Site icon Vistara News

Congress Guarantee: ಕಾಂಗ್ರೆಸ್‌ ಗ್ಯಾರಂಟಿಗೆ ಗ್ಯಾರಂಟಿಯೇ ಇಲ್ಲ; ಕಾಂಗ್ರೆಸ್‌ ವಿರುದ್ಧ ಪ್ರಲ್ಹಾದ್‌ ಜೋಶಿ ಕಿಡಿ

Pralhad Joshi

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್‌ ಶಾಸಕ ಬಾಲಕೃಷ್ಣ (MLA Balakrishna) ಹೇಳಿಕೆಗೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸೇರಿದಂತೆ ಇನ್ನಿತರ ನಾಯಕರು ಕಾಂಗ್ರೆಸ್‌ ಸರ್ಕಾರದ (Congress Government) ವಿರುದ್ಧ ಹರಿಹಾಯ್ದಿದ್ದಾರೆ. ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ‌ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಪ್ರಲ್ಹಾದ್ ಜೋಶಿ ‌ಆಕ್ರೋಶವನ್ನು ಹೊರಹಾಕಿದ್ದಾರೆ.

ಪ್ರಲ್ಹಾದ್‌ ಜೋಶಿ ಪೋಸ್ಟ್‌ನಲ್ಲೇನಿದೆ?

“ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

2023ರ ವಿಧಾನಸಭಾ ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿ ಮತದಾರರನ್ನು ಸೆಳೆದಿದ್ದ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಯಲ್ಲಿ ಮತ ನೀಡದಿದ್ದರೆ ಗ್ಯಾರಂಟಿಗಳನ್ನು ರದ್ದುಪಡಿಸುವ ಬೆದರಿಕೆವೊಡ್ಡಿ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ನೋಡುತ್ತಿದೆ.

ಕರ್ನಾಟಕದಲ್ಲಿ ಗ್ಯಾರಂಟಿಗಳನ್ನೇ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ಗೆ ಇದೀಗ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಲೋಕಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ಶಾಸಕರು ಗ್ಯಾರಂಟಿಗಳನ್ನು ರದ್ದುಪಡಿಸುವ ಮಾತನಾಡುತ್ತಿದ್ದಾರೆ.

ಆಶ್ವಾಸನೆ ನೀಡಿದಂತೆ ಇನ್ನೂ ಸರಿಯಾಗಿ ಗ್ಯಾರಂಟಿಗಳನ್ನು ಎಲ್ಲರಿಗೂ ಪೂರೈಸಿಯೇ ಇಲ್ಲ. ಅದಾಗಲೇ ಮತದಾರರ ಮೇಲೆ ಗ್ಯಾರಂಟಿ ರದ್ದುಪಡಿಸುವ ಹೊಸ ಬೆದರಿಕೆ ತಂತ್ರ ಹೇರುತ್ತಿದೆ. ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡದೇ ಇದ್ದರೆ ಎಲ್ಲ ಗ್ಯಾರಂಟಿ ಭಾಗ್ಯಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೊಂಡಿರುವುದನ್ನ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: Guarantee Scheme: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 50 ಸಾವಿರ ರೂ. ಕೊಡಲೂ ಸರ್ಕಾರದಲ್ಲಿ ಹಣವಿಲ್ಲ?

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ತನ್ನ ಚುನಾವಣಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿ ಮುಂದಿನ ಚುನಾವಣೆಯಲ್ಲಿ ಜನತೆ ಕೈಗೆ “ಕೈ” ಕೊಡಲಿದ್ದಾರೆ” ಎಂದು ಸಚಿವ ಪ್ರಲ್ಹಾದ್‌ ಜೋಶಿ ಖಂಡಿಸಿದ್ದಾರೆ.

Exit mobile version