Site icon Vistara News

Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

Prajwal Revanna Case Surrender Now Devegowda warning to Prajwal

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡ (HD Devegowda) ಅವರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಜ್ವಲ್‌ ನನ್ನ ತಾಳ್ಮೆಯನ್ನು ಪರೀಕ್ಷೆ ಮಾಡಬೇಡ. ನೀನು ಎಲ್ಲಿಯೇ ಇದ್ದರೂ ಕೂಡಲೇ ಬಾ ಎಂದು ಫರ್ಮಾನು ಹೊರಡಿಸಿದ್ದಾರೆ.

ಈ ಬಗ್ಗೆ ಮೊಮ್ಮಗ, ಸಂಸದ ಪ್ರಜ್ವಲ್‌ ರೇವಣ್ಣರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಜ್ವಲ್‌ನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ಆದರೆ, ಇದನ್ನೆಲ್ಲ ನಾನು ಈ ಹೊತ್ತಿನಲ್ಲಿ ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದ್ದಾರೆ.

ಎಚ್‌.ಡಿ. ದೇವೇಗೌಡರ ಪತ್ರದಲ್ಲೇನಿದೆ?

ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ,
ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲನ ಚಟುವಟಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ದೇವೇಗೌಡರು ಪ್ರಜ್ವಲ್‌ ಕುರಿತಾಗಿ ಬರೆದ ಪತ್ರದ ಪೂರ್ಣ ಸಾರ ಈ ಪಿಡಿಎಫ್‌ನಲ್ಲಿದೆ. ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಓದಬಹುದು.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ.

ಪ್ರಜ್ವಲ್‌ಗೆ ಎಚ್ಚರಿಕೆ

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ, ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ಇದನ್ನೂ ಓದಿ: Prajwal Revanna Case: ರಾಹುಲ್‌ ಗಾಂಧಿ ಗೆದ್ದರೂ ಸಂಸತ್‌ ಸದಸ್ಯತ್ವ ರದ್ದು ಮಾಡಲು ಜೆಡಿಎಸ್‌ ಮೆಗಾ ಪ್ಲ್ಯಾನ್‌!

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ” ಎಂದು ಎಚ್‌.ಡಿ. ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Exit mobile version