Site icon Vistara News

ಗುಜರಾತ್‍ನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು: ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಎಂದ ಸಚಿವ ನಿರಾಣಿ

Minister murugesh nirani hopes gujarat results will affect karnataka politics

ಬೆಂಗಳೂರು: ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್‍ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ನಿರಾಣಿ ವಿಶ್ಲೇಷಿಸಿದ್ದಾರೆ.

ಒಂದು ರಾಜ್ಯದಲ್ಲಿ ಸತತವಾಗಿ 7ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ. ಅಲ್ಲಿನ ಜನತೆ ಪಕ್ಷ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟು ಹಿಂದಿನ ದಾಖಲೆಗಳನ್ನು ಮುರಿದು ಇಷ್ಟು ದೊಡ್ಡ ಮಟ್ಟದಲ್ಲಿ ಜನಾದೇಶ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಾರು ಏನೇ ಹೇಳಲಿ ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಖಂಡಿತವಾಗಿ ಪರಿಣಾಮ ಬೀರಲಿದೆ. ಇಲ್ಲಿನ ಮತದಾರರು ಕೂಡ ಪ್ರಬುದ್ದರಾಗಿದ್ದು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಕೈ ಹಿಡಿಯಲಿದ್ದಾರೆ ಎಂದು ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಭಿವೃದ್ಧಿ ವೇಗ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯವಾಗಲಿದೆ. ಹೀಗಾಗಿ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ 100ಕ್ಕೆ ನೂರರಷ್ಟು ಫಲಿತಾಂಶ ಬರಲಿದೆ ಎಂದು ನಿರಾಣಿ ಅವರು ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸರಳತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದಕ್ಷ ನಾಯಕತ್ವ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಸಂಘಟನೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನಿರ್ದೇಶನ, ಕೇಂದ್ರ ಮತ್ತು ರಾಜ್ಯ ನಾಯಕರ ಮಾರ್ಗದರ್ಶನ ಮತ್ತು ಸಂಘ ಪರಿವಾರದ ನಾಯಕರ ಸಲಹೆಯಂತೆ ಪಕ್ಷವನ್ನು ಮುನ್ನಡೆಸಲಿದ್ದೇವೆ ಎಂದು ನಿರಾಣಿ ತಿಳಿಸಿದ್ದಾರೆ.

ಹಿಮಾಚಲಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಅಲ್ಲಿ ಒಂದು ಬಾರಿ ಆಡಳಿತ ನಡೆಸಿದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ. ನಾವು ಅಲ್ಲಿಯೂ ಕೂಡ ಅಧಿಕಾರಕ್ಕೆ ಬರಬಹುದೆಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ನಮಗೆ ಏಕೆ ಹಿನ್ನಡೆಯಾಗಿದೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Gujarat Election Results | ರಾಜ್ಯದಲ್ಲಿ ಬಿಜೆಪಿ 140+ ಗೆಲ್ಲಲಿದೆ: ಬಿ.ಎಸ್‌. ಯಡಿಯೂರಪ್ಪ ವಿಶ್ವಾಸ

Exit mobile version