಂಟಾಗಿದ್ದು, ಇದರ ನಿವಾರಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೀರಿಗಾಗಿ ನಾವು ಬಡಿದಾಡುತ್ತಾ ಇದ್ದೇವೆ. ಆದರೆ, ನಿಮ್ಮ ಬಳಿ ಮಾಹಿತಿಯೇ ಇಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಎಷ್ಟು ಶುದ್ಧ ನೀರು ಪೂರೈಕೆ ಘಟಕಗಳು (RO) ಇವೆ? ನಿತ್ಯ ಎಷ್ಟು ನೀರು ಪೂರೈಕೆ ಆಗುತ್ತಿದೆ? ಎಷ್ಟು ಜನ ಬಳಸುತ್ತಿದ್ದಾರೆ? ಎಂಬ ವಿವರವೇ ನಿಮ್ಮ ಬಳಿ ಇಲ್ಲ. ಸಭೆಗೆ ಬರುವ ಮುನ್ನ ಸಿದ್ಧತೆಯನ್ನೇ ಮಾಡಿಕೊಂಡು ಬಂದಿಲ್ಲ. ಸಭೆಯ ಗಂಭೀರತೆಯೇ ನಿಮಗೆ ಅರ್ಥವಾಗಿಲ್ಲ ಎಂದು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.

ಇದನ್ನೂ ಓದಿ: Cauvery Dispute : ಆಗ ಪಾದಯಾತ್ರೆ ಮಾಡಿದ್ರಲ್ಲ, ಮೇಕೆದಾಟು ಯೋಜನೆ ತಕ್ಷಣ ಜಾರಿ ಮಾಡಿ; ಸರ್ಕಾರಕ್ಕೆ ಬಿಜೆಪಿ ಸವಾಲು

ಪ್ರತಿ ಕಚೇರಿಯ ಕೆಲಸ ನನಗೆ ಗೊತ್ತು

ಪ್ರತಿ ಕಚೇರಿಯಲ್ಲಿ ಏನು ಕೆಲಸ ನಡೆಯುತ್ತದೆ ಎನ್ನುವ ವರದಿ ಪಡೆದುಕೊಳ್ಳುವ ವ್ಯವಸ್ಥೆ ನನ್ನ ಬಳಿ ಇದೆ. ನಾನು ಅದನ್ನು ಬಿಚ್ಚಿ ನಿಮ್ಮ ಮರ್ಯಾದೆ ತೆಗೆದರೆ, ಮಾಧ್ಯಮದವರು ನಿಮ್ಮ ಜನ್ಮ ಜಾಲಾಡಿ ಬಿಡುತ್ತಾರೆ. ಆದರೆ, ಆ ಕೆಲಸವನ್ನು ನಾನು ಮಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ಆಸಕ್ತಿ ಇರದಿದ್ದರೆ ಜಾಗ ಖಾಲಿ ಮಾಡಿ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳ ಸಾವು-ನೋವು, ಡೆಂಗ್ಯೂ ಜ್ವರ, ಮಳೆ ಕೊರತೆ, ಬರ, ಕುಡಿಯುವ ನೀರು ಮತ್ತಿತರ ವಿಚಾರಗಳ ಬಗ್ಗೆ ಒಬ್ಬರೂ ವರದಿ ಕೊಟ್ಟಿಲ್ಲ. ಅಧಿಕಾರಿಗಳೇ ನಿಮಗೆ ಹೇಳೋರು, ಕೇಳೋರು ಯಾರೂ ಇಲ್ಲ ಅಂತ ತಿಳಿದುಕೊಂಡಿದ್ದೀರಾ? ನಿಮಗೆ ಕೆಲಸ ಮಾಡೋ ಆಸಕ್ತಿ ಇಲ್ಲ ಅಂದ್ರೆ ಜಾಗ ಖಾಲಿ ಮಾಡಿ. ನಿಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ದೀರಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಮುಖ ಆಗುಹೋಗುಗಳ ಬಗ್ಗೆ ವರದಿ ಕೊಡಬೇಕೆಂಬ ಕನಿಷ್ಠ ಸೌಜನ್ಯ ನಿಮಗೆ ಇಲ್ಲವೇ? ಎಂದು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

ಜನರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ

ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರ ಕೆಲಸಗಳನ್ನು ಸಮಾನವಾಗಿ ಮಾಡಿ. ಜನರು ಸರ್ಕಾರಿ ಕಚೇರಿಗಳಿಗೆ ತಮ್ಮ ಕಷ್ಟಗಳನ್ನು ಬಗೆಹರಿಸಿಕೊಳ್ಳಲು ಬರುತ್ತಾರೆ. ಅವರ ಕೆಲಸಗಳನ್ನು ವಿಳಂಬವಿಲ್ಲದೆ ಸೂಕ್ತ ಕಾಲದಲ್ಲಿ ಮಾಡಿಕೊಡಬೇಕು ಎಂದು ಡಿ.ಕೆ. ಶಿವಕುಮಾರ್ ತಾಕೀತು ಮಾಡಿದರು.

ಕಂದಾಯ ವಿಭಾಗದಲ್ಲಿನ ಮನೆ, ಜಮೀನು ಖಾತೆ ಮಾಡಿಕೊಡಲು ಕಿರುಕುಳ ಸೇರಿದಂತೆ ಕಂದಾಯ ನಿವೇಶನಗಳ ಹೆಚ್ಚಳಕ್ಕೆ ಅಧಿಕಾರಗಳ ಕುಮ್ಮಕ್ಕು ಕಾರಣ ಎಂದು ತಿಳಿದುಬಂದಿದೆ. ಹೊಸ ಸರ್ಕಾರ ಹೊಸ ಆಶಯಗಳೊಟ್ಟಿಗೆ ಕೆಲಸ ಮಾಡುತ್ತಿದೆ. ನೀವುಗಳು ಅದರಂತೆ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಸೂಚಿಸಿದರು.

110 ಹಳ್ಳಿಗಳ ಅತಂತ್ರ ಸ್ಥಿತಿ ಬಗ್ಗೆ ಆಕ್ಷೇಪ

ಬಿಡಿಎ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸಲು ಕಷ್ಟಪಡುತ್ತಿದ್ದರೆ, ಜಿಲ್ಲಾ ಪಂಚಾಯಿತಿ ಹಾಗೂ ಇತರೇ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅವ್ಯವಸ್ಥಿತ ನಗರವನ್ನಾಗಿ ಬೆಳೆಯಲು ಕಾರಣಕರ್ತರಾಗುತ್ತಿದ್ದೀರಿ. ಹೊಸದಾಗಿ 110 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ. ಅವುಗಳು ಇನ್ನೂ ಅಭಿವೃದ್ಧಿಯಾಗದೆ ಅತಂತ್ರ ಸ್ಥಿತಿಯಲ್ಲಿವೆ ಎಂದು ಡಿ.ಕೆ. ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಸ್ಥಳೀಯರು ಶೇ. 30 ರಷ್ಟಿದ್ದರೆ ವಲಸಿಗರು ಶೇ. 70ರಷ್ಟಿದ್ದಾರೆ. ಇವರ ಮೇಲೆ ಪ್ರತಿ ಸಂದರ್ಭದಲ್ಲಿ ಶೋಷಣೆ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಜನರ ಮೇಲೆ ಎಲ್ಲ ರೀತಿಯ ಕಿರುಕುಳ ನಿಲ್ಲಬೇಕು ಎಂದು ಡಿ.ಕೆ. ಶಿವಕುಮಾರ್ ಖಡಕ್‌ ಎಚ್ಚರಿಕೆಯನ್ನು ನೀಡಿದರು.

ಕಸ ವಿಲೇವಾರಿ ಸಮಸ್ಯೆ, ರಸ್ತೆಬದಿಯಲ್ಲೇ ಕಸ ಸುರಿಯುತ್ತಿರುವುದು, ಎಲ್ಲೆಂದರಲ್ಲಿ ವೈದ್ಯಕೀಯ ತ್ಯಾಜ್ಯ ಸುರಿಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜತೆಗೆ ಈ ಬಗ್ಗೆ ಜಿಲ್ಲಾಧಿಕಾರಿಗಳು, ಸಿಇಒ, ಪೊಲೀಸ್ ಅಧಿಕಾರಿಗಳು, ಆರ್‌ಟಿಒ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ತಾಲೂಕು ಪಂಚಾಯಿತಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಂದಾಯ ಸೇರಿದಂತೆ ಕ್ಷೇತ್ರ ಅಭಿವೃದ್ಧಿ ವಿಚಾರವಾಗಿ ಯಾವ ಕ್ರಮಗಳನ್ನು ಕೈಗೊಂಡಿದ್ದೀರಿ ಎನ್ನುವುದನ್ನು ವಿವರಿಸಬೇಕಾಗಿ ತಾಕೀತು ಮಾಡಿದರು.

ಅಮಾನತು ಆದೇಶ ಕೊಟ್ಟ ತಕ್ಷಣ ಸಭೆಗೆ ಓಡಿ ಬಂದ ಅಧಿಕಾರಿ!

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆದೇಶ ನೀಡಿದರು.

ಸಭೆಯ ಆರಂಭದಲ್ಲಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಎಲ್ಲಿ ಎಂದು ಕೇಳಿದರು. ಅವರು ಹೊಸಕೋಟೆ ಜನತಾ ದರ್ಶನ ಸಭೆಗೆ ಹೋಗಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದರು. ಹಾಗಾದರೆ ಈ ಮೀಟಿಂಗ್ ಯಾಕಾಗಿ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಳಿದರು.

ತಕ್ಷಣವೇ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಸಿಇಒ ಕಾಂತರಾಜ್ ಅವರಿಗೆ ಸೂಚನೆ ನೀಡಿದರು. ಕೋರ್ಟ್ ವಿಚಾರ ಬಿಟ್ಟು ಬೇರೆ ಕಾರಣಗಳನ್ನು ನೀಡಿ ಈ ಸಭೆಗೆ ಗೈರಾಗಿರುವ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಿ, ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಇಒ ಅವರಿಗೆ ಆದೇಶ ನೀಡಿದರು.

ಸಮಗ್ರ ವರದಿ ನೀಡಲು ಸೂಚನೆ

ಡಿಸಿಎಂ ಡಿ.ಕೆ. ಶಿವಕುಮಾರ್ ಆದೇಶದ ವಿಷಯ ತಿಳಿಯುತ್ತಿದ್ದಂತೆ ಪಿಡಬ್ಲ್ಯೂಡಿ (PWD) ಅಧಿಕಾರಿ (ಇಇ) ಸಭೆಗೆ ಓಡೋಡಿ ಬಂದರು. ಹೊಸಕೋಟೆ ಜನತಾ ದರ್ಶನ ಸಭೆಗೆ ಹೋಗಿದ್ದೆ ಎಂದರು. ಆದ್ಯತೆ ಕೆಲಸ ಯಾವುದೆಂದು ನಿಮಗೆ ಗೊತ್ತಿರಬೇಕು. ಡಿಸಿಎಂ ಕೆಡಿಪಿ ಸಭೆ ಕರೆದಿದ್ದಾರೆ ಎಂದು ಶಾಸಕರಿಗೆ ಹೇಳಿ ಬರಬಹುದಿತ್ತಲ್ಲ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: CM Siddaramaiah : ಪ್ರವಾಸೋದ್ಯಮ ಬೆಳೆದರೆ ರಾಜ್ಯದ ಆರ್ಥಿಕ ಚೈತನ್ಯ ಹೆಚ್ಚಲಿದೆ: ಸಿಎಂ ಸಿದ್ದರಾಮಯ್ಯ

ರಸ್ತೆ ಬದಿ ಕಸ ಸುರಿಯಲು ಯಾಕೆ ಅವಕಾಶ ಮಾಡಿಕೊಟ್ಟಿದ್ದೀರಿ? ತಪ್ಪಿತಸ್ಥರ ವಿರುದ್ಧ ಕ್ರಮವಿಲ್ಲ ಯಾಕೆ ಎಂದು ಪ್ರಶ್ನಿಸಿದರಲ್ಲದೆ ಕಸ ವಿಲೇವಾರಿ ಸಂಬಂಧ ಸಮಗ್ರ ವರದಿ ನೀಡುವಂತೆ ಸೂಚಿಸಿದರು.

Exit mobile version